ಶಿಕ್ಷಕರನ್ನು ಸಮಾಜ ಸದಾ ಗೌರವಿಸುತ್ತದೆ: ಎಸ್.ಎಲ್. ಭೋಜೇಗೌಡ

| Published : Jun 23 2024, 02:01 AM IST

ಸಾರಾಂಶ

ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರವನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಉದ್ಘಾಟಿಸಿದರು.

- ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ಕನ್ನಡಪ್ರಭ ವಾರ್ತೆ ಹೊಸನಗರ

ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರು ಉತ್ತಮ ಸೇವೆಯನ್ನು ನೀಡುತ್ತಿದ್ದಾರೆ ಅಂತಹ ಶಿಕ್ಷಕರುಗಳನ್ನು ಸಮಾಜ ಸದಾಕಾಲವೂ ಗೌರವಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.

ರಿಪ್ಪನ್ ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರುಗಳು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ದೇಶದ ಅಭಿವೃದ್ಧಿ ಮತ್ತು ಉತ್ತಮ ರಾಷ್ಟ್ರದ ನಿರ್ಮಾಣದಲ್ಲಿ ಶಿಕ್ಷಕರುಗಳ ಪಾತ್ರ ಮಹತ್ತರವಾದದ್ದು, ಆದುದರಿಂದ ಸಮಾಜವು ಶಿಕ್ಷಕರುಗಳನ್ನು ಗೌರವಿಸುತ್ತದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆ ಇರುತ್ತದೆ ಆದರೆ ಅವಕಾಶಗಳು ಇರುವುದಿಲ್ಲ ವಿದ್ಯಾರ್ಥಿಗಳಿಗೆ ಅವಕಾಶಗಳನ್ನು ಕಲ್ಪಿಸಿ ಕೊಡುವ ಗುರುತರ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದರು.

ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿಯೊಂದಿಗೆ ಆತ್ಮವಿಶ್ವಾಸವನ್ನು ಬೆಳೆಸಿ ನಮ್ಮ ಮಕ್ಕಳ ರೀತಿಯಲ್ಲಿ ಪ್ರೀತಿ ಯೊಂದಿಗೆ ಪಾಠ ಪ್ರವಚನಗಳನ್ನು ಭೋದಿಸಿದಾಗ ಮಕ್ಕಳು ಕಲಿಕೆಯಲ್ಲಿ ಆಸಕ್ತಿಯನ್ನು ಹೊಂದಿ ಉನ್ನತ ಶಿಕ್ಷಣವನ್ನು ಪಡೆದು ಸಮಾಜದ ಮುಖ್ಯ ವಾಹಿನಿಯಲ್ಲಿ ಬರುವುದರ ಜೊತೆಗೆ ದೇಶದ ಅಭಿವೃದ್ಧಿಗೆ ಕೊಡುಗೆ ಗಳಾಗುತ್ತಾರೆ ಎಂದರು.

ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಮಾತನಾಡಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮವಾದ ಫಲಿತಾಂಶವನ್ನು ನೀಡಿದ್ದಾರೆ. ಇದಕ್ಕೆ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸ ವರ್ಗದವರ ಕರ್ತವ್ಯ ನಿಷ್ಠೆ ಮತ್ತು ಪರಿಶ್ರಮ ಕಾರಣವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಹಾಲಪ್ಪ ಸಂಕೂರ್ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಶಿಕ್ಷಕರುಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಎಸ್.ಎಲ್.ಭೋಜೇಗೌಡ, ವಯೋ ನಿವೃತ್ತಿ ಹೊಂದುತ್ತಿರುವ ರಿಪ್ಪನ್ ಪೇಟೆ ಸರಕಾರಿ ಪದವಿಪೂರ್ವ ಕಾಲೇಜಿನ ಎ.ಮಂಜುನಾಥ್, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಬಿ. ಕೃಷ್ಣಪ್ಪ, ಹಾಗೂ ಕಾಲೇಜ್ ಗಳಲ್ಲಿ ಶೇಕಡ 100ರಷ್ಟು ಫಲಿತಾಂಶಗಳನ್ನು ನೀಡಿದ ಉಪನ್ಯಾಸಕರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ವಿಧಾನ ಪರಿಷತ್ ಸದಸ್ಯರ ಅನುದಾನದಿಂದ ನೀಡಿದ ಶುದ್ಧ ನೀರಿನ ಘಟಕವನ್ನು ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಉದ್ಘಾಟಿಸಿದರು. ಕಾರ್ಯಕ್ರಮ ದಲ್ಲಿ ಶಿವಮೊಗ್ಗ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಚಂದ್ರಪ್ಪ ಗುಂಡಪಲ್ಲಿ ಹಾಗೂ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷ ಯೋಗೀಶ್, ಹೊಸನಗರ ಕಾಲೇಜಿನ ಪ್ರಾಚಾರ್ಯ ಸ್ವಾಮಿರಾವ್, ನಿಟ್ಟೂರಿನ ಕಾಲೇಜಿನ ಪ್ರಾಚಾರ್ಯ ಕೆ. ಎಸ್.ಗಣೇಶ್, ರಿಪ್ಪನ್‌ಪೇಟೆ ಕಾಲೇಜಿನ ಪ್ರಾಚಾರ್ಯ ಎ.ಮಂಜುನಾಥ್ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ನಜಹತ್ ಉಲ್ಲಾ ಉಪಸ್ಥಿತರಿದ್ದರು.