ಸ್ಮಾರ್ಟ್‌ ಮೀಟರ್‌ ವಿವಾದ: ಸಚಿವಜಾರ್ಜ್ ವಿರುದ್ಧ ಬಿಜೆಪಿ ದೂರು

| Published : Jul 17 2025, 01:45 AM IST

ಸಾರಾಂಶ

ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಯ ಟೆಂಡರ್‌ ಕಾನೂನು ಬಾಹಿರವಾಗಿದ್ದು, ಟೆಂಡರ್‌ ಮೂಲಕ ಅಂದಾಜು ₹16 ಸಾವಿರ ಕೋಟಿ ಮೊತ್ತದ ದುರ್ಲಾಭ ಪಡೆಯಲಾಗುತ್ತಿದೆ ಎಂದು ಆರೋಪಿಸಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತಿತರರ ವಿರುದ್ಧ ಶಾಸಕ ಡಾ। ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಯ ಟೆಂಡರ್‌ ಕಾನೂನು ಬಾಹಿರವಾಗಿದ್ದು, ಟೆಂಡರ್‌ ಮೂಲಕ ಅಂದಾಜು ₹16 ಸಾವಿರ ಕೋಟಿ ಮೊತ್ತದ ದುರ್ಲಾಭ ಪಡೆಯಲಾಗುತ್ತಿದೆ ಎಂದು ಆರೋಪಿಸಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತಿತರರ ವಿರುದ್ಧ ಶಾಸಕ ಡಾ। ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಫಿರ್ಯಾದುದಾರರು ಮತ್ತು ಬಿಜೆಪಿಯ ಶಾಸಕರೂ ಆದ ಡಾ। ಸಿ.ಎನ್‌.ಅಶ್ವತ್ಥ ನಾರಾಯಣ, ಎಸ್‌.ಆರ್‌.ವಿಶ್ವನಾಥ್ ಮತ್ತು ಧೀರಜ್‌ ಮುನಿರಾಜು ಪರವಾಗಿ ಹೈಕೋರ್ಟ್‌ನ ಪದಾಂಕಿತ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್‌ ಬುಧವಾರ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದರು. ದೂರನ್ನು ಸ್ವೀಕರಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು, ಗುರುವಾರ ವಿಚಾರಣೆ ನಡೆಸುವುದಾಗಿ ತಿಳಿಸಿದರು.

ದೂರಿನಲ್ಲಿ ಸಚಿವ ಕೆ.ಜೆ.ಜಾರ್ಜ್‌, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್‌.ಜೆ.ರಮೇಶ್‌ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಫಿರ್ಯಾದುದಾರರಾದ ಡಾ। ಸಿ.ಎನ್‌.ಅಶ್ವತ್ಥ ನಾರಾಯಣ, ಎಸ್‌.ಆರ್‌.ವಿಶ್ವನಾಥ್ ಮತ್ತು ಧೀರಜ್‌ ಮುನಿರಾಜು ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದರು.

ಸ್ಮಾರ್ಟ್‌ ಮೀಟರ್‌ ಸೇವೆ ಒದಗಿಸುವ ನಿಟ್ಟಿನಲ್ಲಿ 2024ರ ಸೆಪ್ಟೆಂಬರ್ 26ರಂದು ಟೆಂಡರ್‌ ಕರೆಯಲಾಗಿತ್ತು. ಬಿಡ್‌ದಾರರಾದ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್‌ ಎಂಬ ಶೆಲ್‌ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಈ ಟೆಂಡರ್‌ ಅನ್ನು ರಾಜ್ಯದಲ್ಲಿ ವಿವಿಧ ಭಾಗಗಳ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಪ್ರತ್ಯೇಕ ಟೆಂಡರ್‌ ಕರೆಯದೆ ಬೆಸ್ಕಾಂ ಕಂಪನಿಯೊಂದಕ್ಕೇ ನೇರವಾಗಿ ಟೆಂಡರ್‌ ನೀಡಲಾಗಿದೆ. ಇದರಿಂದ ಅಂದಾಜು ₹16 ಸಾವಿರ ಕೋಟಿಯ ಮೊತ್ತವನ್ನು ಪಡೆಯುವ ಅಕ್ರಮ ನಡೆದಿದೆ. ಈ ಕಾನೂನು ಬಾಹಿರವಾದ ಒಟ್ಟು ಪ್ರಕ್ರಿಯೆ ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಅಧಿನಿಯಮ-2000 ಹಾಗೂ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ (ಕೆಇಆರ್‌ಸಿ) ನಿಯಮಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.