ಕನ್ನಡಪ್ರಭ ವಾರ್ತೆ ಕಾರವಾರ

ಸಮಾಜಸೇವೆಯ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ನಗರಸಭೆ ಆಯುಕ್ತ ಜಗದೀಶ ಹುಲಗಜ್ಜಿ ತಿಳಿಸಿದರು.

ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಬಾಡ ಕಾರವಾರದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಕವಿವಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆವರಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಜೊತೆಗೆ ಸಮಾಜಸೇವೆಯ ಮನೋಭಾವವನ್ನು ಹೆಚ್ಚಿಸುತ್ತವೆ ಎಂದು ಹೇಳಿದರು.

ಪತ್ರಿಕಾಭವನ ನಿರ್ವಹಣಾ ಸಮಿತಿ ಅಧ್ಯಕ್ಷ ಟಿ.ಬಿ. ಹರಿಕಾಂತ್, ಎನ್.ಎಸ್.ಎಸ್. ಸ್ವಯಂಸೇವಕರು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸುವಂತೆ ಕರೆ ನೀಡಿದರು.


ಶಿವಾಜಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ್ ರಾಣೆ, ಸಮಾಜದ ಅಭಿವೃದ್ಧಿಗೆ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಉಪಾಧ್ಯಕ್ಷರಾದ ಅಶೋಕ್ ನಾಯ್ಕ, ಯುವಕರು ಮತ್ತು ನಾಗರಿಕರು ಕೈಜೋಡಿಸಿದಾಗ ಸಮಾಜದಲ್ಲಿ ಸೌಹಾರ್ದತೆ, ಸಹಕಾರ ಮತ್ತು ಸಮಾನತೆ ಬೆಳೆಸಬಹುದು ಎಂದರು.

ಕವಿವಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ಹನುಮಂತಪ್ಪಾ ಮಸ್ತಾರಿ, ನಗರಸಭೆ ಮಾಜಿ ಸದಸ್ಯೆ ಸ್ನೇಹಾ ಮಂಜ್ರೇಕರ್ ಇದ್ದರು.

ಸಂಪದ ಸಂಗಡಿಗರು ಪ್ರಾರ್ಥಿಸಿದರು, ಪ್ರಾಚಾರ್ಯ ಡಾ. ಸುಮನ್ ಸಾವಂತ್ ಸ್ವಾಗತಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ. ನವೀನ ದೇವರಭಾವಿ ವಂದಿಸಿ, ರವಿ ನಿರೂಪಿಸಿದರು.