ಕನ್ನಡಪ್ರಭ ವಾರ್ತೆ ಚಾಮರಾಜನಗರ

ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್‌) ಕುರಿತು ಈ ಹಿಂದೆ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಈ ಪ್ರಕಾರ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆಮನೆಗೆ ಭೇಟಿ ನೀಡುವ ಕಾರ್ಯವು ಆ.17 ರವರೆಗೆ ವಿಸ್ತರಣೆಯಾಗಿದೆ.

ಈ ಹಿಂದಿನ ವೇಳಾಪಟ್ಟಿ ಪ್ರಕಾರ ಬಿಎಲ್‌ಒಗಳು ಜೂ.30ರಿಂದ ಆ.8ರವರೆಗೆ ಮನೆಮನೆಗೆ ಭೇಟಿ ನೀಡಬೇಕಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆ.17ರವರೆಗೂ ಮನೆಮನೆಗೆ ಬಿಎಲ್‌ಒಗಳು ಭೇಟಿ ನೀಡಲಿದ್ದಾರೆ. ಮತಗಟ್ಟೆಗಳ ಮರು ಸಂಯೋಜನೆಗೆ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆ.8ಕ್ಕೆ ಅವಧಿ ನಿಗದಿಯಾಗಿದ್ದು, ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆ. 17ರವರೆಗೆ ವಿಸ್ತರಿಸಲಾಗಿದೆ. ಕರಡು ಮತದಾರರ ಪಟ್ಟಿ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆ.17ರಂದು ಪ್ರಕಟವಾಗಬೇಕಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆ. 24 ರಂದು ಪ್ರಕಟವಾಗಲಿದೆ.

ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆ.17ರಿಂದ ಸೆ.16ರವರೆಗೆ ನಿಗದಿಯಾಗಿದ್ದ ದಿನಾಂಕವನ್ನು ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆ.24ರಿಂದ ಸೆ.23ರವರೆಗೆ ನಿಗದಿ ಮಾಡಲಾಗಿದೆ. ನೋಟಿಸ್ ಅವಧಿ/ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಗಾಗಿ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆ.17ರಿಂದ ಅ.15ರವರೆಗೆ ಅವಧಿ ನಿಗದಿಯಾಗಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆ. 24ರಿಂದ ಅ.22ರವರೆಗೆ ನಿಗದಿ ಮಾಡಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಈ ಹಿಂದಿನ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 19ಕ್ಕೆ ಪ್ರಕಟಿಸಬೇಕಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಅ.27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.