ಬಂಟ್ವಾಳ: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನಿವಾಸಕ್ಕೆ ಭೇಟಿ ನೀಡಿದರು.ಈ ವೇಳೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಚಿವರನ್ನು ಹೂಗುಚ್ಚ ನೀಡಿ ಹಾಗೂ ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭ ಸಂಸದ ಕ್ಯಾ.ಬೃಜೇಶ್ ಚೌಟ, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಸಚಿವರು ಬಳಿಕ ಗುರುಪುರ ಜಂಗಮ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ರುದ್ರಮುನಿ ಮಹಾಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡರು. ನಂತರ ವಜ್ರದೇಹಿ ಮಠಕ್ಕೆ ಭೇಟಿ ನೀಡಿ ಶ್ರೀ ರಾಜಶೇಖರಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದ ಅವರು ಮಠದ ಜೀರ್ಣೋದ್ಧಾರ ಕಾಮಗಾರಿಯ ವೀಕ್ಷಣೆ ನಡೆಸಿದರು.

ಬಳಿಕ ಬಂಟ್ವಾಳ ಶಾಸಕರ ಗಂಜಿಮಠದ ಒಡ್ಡೂರು ಫಾರ್ಮ್ಸ್‌ಗೆ ಭೇಟಿ ನೀಡಿದ ಸಚಿವರು ಜಿಲ್ಲೆಯ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯ ವಿಚಾರವಾಗಿ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ಮುಂದಿನ ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕಾರ್ಯಗಳ ಕುರಿತಾಗಿಯೂ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು. ಸಾರ್ವಜನಿಕರ ಬಹುಕಾಲದ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಗಣಿಸಿ ಕಾರ್ಯಗತಗೊಳಿಸುವಂತೆ ಒತ್ತಾಯಿಸಿದರು.

ಮನವಿಯಲ್ಲಿ ಪ್ರಮುಖ ಬೇಡಿಕೆಗಳು


▪️ ಅಜ್ಜಿಬೆಟ್ಟು ಶಾಲಾ ಬಳಿಯಿಂದ ದೈಪಲ ಸಂಪರ್ಕ ರಸ್ತೆಗೆ ರೈಲ್ವೆ ಬ್ರಿಡ್ಜ್ ನಿರ್ಮಾಣ ಮಾಡುವುದು.

▪️ ಕುಂಭೋಧರಿ ಮಠ ದೇವಸ್ಥಾನದಿಂದ ಕುಲಾಲ ಭವನ ಸಂಪರ್ಕ ರಸ್ತೆಗೆ ಕುಂಭೋಧರಿ ದೇವಸ್ಥಾನದ ಬಳಿ ಅಂಡರ್‌ಪಾಸ್ ನಿರ್ಮಾಣ ಮಾಡುವುದು.▪️ ಬಿ.ಮೂಡ ರೈಲ್ವೆ ನಿಲ್ದಾಣ ಸಮೀಪದ ಹಿಂದೂ ರುದ್ರಭೂಮಿ ಹಾಗೂ ರೈಲ್ವೆ ವಸತಿ ನಿಲಯ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದು.

▪️ ಗೋಳ್ತಮಜಲು ಗ್ರಾಮದ ದೇವಸ್ಯ–ಕುದ್ರೆಮಾರ್–ತೋಟ ಭಾಗಕ್ಕೆ ಸಂಪರ್ಕ ಕಲ್ಪಿಸಲು ದೇವಸ್ಯ ಕುದ್ರೆಮಾರ್ ಪ್ರದೇಶದಲ್ಲಿ ಅಂಡರ್‌ಪಾಸ್ ನಿರ್ಮಾಣ ಮಾಡುವುದು.

▪️ ನೆಟ್ಟಮುಡ್ನರು ಗ್ರಾಮದ ನೇರಳಕಟ್ಟೆ ರೈಲ್ವೆ ನಿಲ್ದಾಣದ ಬಳಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕಾಗಿ ಫುಟ್ ಬ್ರಿಡ್ಜ್ ನಿರ್ಮಾಣ ಮಾಡುವುದು.

▪️ ಮಂಗಳೂರು–ಬೆಂಗಳೂರು ಸಂಪರ್ಕ ರೈಲುಗಳಿಗೆ ನೇರಳಕಟ್ಟೆ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡುವುದು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪೂಜಾ ಪೈ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಮಾಜಿ ಮೇಯರ್ ಕವಿತಾ ಸನಿಲ್, ಹಾಸನ ಜಿಲ್ಲೆಯ ಮಾಜಿ ಜಿ.ಪಂ ಸದಸ್ಯ ಅಮಿತ್ ಶೆಟ್ಟಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಜಿಲ್ಲಾ ಉಪಾಧ್ಯಕ್ಷ ದೇವಪ್ಪ ಪೂಜಾರಿ, ಕೆ.ಎಂ.ಎಫ್ ನಿರ್ದೇಶಕ ನಂದರಾಮ ರೈ, ಸೋಹನ್ ಅಧಿಕಾರಿ, ಬೂಡ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಬಂಟ್ವಾಳ, ಸಚಿನ್ ಅಡಪ, ಗ್ರಾ.ಪಂ ಮಾಜಿ ಸದಸ್ಯ ಗಣೇಶ್ ರೈ ಮಾಣಿ, ಬಿಜೆಪಿ ಬಂಟ್ವಾಳ ಮಾಧ್ಯಮ ಪ್ರಮುಖ್ ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರಮುಖರಾದ ಪ್ರಭಾಕರ್ ಶೆಟ್ಟಿ, ಚಂದ್ರಹಾಸ ಶೆಟ್ಟಿ ನಾರ್ಲ, ಪ್ರಣಾಮ್ ರಾಜ್ ಅಜ್ಜಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.