ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಜನಜಾಗೃತಿ ಮೂಡಿಸಲು ‘ನನ್ನ ಮತ ನನ್ನ ಹಕ್ಕು’ ಸಂಘಟನೆ, ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಹಯೋಗದಲ್ಲಿ ಭಾನುವಾರ ಇಲ್ಲಿನ ತಂಝೀಮ್ ಸಭಾಂಗಣದಲ್ಲಿ ಜನಜಾಗೃತಿ ಸಭೆ ಹಾಗೂ ಸ್ವಯಂಸೇವಕರ ತರಬೇತಿ ಕಾರ್ಯಕ್ರಮ ಆಯೋಜಿಸಿತ್ತು.

ಭಟ್ಕಳ ತಂಝೀಂ ಕಚೇರಿಯಲ್ಲಿ ಎಸ್ಐಆರ್ ಬಗ್ಗೆ ಜನಜಾಗೃತಿ ಸಭೆ

ಕನ್ನಡಪ್ರಭ ವಾರ್ತೆ ಭಟ್ಕಳ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಜನಜಾಗೃತಿ ಮೂಡಿಸಲು ‘ನನ್ನ ಮತ ನನ್ನ ಹಕ್ಕು’ ಸಂಘಟನೆ, ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಹಯೋಗದಲ್ಲಿ ಭಾನುವಾರ ಇಲ್ಲಿನ ತಂಝೀಮ್ ಸಭಾಂಗಣದಲ್ಲಿ ಜನಜಾಗೃತಿ ಸಭೆ ಹಾಗೂ ಸ್ವಯಂಸೇವಕರ ತರಬೇತಿ ಕಾರ್ಯಕ್ರಮ ಆಯೋಜಿಸಿತ್ತು.

ಸಭೆಯಲ್ಲಿ ಪಿಯುಸಿಎಲ್‌ನ ಐಶ್ವರ್ಯ ಹಾಗೂ ‘ನನ್ನ ಮತ ನನ್ನ ಹಕ್ಕು’ ಸಂಘಟನೆಯ ವಿನಯ ಶ್ರೀನಿವಾಸ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡಿದರು. ಮತದಾರರ ಮ್ಯಾಪಿಂಗ್, ಎಣಿಕೆ, ಕರಡು ಮತದಾರರ ಪಟ್ಟಿಯ ಪ್ರಕಟಣೆ, ಹಕ್ಕು-ಆಕ್ಷೇಪಣೆ ಸಲ್ಲಿಕೆ ಮತ್ತು ಅಂತಿಮ ಪಟ್ಟಿಯ ಸಿದ್ಧತೆ ಸೇರಿದಂತೆ ವಿವಿಧ ಹಂತಗಳನ್ನು ವಿವರಿಸಿದರು. ಶುದ್ಧ, ನಿಖರ ಮತ್ತು ಪಾರದರ್ಶಕ ಚುನಾವಣೆಗೆ ಸರಿಯಾದ ಮತದಾರರ ಪಟ್ಟಿಯ ಅಗತ್ಯತೆಯನ್ನು ಅವರು ಒತ್ತಿಹೇಳಿದರು.ಎಸ್‌ಐಆರ್ ಜಾರಿಯಲ್ಲಿ ಎದುರಾಗುವ ಸವಾಲುಗಳ ಬಗ್ಗೆ ಮಾತನಾಡಿದ ವಕ್ತಾರರು, ಸ್ಪಷ್ಟ ಮಾರ್ಗಸೂಚಿಗಳ ಕೊರತೆ, ದಾಖಲೆ ಸಮಸ್ಯೆಗಳು ಹಾಗೂ ಮಹಿಳೆಯರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಹಿಂದುಳಿದ ವರ್ಗಗಳು ಎದುರಿಸುವ ತೊಂದರೆಗಳ ಬಗ್ಗೆ ಗಮನಸೆಳೆದರು. ಅರ್ಹ ಮತದಾರರು ಮತಪಟ್ಟಿಯಿಂದ ಹೊರಗುಳಿಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು.

ಎಸ್‌ಐಆರ್ ಪ್ರಕ್ರಿಯೆ ಮೂಲಕ ಕೆಲವು ಸಮುದಾಯಗಳನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದರು. ಲಕ್ಷಾಂತರ ಮತದಾರರನ್ನು ಮತಪಟ್ಟಿಯಿಂದ ಹೊರಗಿಟ್ಟು ಅವರನ್ನು ನಾಗರಿಕರಲ್ಲ ಎಂಬ ರೀತಿಯಲ್ಲಿ ತೋರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

‘ನನ್ನ ಮತ ನನ್ನ ಹಕ್ಕು’ ಸಂಘಟನೆಯಿಂದ ರಾಜ್ಯದಾದ್ಯಂತ ಜನಜಾಗೃತಿ ಸಭೆ ಆಯೋಜಿಸಿ, ಎಲ್ಲಾ ಸಮುದಾಯಗಳ ಅರ್ಹ ಮತದಾರರ ಹೆಸರುಗಳನ್ನು ಮತಪಟ್ಟಿಯಲ್ಲಿ ಸೇರಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಸಹಾಯ ಕೇಂದ್ರಗಳನ್ನು ತೆರೆಯುವ ಮೂಲಕ ಜನರಿಗೆ ಮಾರ್ಗದರ್ಶನ ನೀಡುವುದು, ಬೂತ್ ಮಟ್ಟದಲ್ಲಿ ಸ್ವಯಂಸೇವಕರನ್ನು ನೇಮಿಸಿ ಒಬ್ಬರೂ ಮತದಾರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಉದ್ದೇಶವಾಗಿದೆ ಎಂದರು.

ಎಸ್‌ಐಆರ್ ವಿರುದ್ಧ ಏ.15ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ಸ್ವಾಗತಿಸಿದರು. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಯಾಸೀನ್ ಮಲ್ಪೆ ಸೇರಿದಂತೆ ಹಲವು ಪ್ರಮುಖರು, ವಿವಿಧ ಸಂಘಸಂಸ್ಥೆಗಳ ಸದಸ್ಯರು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕ ಮುಬಶ್ಶಿರ್ ಹಲ್ಲಾರೆ ನಿರೂಪಿಸಿದರು.