ಸೋನಿಯಾಗಾಂಧಿ ಪರ ಬಳ್ಳಾರಿಯಲ್ಲಿ ಪ್ರಚಾರ ಮಾಡಿದ್ದರು ಎಸ್ಎಂ ಕೃಷ್ಣ

| Published : Dec 11 2024, 12:47 AM IST

ಸೋನಿಯಾಗಾಂಧಿ ಪರ ಬಳ್ಳಾರಿಯಲ್ಲಿ ಪ್ರಚಾರ ಮಾಡಿದ್ದರು ಎಸ್ಎಂ ಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಬಳ್ಳಾರಿಯ ಜೊತೆ ನಂಟು ಹೊಂದಿದ್ದರು.

ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಬಳ್ಳಾರಿಯ ಜೊತೆ ನಂಟು ಹೊಂದಿದ್ದರು.

ನಗರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ಕೆ.ಸಿ. ಕೊಂಡಯ್ಯ ಅವರಿಗೆ ಆಪ್ತರಾಗಿದ್ದ ಎಸ್‌.ಎಂ. ಕೃಷ್ಣ ಅವರು 1999ರಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾಗಾಂಧಿ ಅವರು ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿದಾಗ ಜಿಲ್ಲೆಯಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದರು.

ಬಳ್ಳಾರಿಯ ಕಾಂಗ್ರೆಸ್ ನಾಯಕರು ಹೇಳುವಂತೆ ಎಸ್.ಎಂ. ಕೃಷ್ಣ ಅವರು 1999ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಲು ಸೋನಿಯಾಗಾಂಧಿ ಅವರು ಬಳ್ಳಾರಿಯಿಂದ ಸ್ಪರ್ಧೆ ಮಾಡಿದ್ದೇ ಹೆಚ್ಚು ಪೂರಕವಾಯಿತು. ಆಗ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇತ್ತು. ಜೊತೆಗೆ ಸೋನಿಯಾಗಾಂಧಿ ಅವರು ಬಳ್ಳಾರಿಯಿಂದ ಸ್ಪರ್ಧೆ ಮಾಡಿದ್ದು ರಾಜ್ಯದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಹೆಚ್ಚು ಉತ್ಸಾಹ ಮೂಡಿಸಿತ್ತು. ಒಂದಡೆ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿದ್ದ ಸೋನಿಯಾಗಾಂಧಿ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಾಕಷ್ಟು ಶ್ರಮಿಸಿದರು.

1999ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪಾಂಚಜನ್ಯಯಾತ್ರೆ ನಡೆಸಿದ ಎಸ್.ಎಂ. ಕೃಷ್ಣ ಅವರು ರಾಜ್ಯಾದ್ಯಂತ ಸಂಚಾರ ಕೈಗೊಂಡರು. ಸೋನಿಯಾಗಾಂಧಿ ಅವರು ಬಳ್ಳಾರಿಯಿಂದ ಲೋಕಸಭೆಗೆ ಸ್ಪರ್ಧಿಸಿದ್ದರಿಂದಾಗಿಯೇ ಸೋನಿಯಾ ಅವರ ಪ್ರಭಾವದಿಂದ ಅಖಂಡ ಬಳ್ಳಾರಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಗೊಂಡರು. ಬಳಿಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾದರು. ಅಖಂಡ ಬಳ್ಳಾರಿ ಜಿಲ್ಲೆಯಿಂದ ಮೂವರು ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಅಲ್ಲಂ ವೀರಭದ್ರಪ್ಪ ಅವರು ತೋಟಗಾರಿಕೆ ಸಚಿವರಾದರೆ, ಎಂ.ವೈ. ಘೋರ್ಪಡೆ ಅವರು ಪಂಚಾಯತ್ ರಾಜ್ ಇಲಾಖೆ ಸಚಿವರು ಹಾಗೂ ಎಂ. ದಿವಾಕರಬಾಬು ಅವರು ಗ್ರಾಮೀಣಾಭಿವೃದ್ಧಿ ಸಚಿವರಾದರು. ಬಳ್ಳಾರಿಯ ಹಿರಿಯ ಕಾಂಗ್ರೆಸ್ ಮುಖಂಡ ಅಲ್ಲಂ ವೀರಭದ್ರಪ್ಪ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಎಸ್.ಎಂ. ಕೃಷ್ಣ ಅವರು ಬಳ್ಳಾರಿ ಜಿಲ್ಲೆಯ ಬಗ್ಗೆ ಅಪಾರ ಕಾಳಜಿಯುಳ್ಳವರಾಗಿದ್ದರು. ಈ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಚರ್ಚಿಸುತ್ತಿದ್ದರು. ಈ ಜಿಲ್ಲೆಯ ಪ್ರಗತಿ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿಕೊಳ್ಳುವ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಎಸ್.ಎಂ. ಕೃಷ್ಣ ಅವರ ಒಡನಾಡಿ ಕೆ.ಸಿ. ಕೊಂಡಯ್ಯ ಅವರು ಪ್ರಗತಿಪರ ವಿಚಾರಧಾರೆಯುಳ್ಳವರಾಗಿದ್ದ ಕೃಷ್ಣ ಅವರ ನಿಧನ ಅಪಾರ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಧೀಮಂತ ವ್ಯಕ್ತಿತ್ವದ ಎಸ್.ಎಂ. ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಬಳ್ಳಾರಿಯಲ್ಲಿ ಸೋನಿಯಾಗಾಂಧಿ ಅವರು ಸ್ಪರ್ಧೆ ಮಾಡಿದ್ದು ಸಹ ಪೂರಕವಾಯಿತು. ವರ್ಚಸ್ಸು ಹೊಂದಿದ ನಾಯಕ ಎನಿಸಿದ್ದ ಎಸ್‌.ಎಂ. ಕೃಷ್ಣ ಅವರು ಜಿಲ್ಲೆಯಲ್ಲಿ ಚುನಾವಣೆ ಪ್ರಚಾರ ಕೈಗೊಂಡಿದ್ದರು. ಸೋನಿಯಾಗಾಂಧಿ ಅವರ ಬಳ್ಳಾರಿಯ ಸ್ಪರ್ಧೆ, ಎಸ್‌.ಎಂ. ಕೃಷ್ಣ ಅವರ ಪಾಂಚನಜನ್ಯ ಯಾತ್ರೆಗೆ ಸಹಕಾರಿಯಾಯಿತು ಎನ್ನುತ್ತಾರೆ ಹಿರಿಯ ಕಾಂಗ್ರೆಸ್ ಮುಖಂಡ ನಾರಾ ಪ್ರತಾಪ ರೆಡ್ಡಿ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಹಿರಿಯ ಕಾಂಗ್ರೆಸ್ ನಾಯಕರಾದ ಅಲ್ಲಂ ವೀರಭದ್ರಪ್ಪ, ಎಂ.ದಿವಾಕರಬಾಬು, ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಶಾಸಕರಾದ ನಾರಾ ಭರತ್ ರೆಡ್ಡಿ, ಬಿ. ನಾಗೇಂದ್ರ, ಮುಖಂಡರಾದ ಎ. ಮಾನಯ್ಯ, ಮುಂಡ್ರಗಿ ನಾಗರಾಜ್ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.