ಮದ್ದೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬೇರೆ ರಾಜಕಾರಣಿಗಳಂತೆ ಸುಳ್ಳು ಹೇಳಿ ರಾಜಕಾರಣ ಮಾಡಿದ್ದರೆ ಈ ದೇಶದ ಪ್ರಧಾನಿಯಾಗುತ್ತಿದ್ದರು ಎಂದು ಶಾಸಕ ಕೆ.ಎಂ.ಉದಯ್ ಬುಧವಾರ ಹೇಳಿದರು. ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಎಸ್.ಎಂ.ಕೃಷ್ಣ ಆಡಳಿತ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಎಲ್ಲ ರಾಜಕಾರಣಿಗಳಂತೆ ಕೃಷ್ಣ ಅವರು ಸುಳ್ಳು ಹೇಳಿ ರಾಜಕಾರಣ ಮಾಡಿದ ಜಾಯಮಾನವದವರಲ್ಲ. ಈಗ ದೇಶದ ಚುಕ್ಕಾಣಿ ಹಿಡಿದಿರುವ ವಿಪಕ್ಷದ ನಾಯಕರು ಅಭಿವೃದ್ಧಿ ಹೆಸರಿನಲ್ಲಿ ಜನರನ್ನು ವಂಚಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ ಟೀಕಿಸಿದರು. ಕೃಷ್ಣ ಈ ದೇಶದ ಪ್ರಧಾನಿಯಾಗಿದ್ದರೆ ದೇಶ ಇನ್ನೂ 25 ವರ್ಷ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿತ್ತು. ಮುಂದಿನ ದಿನಗಳಲ್ಲಿ ಎಸ್.ಎಂ.ಕೃಷ್ಣರನ್ನು ಕ್ಷೇತ್ರದ ಜನ ಪ್ರತಿನಿತ್ಯ ಸ್ಮರಿಸುವಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ಡಾ.ಬಿ.ಕೃಷ್ಣ ಸಂಪಾದಕತ್ವದಲ್ಲಿ ಹೊರತಂದಿರುವ ತಾಲೂಕಿನ ಜನಪ್ರತಿನಿಧಿಗಳು ಮತ್ತು ಶಿಕ್ಷಣ ಒಂದು ಮುನ್ನೋಟ ಕುರಿತ ಗ್ರಂಥವನ್ನು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಡಾ.ಬಿ.ಜಯಪ್ರಕಾಶ್ ಗೌಡ ಲೋಕಾರ್ಪಣೆ ಮಾಡಿದರು.