ಸಾರಾಂಶ
ಕನ್ನಡಪ್ರಭ ವಾರ್ತೆ ನಾಪೋಕ್ಲು
ಪರಸ್ಪರ ಸೌಹರ್ದತೆ, ಸಹಬಾಳ್ವೆ, ಸಹನೆಯಿಂದ ನಾವೆಲ್ಲರೂ ಒಂದೇ ಎಂಬ ಮನೋಭಾವನೆ ಬೆಳೆಸಿಕೊಂಡರೆ ಸಮಾಜದ ಹಾಗೂ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಹೇಳಿದ್ದಾರೆ.ಇಲ್ಲಿಗೆ ಸಮೀಪದ ಎಮ್ಮೆಮಾಡು ಉರೂಸ್ ಪ್ರಯುಕ್ತ ಸೋಮವಾರ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.
ತಿಳಿವಳಿಕೆಯ ಕೊರತೆಯಿಂದ ಧರ್ಮ- ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಹಿಂದೂ ಮುಸಲ್ಮಾನರ ಸೌಹಾರ್ದತೆಗೆ ಧಕ್ಕೆ ಆಗಬಾರದು. ಮುಸಲ್ಮಾನರು ಉದಾತ್ತವಾದ, ಆಧ್ಯಾತ್ಮಿಕ ಚಿಂತನೆಯಿಂದ ಬೆಳೆದು ಬಂದಿದ್ದಾರೆ. ಧರ್ಮದ ಬಗ್ಗೆಗಿನ ಅಜ್ಞಾನದಿಂದ ಸಂಘರ್ಷ ಸೃಷ್ಟಿಯಾಗುತ್ತಿದೆ ಎಂದರು.ಸಮಾಜಕ್ಕೆ ಆತಂಕ ತಂದೊಡ್ಡುವ ಕೆಲಸವನ್ನು ಯಾವ ಯುವಕರು ಮಾಡಬಾರದು ಎಂದ ಅವರು ತಪ್ಪು ಮಾಡಿದ ಯಾವುದೇ ವ್ಯಕ್ತಿಗೆ ಶಿಕ್ಷೆ ಆಗಬೇಕು. ಇತ್ತೀಚಿನ ದಿನಗಳಲ್ಲಿ ದೊಂಬಿ, ಕೊಲೆ ಸಂಘರ್ಷಗಳು ಸಂಭವಿಸಿದಾಗ ಜಾತಿ ಹುಡುಕುವ ಕೆಲಸ ಆಗುತ್ತಿದೆ .ಅಂತಹ ಘಟನೆಗಳು ಮರುಕಳಿಸಬಾರದು. ಯುವಕರು ಯಾವತ್ತು ಆಕ್ರೋಶಕ್ಕೆ ಒಳಗಾಗಬಾರದು ಎಂದರು.ಯುವಕರು ಇಂದು ಮಾದಕ ವ್ಯಸನಿಗಳಾಗಿ ಸಮಾಜಕ್ಕೆ ಕಂಟಕರಾಗುತ್ತಿದ್ದಾರೆ. ಗಾಂಜಾ ವ್ಯಸನಿಗಳಾಗಬಾರದು. ಇದರಿಂದ ನಾಡಿಗೆ, ರಾಜ್ಯಕ್ಕೆ ತೊಂದರೆ. ಜಾಗೃತಿ ಕೆಲಸ ಮೂಡಿಸುವ ಕೆಲಸವನ್ನು ಮಾಡಬೇಕಿದೆ. ಮನುಷ್ಯತ್ವವನ್ನು ಕಳೆದುಕೊಳ್ಳುವಂತಾಗಬಾರದು.ಪ್ರತಿ ಗ್ರಾಮ, ರಾಜ್ಯವನ್ನು ಗಾಂಜಾ ಮುಕ್ತವನ್ನಾಗಿ ಮಾಡಲು ಎಲ್ಲರೂ ಪಡೆದುಕೊಳ್ಳಬೇಕು ಎಂದರು.ಸಯ್ಯದ್ ಮುಈನಲಿ ಶಿಹಾಬ್ ತಂಗಳ್ ಪ್ರಾರ್ಥನೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಮಾಯತ್ ಅಬೂಬಕ್ಕರ್ ಸಕಾಫಿ ಪುದಿಯೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೂರ್ಗ್ ಜಮಾಯುತ್ತಲ್ ಉಲಮಾ ಕೋಶಾಧಿಕಾರಿ ಕೆ.ಎಂ ಹುಸೇನ್ ಸಖಾಫಿ, ತಾಜೂಲ್ ಇಸ್ಲಾಂ ಮುಸ್ಲಿಂ ಜಮಾಯತ್ ಕೋಶಾಧಿಕಾರಿ ಆಲಿ ನೆರೋಟ್, ಎಮ್ಮೆಮಾಡು ಶಹೀದಿಯ ಕಾರ್ಯದರ್ಶಿ ಇಸ್ಮಾಯಿಲ್ ಚಕ್ಕೇರ , ಸಿ.ಎಂ ಮಾಹಿನ್ ಚಂಬಾರಂಡ, ಹಂಸ ಕೊಟ್ಟಮುಡಿ, ಇಸ್ಮಾಯಿಲ್ ನಾಪೋಕ್ಲು, ಮೊಹಮ್ಮದ್ ಹಾಜಿ ಕುಂಜಿಲ, ನಾಪೋಕ್ಲು ಜಮಾಯತ್ ಅಧ್ಯಕ್ಷ ಅಬ್ದುಲ್ ರೆಹಮಾನ್, ಮನ್ಸೂರ್ ಆಲಿ, ಹಂಸ ದೋರೋಟ್, ಕೊಳಕೇರಿ ಜಮಾಯತ್ ಅಧ್ಯಕ್ಷ ಅಬ್ದುಲ್ ನಾಸಿರ್, ಕುಂಜಿಲ ಜಮಾಯತ್ ಅಧ್ಯಕ್ಷ ಶೌಕತ್ತಾಲಿ, ಹಳೆ ತಾಲೂಕು ಜಮಾಯತ್ ಅಧ್ಯಕ್ಷ ಮುಹಮದ್ , ಎಮ್ಮೆಮಾಡು ಜಮಾಯತ್ ಉಪ ಅಧ್ಯಕ್ಷ ಅಶ್ರಫ್ ಬಿ ಯು ಇನ್ನಿತರರು ಪಾಲ್ಗೊಂಡಿದ್ದರು.
ಸಂಚಾರ ದಟ್ಟಣೆ ನಿಯಂತ್ರಣ: ಪೊಲೀಸ್ ಇಲಾಖೆ ವತಿಯಿಂದ ಎಮ್ಮೆಮಾಡು ಮಖಾಂ ಉರುಸ್ ಪ್ರಯುಕ್ತ ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಿ ಸಂಚಾರ ದಟ್ಟಣೆ ನಿಯಂತ್ರಿಸಲಾಗಿತ್ತು. ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ಸಾರ್ವಜನಿಕ (ಬಾಣೆ ಚೊರ್) ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯ ಹಾಗೂ ಹೊರ ರಾಜ್ಯದಿಂದ ಅತ್ಯಧಿಕ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿತ್ತು.