ಲೋಕಸಭಾ ಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೇಲೆ ಕೇಂದ್ರ ಬಿಜೆಪಿ ಸರ್ಕಾರವು ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಲೋಕಸಭಾ ಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೇಲೆ ಕೇಂದ್ರ ಬಿಜೆಪಿ ಸರ್ಕಾರವು ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮ್ಮದ್ ಅಸ್ಗರ್, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೆಂಗಾಕಿ ನಾಗರತ್ನ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಕಾಡಾ ಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ನಡೆದ ವೇದಿಕೆ ‘ಶುದ್ಧೀಕರಣ’ ವಿವಾದ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಲಾದ ಎಫ್ಐಆರ್ ಖಂಡಿಸಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ಅದರಂತೆ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಾಗಿದೆ. ರಾಹುಲ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ಶುದ್ಧೀಕರಣ ಮಾಡಿದ ಕೃತ್ಯವನ್ನು ಖಂಡಿಸಿದ್ದ ರಾಹುಲ್ ಗಾಂಧಿ, ಕೃತ್ಯ ಎಸಗಿದವರ ಮೇಲೆ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿದ್ದರು. ಈಗ ಅವರ ವಿರುದ್ಧವೇ ಎಫ್ಐಆರ್ ಹಾಕಿರುವುದು ನಾಚಿಗೇಡಿನ ಸಂಗತಿ . ಇದು ಗೂಂಡಾ ಸರ್ಕಾರದ ಪ್ರವೃತ್ತಿಯಾಗಿದೆ. ಇಂತಹ ಗೂಂಡಾ ನೀತಿ ಕೇಂದ್ರ ಸರ್ಕಾರ ತೊಲಗಬೇಕು ಎಂದು ಕಿಡಿಕಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ ಮಾತನಾಡಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ ಸ್ಥಳ ಶುದ್ಧೀಕರಿಸಿದ್ದವರಿಗೆ ಶಿಕ್ಷಿಸಬೇಕು ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಪೊಲೀಸರು ಎಫ್ಐಆರ್ ದಾಖಲಿಸಿದೆ ಇದು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೇಲೆ ನಡೆದಿರುವ ಗಂಭೀರ ದಾಳಿ. ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯ ವಿರುದ್ಧ ಧ್ವನಿ ಎತ್ತಿದ ನಾಯಕರನ್ನೇ ಪ್ರಕರಣದಲ್ಲಿ ಸಿಲುಕಿಸುವ ಮೂಲಕ ಬಿಜೆಪಿ ಸರ್ಕಾರ ತನ್ನ ನಿಜವಾದ ಮನಸ್ಥಿತಿಯನ್ನು ಬಹಿರಂಗಪಡಿಸಿದೆ ಎಂದರು.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರ ಭೋಗಾಪುರ, ಮುಖಂಡ ಮಹೇಶ್ ಕುದರ್, ಚೇತನ್, ಕೆಡಿಪಿ ಸದಸ್ಯರಾದ ಮುಸಾಹಿಬ್, ಶ್ರೀನಿವಾಸ, ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ನಾಗೇಂದ್ರ, ಮಾಧ್ಯಮ ಕಾರ್ಯದರ್ಶಿ ರಾಜೇಶ್ ಗೌಡಹಳ್ಳಿ ಶ್ರೀನಿವಾಸ್, ಅಕ್ಷಯ್, ನವೀನ್, ಶಕುಂತಲಾ, ಉಲ್ಲಾಸ್, ರೂಪೇಶ್, ಪುಟ್ಟಸ್ವಾಮಿ, ಪ್ರಸನ್ನ, ಮನೋಜ್, ಮಧು,ಪ್ರಧೀಪ್, ಆನಂತ್, ಕುಮಾರ್, ಮಹಾದೇವಸ್ವಾಮಿ, ಜಿಲ್ಲಾ ಕಾಂಗ್ರೆಸ್ ಸಮಿತಿ, ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದರು.