ಅಥಣಿ: ಆ.21, 22 ಮತ್ತು 23 ರಂದು ವಿಶೇಷ ಲೋಕ ಅದಾಲತ್ ನಡೆಯಲಿದ್ದು, ಸುಪ್ರೀಂ ಕೋರ್ಟ್ ನಲ್ಲಿ ದೀರ್ಘಕಾಲ ಬಾಕಿ ಉಳಿದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಾಲೂಕಾ ಕಾನೂನು ಸೇವಾ ಸಮಿತಿ ಸಂಪರ್ಕಿಸಬೇಕು ಎಂದು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ, ನ್ಯಾ.ನಾಮದೇವ ಸಾಲಮಂಟಪಿ ತಿಳಿಸಿದರು.

ಅಥಣಿ ನ್ಯಾಯಾಲಯ ಸಂಕೀರ್ಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಸರ್ವೋಚ್ಚ ನ್ಯಾಯಾಲಯದಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾವಿರಾರು ಸಿವಿಲ್ ಪ್ರಕರಣಗಳನ್ನು ಶೀಘ್ರ ಮತ್ತು ಸೌಹಾರ್ದಯುತವಾಗಿ ಬಗೆಹರಿಸಲು ಸ್ಪೆಷಲ್ ಲೋಕ ಅದಾಲತ್ ಸಮಾಧಾನ ಸಮಾರೋಪ ಎನ್ನುವ ವಿಶೇಷ ಅಭಿಯಾನ ಹಮ್ಮಿಕೊಳ್ಳ ಲಾಗಿದೆ ಎಂದು ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ನ್ಯಾ.ಓಂಕಾರಮೂರ್ತಿ.ಎಚ್ ಮಾತನಾಡಿ, ಈ ವಿಶೇಷ ಅದಾಲತ್‌ನ ಪ್ರಮುಖ ವೈಶಿಷ್ಟ್ಯವೆಂದರೆ, ಪಕ್ಷಕಾರರು ತಮ್ಮ ಪ್ರಕರಣಗಳ ಇತ್ಯರ್ಥಕ್ಕಾಗಿ ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ. ತಾಲೂಕು, ಜಿಲ್ಲೆ ಹಾಗೂ ರಾಜ್ಯದಲ್ಲಿ ಎಲ್ಲೆಲ್ಲಿ ಎರಡು ಪಕ್ಷಗಳು ಮುಖಾಮುಖಿಯಾಗಿ ಚರ್ಚಿಸಿ ರಾಜಿ ಮಾಡಿ ಕೊಳ್ಳಲು ಸಾಧ್ಯವಿದೆ. ಇಲ್ಲಿಯೇ ಅವರಿಗೆ ಅವಕಾಶ ಮಾಡಿಕೊಡಲಾಗುವುದು. ಈ ವಿಶೇಷ ಲೋಕ ಅದಾಲತ್ ಮೂಲಕ ಕಾನೂನು ಸೇವೆ ನಿಮ್ಮ ಮನೆ ಬಾಗಿಲಿಗೆ ಎನ್ನುವ ಆಶಯದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು.