ಕನ್ನಡಪ್ರಭ ವಾರ್ತೆ ಪಾಂಡವಪುರ
ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ತಾಲೂಕಿನ ಡಿಂಕಾಶೆಟ್ಟಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎಚ್.ಸಿ.ಚನ್ನಕೇಶು ವಿಶೇಷ ದಾಖಲಾತಿ ಆಂದೋಲನ ನಡೆಸಿದರು.ಶಾಲಾ ಆವರಣದಿಂದ ಶಿಕ್ಷಕರು, ಮಕ್ಕಳು ಹಾಗೂ ಗ್ರಾಮಸ್ಥರ ಜೊತೆಗೂಡಿ ಗ್ರಾಮದಲ್ಲಿ ಆರಂಭವಾದ ಜಾಥಾ ಗ್ರಾಮದ ಪ್ರತಿಬೀದಿ ಮನೆಗಳಿಗೆ ತೆರಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ದೊರೆಯುವ ಸೌಲಭ್ಯಗಳ ಕುರಿತ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಿದರು.
ವಿಶೇಷ ಜಾಥಾಗೆ ಕ್ಷೇತ್ರ ಶಿಕ್ಷಣಾಕಾರಿ ಧರ್ಮಶೆಟ್ಟಿ ಚಾಲನೆ ನೀಡಿ ಮಾತನಾಡಿ, ಯಾವುದೇ ಮಕ್ಕಳು ಶಾಲೆಯಿಂದ ಹೊರೆಗೆ ಉಳಿಯಬಾರದು ಹಾಗೂ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಮಾಡುವ ಉದ್ದೇಶದಿಂದ ಮುಖ್ಯಶಿಕ್ಷಕರು ದಾಖಲಾತಿ ಆಂದೋಲನ ನಡೆಸುತ್ತಿದ್ದಾರೆ ಎಂದರು.ಸರ್ಕಾರದಿಂದ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳು ದೊರೆಯುತ್ತಿವೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪೋಷಕರು ಲಕ್ಷಾಂತರ ರು. ನೀಡಿ ಖಾಸಗಿ ಶಾಲೆಗೆ ದಾಖಲಿಸುವ ಬದಲು ಸರ್ಕಾರಿ ಶಾಲೆಗೆ ದಾಖಲಿಸಿ ಎಂದರು.
ಮುಖ್ಯಶಿಕ್ಷಕ ಎಚ್.ಸಿ.ಚನ್ನಕೇಶು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಮವಸ್ತ್ರ, ಶೂ, ಪುಸ್ತಕ, ಬಿಸಿಯೂಟ, ವಿದ್ಯಾರ್ಥಿ ವೇತನ ಸೇರಿದಂತೆ ಎಲ್ಲವು ಉಚಿತವಾಗಿ ನೀಡುತ್ತಿದೆ. ಪೋಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಕರಪತ್ರವನ್ನು ಪ್ರತಿ ಮನೆಗೆ ನೀಡಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಇಂಗ್ಲಿಷ್ ಕಲಿಕೆಗೂ ಆದ್ಯತೆ ನೀಡಲಾಗಿದೆ. ಕಳೆದ ಮೂರು ವರ್ಷಗಳಿಂದಲೂ ಗ್ರಾಮದಲ್ಲಿ ವಿಶೇಷ ದಾಖಲಾತಿ ಆಂದೋಲನ ನಡೆಸಿಕೊಂಡು ಬರುತ್ತಿದ್ದೇವೆ. ಈ ವರ್ಷ ಶಾಲೆಗೆ ದಾಖಲಾಗುವ ಪ್ರತಿ ಮಗುವಿಗೂ ವೈಯುಕ್ತಿಕವಾಗಿ ಒಂದು ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು, ದಾಖಲಾಗುವ ಮಕ್ಕಳು ಕಡ್ಡಾಯವಾಗಿ 5ನೇ ತರಗತಿಯವರೆಗೂ ಶಾಲೆಯಲ್ಲಿ ಓದಬೇಕು ಎಂದರು.
ಇದೇ ವೇಳೆ ಗ್ರಾಮದ ಮುಖಂಡ ರಾಜೇಗೌಡರು ಶಾಲೆ 25 ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ನೀಡಿದರು. ಈ ವೇಳೆ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಪ್ರಕಾಶ್, ಶಿಕ್ಷಣ ಸಂಯೋಜಕ ರಮೇಶ್, ಸಹ ಶಿಕ್ಷಕಿ ಸವಿತ, ಎಸ್ಡಿಎಂಸಿ ಅಧ್ಯಕ್ಷ ಮಹದೇವಪ್ಪ, ಸದಸ್ಯರು ಹಾಗೂ ಪೋಷಕರು ಸೇರಿದಂತೆ ಹಲವರು ಇದ್ದರು.