ಕನ್ನಡಪ್ರಭ ವಾರ್ತೆ ಅಥಣಿ

ಕೌಶಲ್ಯ ಮತ್ತು ಜ್ಞಾನವು ದೇಶದ ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ಅಭಿವೃದ್ಧಿಗೆ ಅಡಿಪಾಯವಾಗಿದೆ. ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಯು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದೆ ಎಂದು ಪ್ರಾಧ್ಯಾಪಕ ಡಾ.ವಿವೇಕಾನಂದ ಮಾನೆ ಹೇಳಿದರು.ಇಲ್ಲಿನ ಕೆಎಲ್ಇ ಸಂಸ್ಥೆಯ ಶಿವಯೋಗಿ ಮುರುಗೇಂದ್ರ ಸ್ವಾಮೀಜಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ 2026ರ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಂತ್ರಿಕ ಮತ್ತು ವೃತ್ತಿಪರ ಕೌಶಲ್ಯಗಳು ನಿರುದ್ಯೋಗವನ್ನು ಕಡಿಮೆ ಮಾಡಿ, ಡಿಜಿಟಲ್ ಆರ್ಥಿಕತೆಯಲ್ಲಿ ಯುವಕರಿಗೆ ಉತ್ತಮ ಅವಕಾಶಗಳನ್ನು ಸೃಷ್ಟಿಸುತ್ತವೆ. ಇದು ನಾವೀನ್ಯತೆ, ಉತ್ಪಾದಕತೆ ಮತ್ತು ಜಾಗತಿಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ಪ್ರಸ್ತುತ ದಿನಗಳಲ್ಲಿ ದೇಶದ ಆರ್ಥಿಕ ಸುಧಾರಣೆಯಲ್ಲಿ ವಾಣಿಜ್ಯ ವಿಭಾಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಕಾರ್ಯಧ್ಯಕ್ಷ ಡಾ.ಮಲ್ಲಿಕಾರ್ಜುನ ಹಂಜಿ ಮಾತನಾಡಿ, ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿರುವ ಈ ಸಂಭ್ರಮ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಉತ್ಸಾಹ ಮತ್ತು ಆಸಕ್ತಿ ಹೆಚ್ಚಿಸಿದೆ. ವಿದ್ಯಾರ್ಥಿಗಳಲ್ಲಿ ಕೌಶಲ್ಯ ಆಧಾರಿತ ಶಿಕ್ಷಣವನ್ನ ಪಡೆದುಕೊಳ್ಳಲು ಈ ಕಾರ್ಯಕ್ರಮ ಪ್ರೇರಣಾದಾಯಕವಾಗಿದೆ ಎಂದರು.ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಮಹಾವಿದ್ಯಾಲಯಗಳ ಪ್ರಾಧ್ಯಾಪಕರು ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಪ್ರಶಾಂತ್ ಮಗದುಮ್ಮ ಸ್ವಾಗತಿಸಿದರು. ರೂಪಾಲಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೃಷ್ಟಿ ಬಿರಾದಾರ ಪರಿಚಯಿಸಿದರು. ಸ್ವಪ್ನ ಅವತಾಡೆ ನಿರೂಪಿಸಿದರು. ಶಿವಾನಂದ ಮೋಟಗಿ ವಂದಿಸಿದರು.