ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ: ಸಚಿವ ಸಂತೋಷ್‌ ಲಾಡ್‌

| Published : Oct 16 2025, 02:00 AM IST

ಸಾರಾಂಶ

ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಸಂತೋಷ್ ಲಾಡ್ ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಸಂತೋಷ್ ಲಾಡ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಂಯುಕ್ತಾಶ್ರಯದಲ್ಲಿ, ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ ಪಾಟೀಲ್ ಕನ್ವೆನ್ಷನ್ ಹಾಲ್‌ನಲ್ಲಿ ಬುಧವಾರ ಆಯೋಜಿಸಲಾಗಿದ್ದ ಯಾದಗಿರಿ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೂರಾರು ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸುಮಾರು 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ತಕ್ಷಣ ಉಚಿತವಾಗಿ ನೋಂದಾಯಿಸಿಕೊಂಡು, ಸ್ಮಾರ್ಟ್ ಕಾರ್ಡ್ ಪಡೆದು ಸವಲತ್ತುಗಳ ಲಾಭ ಪಡೆಯುವಂತೆ ಸಲಹೆ ನೀಡಿದರು.

ರಾಜ್ಯದ ದುಡಿಯುವ ಜನರಲ್ಲಿ ಅಸಂಘಟಿತ ವಲಯದ ಪ್ರತಿಶತ 85 ರಷ್ಟು ಕಾರ್ಮಿಕರಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ "ಡಾ. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ " ಯನ್ನುಅನುಷ್ಠಾನಗೊಳಿಸಲಾಗಿದೆ ಎಂದರು. ಈ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 35 ಲಕ್ಷ ಕಾರ್ಮಿಕರು ಒಳಗೊಂಡಿದ್ದಾರೆ. ಅವರಿಗೆ ಉಚಿತವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ ಎಂದರು.

ಯಾದಗಿರಿ ಜಿಲ್ಲೆಯಲ್ಲಿ 59,493 ಕಾರ್ಮಿಕರು ನೋಂದಣಿಯಾಗಿದ್ದು, ಅವರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ.

ಇಂತಹ ಅಸಂಘಟಿತ ಕಾರ್ಮಿಕರ ಅಪಘಾತ ಸಂಭವಿಸಿದಲ್ಲಿ 1 ಲಕ್ಷ ಪರಿಹಾರ ನೀಡಲಾಗುವುದು. ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ 4 ಲಕ್ಷದವರೆಗೆ ವಿಮಾ ಸೌಲಭ್ಯ ನೀಡಲಾಗುವುದು. ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಉದ್ಯೋಗದಾತರು, ಉದ್ದಿಮೆದಾರರು ಉದ್ಯೋಗ ನೀಡಿದಲ್ಲಿ ಶೇ.50 ರಷ್ಟು ವೇತನ ಕಾರ್ಮಿಕ ಇಲಾಖೆಯಿಂದಲೇ ಭರಿಸಲಾಗುವುದೆಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಮಾತನಾಡಿ, ಈ ಭಾಗದ ಕಾರ್ಮಿಕರ ಮಕ್ಕಳ ಅನುಕೂಲಕ್ಕಾಗಿ ಭೀಮರಾಯನಗುಡಿಗೆ ವಸತಿ ಶಾಲೆಯೊಂದು ಮಂಜೂರು ಆಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರ್, ಶಾಸಕ ಶರಣಗೌಡ ಕಂದಕೂರ ಅವರು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕರ ಪರ ಕಾರ್ಯವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ವಡಗೇರಾ ಹಾಗೂ ಗುರುಮಠಕಲ್ ಗೆ ಕಾರ್ಮಿಕ ಮಕ್ಕಳಿಗಾಗಿ ವಸತಿ ಶಾಲೆ ಮಂಜೂರು ಮಾಡುವಂತೆ ಸಚಿವರಿಗೆ ಕೋರಿದರು.

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕ ರಾಜಾ ವೇಣುಗೋಪಾಲ್ ನಾಯಕ, ನಗರಸಭೆ ಅಧ್ಯಕ್ಷ ಲಲಿತಾ ಅನಪುರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್,

ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿ .ಪಂ. ಸಿಇಓ ಲವೀಶ್ ಒರಡಿಯಾ, ಎಸ್ಪಿ ಪೃಥ್ವಿಕ್ ಶಂಕರ್, ಲಿಡ್ಕರ್ ಸಂಸ್ಥೆ ಅಧ್ಯಕ್ಷ ಮುಂಡರಗಿ ನಾಗರಾಜ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಆಶಾದೀಪ ಯೋಜನೆಯಡಿ ವೇತನ ಮರುಪಾವತಿ ಚೆಕ್ ವಿತರಣೆ, ಖಾಸಗಿ ವಾಹನ ಚಾಲಕರ ಅಪಘಾತ ಮರಣ ಪರಿಹಾರ ಧನ ಸಹಾಯ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು. ಕಾರ್ಮಿಕ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸಂವಿಧಾನದ ಪೀಠಿಕೆ ಬೋಧಿಸಿದರು. ಜಂಟಿ ಆಯುಕ್ತ ರವಿಕುಮಾರ್‌ ಹಾಗೂ ಇತರೆ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.