ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ನಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಬರಲಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿ ಶ್ರೇಷ್ಠವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಕನ್ನಡಪ್ರಭ ವಾರ್ತೆ ಹಾವೇರಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ನಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಬರಲಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿ ಶ್ರೇಷ್ಠವಾಗಿದೆ. ಹೀಗಾಗಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ರಾಜ್ಯಾದ್ಯಂತ ನಾನು ಪ್ರವಾಸ ಮಾಡುತ್ತಿದ್ದು, ಪಕ್ಷದ ಕಾರ್ಯಕರ್ತರು ರಣೋತ್ಸಾಹದಲ್ಲಿದಾರೆ. ವಿಧಾನಸಭೆ ಚುನಾವಣೆಯಲ್ಲಿ ನಮಗೆ ಅನಿರೀಕ್ಷಿತ ಸೋಲಾಯಿತು.

ಕಳೆದ ಏಳೆಂಟು ತಿಂಗಳಿಂದ ಕಾರ್ಯಕರ್ತರ ಉತ್ಸಾಹ ಕುಗ್ಗಿತ್ತು. ಆದರೆ, ಪಂಚ ರಾಜ್ಯಗಳ ಫಲಿತಾಂಶ ಇಡೀ ದೇಶದಲ್ಲಿ ಬಿಜೆಪಿ ಅಲೆ ಇರೋದನ್ನು ಸಾಬೀತುಪಡಿಸಿದೆ. 

ಹೀಗಾಗಿ, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು. ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಗ್ಯಾರಂಟಿ ಬಂದ್ ಮಾಡುತ್ತೇವೆ ಎಂದು ಮಾಗಡಿಯ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಸಿಎಂ ತಮ್ಮ ಮನಸ್ಸಿನ ಮಾತನ್ನು ಮಾಗಡಿ ಶಾಸಕರ ಬಾಯಿಂದ ಹೇಳಿಸಿದ್ದಾರೆ. ಆ ದುಸ್ಸಾಹಸಕ್ಕೆ ಕೈ ಹಾಕಿದರೆ ನಿಮ್ಮ ಕಿವಿ ಹಿಂಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಡವರು ಬಡವರಾಗಿಯೇ ಇರಲು ಕಾಂಗ್ರೆಸ್‌ ಕಾರಣ. ಎಲ್ಲಿ ಬಡತನ ಇರುತ್ತದೆಯೋ ಅಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿಕ್ಕೆ ಸಾಧ್ಯ ಅಂತ ಕಾಂಗ್ರೆಸ್ಸಿನವರು ಬಲವಾಗಿ ನಂಬಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿ ಶ್ರೇಷ್ಠವಾಗಿದೆ. ಕಾಂಗ್ರೆಸ್‌ನವರು ಒಂದು ಸುಳ್ಳನ್ನು ನೂರು ಬಾರಿ ಹೇಳಿ ಜನರ ಕಣ್ಣಿಗೆ ಮಣ್ಣೆರಚುವ ಕಾರ್ಯ ಮಾಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಅಂತ ಹೇಳುತ್ತಾರೆ. 

ಆದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ಗಳೇ ಸಿಗುತ್ತಿಲ್ಲ. ಶೇ.50ರಷ್ಟು ಬಸ್ ರೂಟ್ ಕಟ್ ಮಾಡಿದ್ದಾರೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಿತ್ತುಕೊಳ್ಳುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. 

ಭೀಕರ ಬರಗಾಲವಿದ್ದರೂ ರೈತರ ಬೆಳೆ ಉಳಿಸಲು 7 ತಾಸು ಕರೆಂಟ್ ಕೊಡುತ್ತಿಲ್ಲ. ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ, ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಕನಿಕರ ಬರುತ್ತಿಲ್ಲ. ಆದರೆ, ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಕೊಡುತ್ತೇವೆ ಎನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.