ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಮತ್ತು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಡುವೆ ನಡೆದ ಮಾತಿನ ಚಕಮಕಿ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದೆ.
ಉಡುಪಿ: ವಿಧಾನಸಭೆ ಅಧಿವೇಶನದಲ್ಲಿ ಉಡುಪಿ ಪರ್ಯಾಯೋತ್ಸವ ಅನುದಾನ ಕೋರಿ ಮಾತನಾಡಿದ ಸಂದರ್ಭ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಮತ್ತು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಡುವೆ ನಡೆದ ಮಾತಿನ ಚಕಮಕಿ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕರಾವಳಿಯಲ್ಲಿ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದೆ.ಶಾಸಕ ಯಶಪಾಲ್ ಸುವರ್ಣ ಅವರು ಉಡುಪಿ ಪರ್ಯಾಯ ಮಹೋತ್ಸವಕ್ಕೆ ಅನುದಾನ ನೀಡುವಂತೆ ಅಧಿವೇಶನದಲ್ಲಿ ಮಾತನಾಡುತಿದ್ದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್, ನಿಮ್ಮ ಹರಿಕಥೆ ನಿಲ್ಲಿಸಿ ನೇರ ವಿಷಯಕ್ಕೆ ಬನ್ನಿ, ಟಿವಿಯಲ್ಲಿ ಕಾಣಿಸಿಕೊಳ್ಳಲು ಮಾತನಾಡಬೇಡಿ ಎಂದು ಹೇಳಿದ್ದರು. ಇದು ಈಗ ವಿವಾದಕ್ಕೆ ಕಾರಣವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಯಶಪಾಲ್ ಸುವರ್ಣ, ಶಾಸಕನಾಗಿ ನನಗೆ ನನ್ನ ಕ್ಷೇತ್ರದ ಬಗ್ಗೆ ಮಾತನಾಡುವ ಸಂಪೂರ್ಣ ಹಕ್ಕಿದೆ. 15 ದಿನಗಳ ಮುಂಚಿತವಾಗಿ ನಾನು ಸಲ್ಲಿಸಿದ್ದ ಪ್ರಶ್ನೆಯಿದು. ಉಡುಪಿ ಪರ್ಯಾಯಕ್ಕೆ ಅನುದಾನ ಕೇಳಿರುವುದನ್ನು ಸ್ವೀಕರ್ ಆಗಿ ಅವರು ಟೀಕಿಸಿರುವುದು ಸರಿಯಲ್ಲ. ಅವರು ಪರ್ಯಾಯೋತ್ಸವದ ಬಗ್ಗೆ ವಿವರಗಳನ್ನು ನೀಡುವಾಗ ಅದನ್ನು ಹರಿಕಥೆ ಎಂದು ಹೇಳಿದ್ದು ನೋವುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.‘ನಾನು ಕಾರ್ಯಕರ್ತನಾಗಿ ಬೆಳೆದು ಶಾಸಕನಾಗಿದ್ದೇನೆ. ಅವರು ತಂದೆಯ ಹೆಸರಲ್ಲಿ ಮತ ಕೇಳಿ ಶಾಸಕರಾದವರು. ಉಡುಪಿ ಹಿಂದುತ್ವದ ಜಿಲ್ಲೆ ಎಂಬುದು ಖಾದರ್ ಅವರಿಗೆ ಗೊತ್ತಿದೆ. ಇಲ್ಲಿನ ಅಭಿವೃದ್ಧಿ ಹಾಗೂ ಪರ್ಯಾಯ ಮಹೋತ್ಸವದ ವಿಚಾರ ಬಂದಾಗ ಟೀಕಿಸಿರುವುದು ಸರಿಯಲ್ಲ, ಅವರ ಈ ನಡೆಯಿಂದ ನಮ್ಮ ಕಾರ್ಯಕರ್ತರು ನೊಂದಿದ್ದಾರೆ. ಶನಿವಾರ ಪುತ್ತಿಗೆ ಶ್ರೀಗಳ ಕಾರ್ಯಕ್ರಮಕ್ಕೆ ಖಾದರ್ ಅವರು ಬರಬೇಕಿತ್ತು, ಆಗ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಹಾಗೂ ಧಿಕ್ಕಾರಕ್ಕೆ ಸಿದ್ಧರಾಗಿದ್ದರು, ಈ ಕಾರಣದಿಂದಲೇ ಅವರು ಕಾರ್ಯಕ್ರಮಕ್ಕೆ ಬಂದಿಲ್ಲ’ ಎಂದು ಯಶ್ಪಾಲ್ ಹೇಳಿದ್ದಾರೆ.‘ಈ ಅಧಿವೇಶನದಲ್ಲಿ ಯಾರಿಗೆ ಚಳಿ ಬಿಡಿಸಬೇಕು ಅನ್ನೋದು ನಮಗೆ ಗೊತ್ತು. ಖಾದರ್ ಅವರು ಓಲೈಕೆ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾದರೆ ಸಚಿವ ಸ್ಥಾನ ಪಡೆಯುವ ಆಕಾಂಕ್ಷೆಯಲ್ಲಿದ್ದಾರೆ. ಹಿಂದುತ್ವದ ಬಗ್ಗೆ ಮಾತನಾಡುವ ಶಾಸಕರನ್ನು ಟೀಕಿಸಿದರೆ ಹೈಕಮಾಂಡ್ ಗಮನ ಸೆಳೆಯಬಹುದು ಎಂಬ ಉದ್ದೇಶ ಅವರದ್ದು. ಉಡುಪಿ ಜನರಲ್ಲಿ ಯು.ಟಿ.ಖಾದರ್ ಕ್ಷಮೆ ಯಾಚಿಸಬೇಕು’ ಎಂದವರು ಆಗ್ರಹಿಸಿದ್ದಾರೆ.