ಸೋ.ಪೇಟೆ ಪ.ಪಂ. ಸಭೆ: ಪಾರ್ಕಿಂಗ್‌ ಅವ್ಯವಸ್ಥೆ ಬಗ್ಗೆ ಚರ್ಚೆ

| Published : Jun 21 2025, 12:49 AM IST

ಸೋ.ಪೇಟೆ ಪ.ಪಂ. ಸಭೆ: ಪಾರ್ಕಿಂಗ್‌ ಅವ್ಯವಸ್ಥೆ ಬಗ್ಗೆ ಚರ್ಚೆ
Share this Article
  • FB
  • TW
  • Linkdin
  • Email

ಸಾರಾಂಶ

ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬೆಳಗ್ಗಿನಿಂದ ಸಂಜೆ ವರೆಗೂ ಖಾಸಗಿ ವಾಹನಗಳೇ ತುಂಬಿರುತ್ತವೆ. ಬಸ್ ನಿಲ್ಲಿಸಲು ಸ್ಥಳ ಇರುವುದಿಲ್ಲ. ವಾಹನಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಕುಡಿಯುವ ನೀರಿನ ಪೈಪ್‌ಲೈನ್ ಸಂಪರ್ಕಕ್ಕೆ ರಸ್ತೆಯಲ್ಲಿ ಗುಂಡಿ ತೆಗೆದಿದ್ದು, ಇದರಿಂದ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ನೋ ಪಾರ್ಕಿಂಗ್ ಬೋರ್ಡಿನ ಪಕ್ಕದಲ್ಲಿಯೇ ವಾಹನಗಳನ್ನು ನಿಲ್ಲಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಪಟ್ಟಣ ಪಂಚಾಯಿತಿ ಕೌನ್ಸಿಲ್ ಸಾಮಾನ್ಯ ಸಭೆ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.ಸಭೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಹದಗೆಟ್ಟಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ಸದಸ್ಯರು ಆಗ್ರಹಿಸಿದರು. ಪಟ್ಟಣದ ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಎಲ್ಲೆಂದರಲ್ಲಿ ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸಲಾಗುತ್ತಿದೆ. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸದಸ್ಯರು ದೂರಿದರು.ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬೆಳಗ್ಗಿನಿಂದ ಸಂಜೆ ವರೆಗೂ ಖಾಸಗಿ ವಾಹನಗಳೇ ತುಂಬಿರುತ್ತವೆ. ಬಸ್ ನಿಲ್ಲಿಸಲು ಸ್ಥಳ ಇರುವುದಿಲ್ಲ. ವಾಹನಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಕುಡಿಯುವ ನೀರಿನ ಪೈಪ್‌ಲೈನ್ ಸಂಪರ್ಕಕ್ಕೆ ರಸ್ತೆಯಲ್ಲಿ ಗುಂಡಿ ತೆಗೆದಿದ್ದು, ಇದರಿಂದ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ನೋ ಪಾರ್ಕಿಂಗ್ ಬೋರ್ಡಿನ ಪಕ್ಕದಲ್ಲಿಯೇ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಪಾರ್ಕಿಂಗ್ ಸಮಸ್ಯೆಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸಾಧ್ಯವಾಗದಿದ್ದಲ್ಲಿ ಪಂಚಾಯಿತಿ ವತಿಯಿಂದಲೇ ಸೂಕ್ತ ವ್ಯವಸ್ಥೆ ಮಾಡಬೇಕಿದೆ ಎಂದು ಸಂಜೀವ, ಕಿರಣ್, ಮಹೇಶ್ ತಿಳಿಸಿದರು. ಪಾರ್ಕಿಂಗ್ ಸಮಸ್ಯೆ ಬಗೆಹರಿಸುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲು ಪಂಚಾಯಿತಿ ನಿರ್ಧರಿಸಿತು.ಪಂಚಾಯಿತಿ ವತಿಯಿಂದ ಹಳೆಯ ವರ್ಕ್‌ಶಾಪ್ ಏರಿಯಾದಲ್ಲಿ ಮಲ್ಟಿ ಪಾಂರ್ಕಿಂಗ್ ವ್ಯವಸ್ಥೆಯನ್ನು ೮೦ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಅದರ ಕ್ರಿಯಾ ಯೋಜನೆಯನ್ನು ಮಾಡಿ ಜಿಲ್ಲಾಧಿಕಾರಿಗೆ ಕಳುಹಿಸಲಾಗಿತ್ತು. ಅವರಿಂದ ಅನುಮತಿ ಸಿಕ್ಕಿದ್ದು, ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಪಂಚಾಯಿತಿ ಅಧ್ಯಕ್ಷರು ಸಭೆಗೆ ತಿಳಿಸಿದರು.ಪಟ್ಟಣದಲ್ಲಿ ಬೀದಿ ದೀಪಗಳ ನಿರ್ವಹಣೆಯನ್ನು ಸರಿಯಾಗಿ ಮಾಡದಿರುವುದರಿಂದ ಎಲ್ಲ ರಸ್ತೆಗಳಲ್ಲೂ ಕತ್ತಲಾವರಿಸುತ್ತಿದ್ದು, ಖಾಸಗಿ ಬಸ್ ನಿಲ್ದಾಣದಲ್ಲಿ ಕತ್ತಲಿನಿಂದ ಮಹಿಳೆಯರು ಮತ್ತು ಮಕ್ಕಳು ಸಂಚರಿಸಲು ಸಮಸ್ಯೆಯಾಗಿದೆ ಎಂದು ಸಂಜೀವ, ಮಹೇಶ್, ಶೀಲಾ ಡಿಸೋಜ ಸೇರಿದಂತೆ ಸದಸ್ಯರು ದೂರಿದರು. ಕೂಡಲೇ ಬೀದಿ ದೀಪಗಳ ವ್ಯವಸ್ಥೆಯನ್ನು ಸರಿಪಡಿಸುವಂತೆ ತಿಳಿಸಿದರು.ಸಭೆಯಲ್ಲಿ ಪಂಚಾಯಿತಿ ಸದಸ್ಯರು, ಮುಖ್ಯಾಧಿಕಾರಿ ಸತೀಶ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.