ಸಾರಾಂಶ
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ರೇಣುಕಾಂಬ ದೇವಿ ಸನ್ನಿಧಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಬಿಜೆಪಿ ಯುವ ಮೋರ್ಚಾದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು
ಕನ್ನಡಪ್ರಭ ವಾರ್ತೆ ಸೊರಬ
ಸಂಸದ ಬಿ.ವೈ.ರಾಘವೇಂದ್ರರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಬಿಜೆಪಿ ಯುವ ಮೋರ್ಚಾದಿಂದ ಬುಧವಾರ ತಾಲೂಕಿನ ಚಂದ್ರಗುತ್ತಿ ಗ್ರಾಮದ ಪುರಾಣ ಹಾಗೂ ಐತಿಹಾಸಿಕ ಶ್ರೀ ರೇಣುಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಪೂಜೆ ಸಲ್ಲಿಸಿದ ನಂತರ ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ ಮಾತನಾಡಿ, ಬಿ.ವೈ. ರಾಘವೇಂದ್ರರ ಅಭಿವೃದ್ಧಿ ಕಾರ್ಯ ಮೆಚ್ಚಿ ಜನತೆ ಅಪೂರ್ವ ಬೆಂಬಲ ಸೂಚಿಸಿ ಪುನಃ ಸಂಸದರಾಗಿ ಆಯ್ಕೆ ಮಾಡಿದ್ದಾರೆ. ಈ ಹಿಂದೆಯೂ ಚುನಾವಣೆ ಪೂರ್ವದಲ್ಲಿ ರಾಘವೇಂದ್ರರು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದರ್ಶನಾಶೀರ್ವಾದ ಪಡೆದಿದ್ದರು. ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು ಎಂದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಆಶೀಕ್ ನಾಗಪ್ಪ ಮಾತನಾಡಿ, ಸಂಸದ ರಾಘವೇಂದ್ರರು ಲೋಕಸಭಾ ಚುನಾವಣೆಯಲ್ಲಿ ೨.೫ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜಿಲ್ಲೆ ಅಭಿವೃದ್ಧಿ ಶಕೆಗೆ ಮುನ್ನುಡಿ ಬರೆದು ಸತತ 4ನೇ ಬಾರಿ ಜಯ ಸಾಧಿಸಿರುವ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ರೈಲ್ವೆ ಅಥವಾ ವಿಮಾನಯಾನ ಖಾತೆ ಲಭಿಸಲಿ. ಈ ಮೂಲಕ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳು ನಡೆಯಲಿ ಎಂದರು.ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್.ಚಿದಾನಂದಗೌಡ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ವಿಶೇಷ ಆಹ್ವಾನಿತ ಗುರುಮೂರ್ತಿ ದೇವತಿಕೊಪ್ಪ, ತಾ. ಪ್ರ. ಕಾರ್ಯದರ್ಶಿ ಹರೀಶ್ ವಿದ್ಯುತ್ ನಗರ, ಚಂದ್ರಗುತ್ತಿ ಮಹಾಶಕ್ತಿ ಕೇಂದ್ರದ ಪ್ರ.ಕಾ. ಪ್ರಸನ್ನ ಶೇಟ್ ಸೇರಿ ಇತರರಿದ್ದರು.