ಸಾರಾಂಶ
ವಿಜಯನಗರ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಅಂಗನವಾಡಿ ಶಾಲೆಗಳ ಕುಂದು-ಕೊರತೆಗಳ ಕುರಿತ ಸಂವಾದ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಹೊಸಪೇಟೆವಿಜಯನಗರ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹಾಗಾಗಿ ಅಂಗನವಾಡಿಗಳ ಬಲವರ್ಧನೆಗೆ ವಿಶೇಷ ಒತ್ತು ನೀಡಲಾಗಿದೆ. ಕ್ಷೇತ್ರದಲ್ಲಿ ಅಂಗನವಾಡಿಗಳ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದರು.
ನಗರದ ಸಾಯಿಲೀಲಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಂಗನವಾಡಿ ನೌಕರರೊಂದಿಗೆ ಅಂಗನವಾಡಿ ಶಾಲೆಗಳ ಕುಂದು-ಕೊರತೆಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಗನವಾಡಿ ನೌಕರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಂವಾದ ಕಾರ್ಯಕ್ರಮವನ್ನು ಒಂದು ವರ್ಷದ ಹಿಂದೆಯೇ ಕೈಗೊಳ್ಳಬೇಕಿತ್ತು. ಆದರೆ, ಕಾರಣಾಂತರದಿಂದ ತಡವಾಗಿದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಅಂಗನವಾಡಿಗಳ ಪಾತ್ರ ಹಿರಿದಾಗಿದೆ. ಹಾಗಾಗಿ ಕ್ಷೇತ್ರದ ಎಲ್ಲಾ ಅಂಗನವಾಡಿ ಶಿಕ್ಷಕಿಯರೊಂದಿಗೆ ಮುಖಾಮುಖಿ ಸಂವಾದ ನಡೆಸಲಾಗುತ್ತಿದೆ ಎಂದರು.ವಿಜಯನಗರ ಕ್ಷೇತ್ರದಲ್ಲಿ ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿಗಳಿಗೆ ಸರ್ಕಾರಿ ನಿವೇಶನ ಒದಗಿಸಿ ಕಟ್ಟಡ ನಿರ್ಮಿಸಲಾಗುವುದು. ಅಂಗನವಾಡಿ ಶಿಕ್ಷಕಿಯರಿಗೆ ಮೊಬೈಲ್ ಒದಗಿಸುವುದು ಸೇರಿದಂತೆ ಕೆಲ ಸಮಸ್ಯೆಗಳು ನನ್ನ ಗಮನಕ್ಕೆ ತಂದಿದ್ದೀರಾ? ಅವುಗಳನ್ನು ಇಲಾಖಾ ಸಚಿವರೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ ಮಾತನಾಡಿದರು. ಜಿಲ್ಲಾ ಕುಟುಂಬ ಮತ್ತು ಆರೋಗ್ಯ ಕಲ್ಯಾಣಾಧಿಕಾರಿ ಡಾ. ಎಲ್.ಆರ್. ಶಂಕರ್ ನಾಯ್ಕ, ಜಿಲ್ಲಾ ನಿರೂಪಣಾಧಿಕಾರಿ ಮುದುಕಪ್ಪ ಹರವಿ, ಸಿಡಿಪಿಒ ಸಿಂಧು ಯಲಿಗಾರ, ಟಿಎಚ್ಒ ಡಾ. ಬಸವರಾಜ್ ಸೇರಿದಂತೆ ಮೇಲ್ವಿಚಾರಕಿಯರು ಇದ್ದರು. ಅಂಗನವಾಡಿ ಶಾಲೆಗಳ ಶಿಕ್ಷಕಿಯರು ಶಾಸಕರೊಂದಿಗೆ ಸಂವಾದ ನಡೆಸಿ ಅವರ ಶಾಲೆಗಳ ಮೂಲಭೂತ ಸೌಕರ್ಯಗಳ ಬಗ್ಗೆ ವಿವರಿಸಿದರು.