ಸಾರಾಂಶ
ಕನ್ನಡಪ್ರಭ ವಾರ್ತೆ ಖಾನಾಪುರ
ಪಟ್ಟಣದ ಮಲಪ್ರಭಾ ಕ್ರೀಡಾಂಗಣದಲ್ಲಿ ತಾಲೂಕಿನ ಆದಿವಾಸಿ ಹಕ್ಕಿಪಿಕ್ಕಿ ಜನಾಂಗದವರನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಒಳಪಡಿಸಲಾಯಿತು. ತಾಲೂಕು ಆಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ನಡೆದ ಸಮೀಕ್ಷೆಯಲ್ಲಿ ಸಮೀಕ್ಷೆದಾರರು ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಹಕ್ಕಿಪಿಕ್ಕಿ ಜನಾಂಗದವರು ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಹಿಂಡಲಗಿ ಮಾತನಾಡಿ, ಬೆಳಗಾವಿಯಲ್ಲಿ ಕಳೆದ ಸೆ.22ರಂದು ಹಕ್ಕಿಪಿಕ್ಕಿ ಜನಾಂಗದವರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಯೋಜಕ ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದು, ಮನವಿಯಲ್ಲಿ ತಾಲೂಕಿನ ಅರಣ್ಯದಲ್ಲಿ ಬಹಳ ವರ್ಷಗಳಿಂದ ವಾಸಿಸುತ್ತಿರುವ ಆದಿವಾಸಿ ಹಕ್ಕಿಪಿಕ್ಕಿ ಸಮುದಾಯದ ಜನಾಂಗದವರನ್ನು ಸಮೀಕ್ಷೆಗೆ ಒಳಪಡಿಸುವಂತೆ ಕೋರಿದ್ದರು. ನಮ್ಮ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಜನಾಂಗದವರನ್ನು ಸಮೀಕ್ಷೆಗೆ ಒಳಪಡಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ನಿರ್ದೇಶನವನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಮೀಕ್ಷೆಯನ್ನು ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಹಕ್ಕಿಪಿಕ್ಕಿ ಸಮುದಾಯಕ್ಕೆ ಸರ್ಕಾರದಿಂದ ಎಲ್ಲ ರೀತಿಯ ಸವಲತ್ತುಗಳು ದೊರೆಯಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಇದಕ್ಕೆ ಅಧಿಕಾರಿಗಳು ಸ್ಪಂದಿಸಿದ್ದಾರೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಕೋಮಾರ, ಬಿಇಒ ರಾಮಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಿ.ಜಿ ಕಟಾಪುರಿಮಠ, ಐಇಆರ್ಟಿ ಸಂಯೋಜಕ ಶಂಕರ ಕಮ್ಮಾರ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆ ಕಾರ್ಯಕರ್ತರಾದ ಕಾರ್ತಿಕ ತಳವಾರ, ರಾಘವೇಂದ್ರ ಚಲವಾದಿ, ದಯಾನಂದ ಹಕ್ಕಿಪಿಕ್ಕಿ ಹಾಗೂ ಇತರರಿದ್ದರು.