ಕನ್ನಡಪ್ರಭ ವಾರ್ತೆ ಬೇಲೂರು
ತಾಲೂಕಿನ ಬಿಕ್ಕೋಡು ಹೋಬಳಿಯ ಲಕ್ಕುಂದ ಗ್ರಾಮದಲ್ಲಿ ಒಂಟಿ ಕಾಡಾನೆಯೊಂದು ರಾಜಾರೋಷವಾಗಿ ಗ್ರಾಮದೊಳಗೆ ಸಂಚರಿಸಿದ್ದು ಗ್ರಾಮಸ್ಥರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ.ಬೆಳಗಿನ ವೇಳೆಯಲ್ಲಿ ಗ್ರಾಮದ ವಸತಿ ಪ್ರದೇಶದ ಬಳಿ ಕಾಡಾನೆ ಕಾಣಿಸಿಕೊಂಡಿದ್ದು, ಕೆಲಕಾಲ ರಸ್ತೆ ಹಾಗೂ ಮನೆಗಳ ಸುತ್ತಮುತ್ತ ಓಡಾಡಿದೆ. ಕಾಡಾನೆಯನ್ನು ಕಂಡ ಗ್ರಾಮಸ್ಥರು ಆತಂಕಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಿದರು. ಕೆಲವರು ದೂರದಿಂದಲೇ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿದ್ದು, ಆ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಾನೆಗಳು ಜನವಸತಿ ಪ್ರದೇಶಗಳಿಗೆ ಬರುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, ಲಕ್ಕುಂದ ಗ್ರಾಮದಲ್ಲಿಯೂ ಇದೇ ಕಾರಣದಿಂದ ಕಾಡಾನೆ ಬಂದಿರಬಹುದೆಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಗ್ರಾಮಸ್ಥರು ಅರಣ್ಯ ಇಲಾಖೆಯು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸುರಕ್ಷಿತವಾಗಿ ಕಾಡಿಗೆ ಮರಳಿಸುವ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮದಲ್ಲಿ ನಿಗಾ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸಂಚರಿಸದಂತೆ, ಮಕ್ಕಳನ್ನು ಒಂಟಿಯಾಗಿ ಹೊರಗೆ ಬಿಡದಂತೆ ಹಾಗೂ ಕಾಡಾನೆ ಕಂಡುಬಂದರೆ ಅದರ ಬಳಿ ಹೋಗದೆ ಕೂಡಲೇ ಅರಣ್ಯ ಇಲಾಖೆ ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.ಕಾಡಾನೆ ಸಂಚಾರದಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.