ಸಾರಾಂಶ
ಅಯೋಧ್ಯೆಯಲ್ಲಿ ಬಾಲರಾಮನ ದೇವರ ಪ್ರಾಣ ಪ್ರತಿಷ್ಠಾಪನ ಮಹೋತ್ಸವ ಸೋಮವಾರ ನಡೆಯುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಹಾಗೂ ನಗರದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ ಹವನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಲು ಸಿದ್ಧತೆ ಮಾಡಲಾಗಿದೆ.
ಹಾಸನದ ಹಲವು ವೃತ್ತಗಳು ಕೇಸರಿಮಯ, ಸಂಭ್ರಮದ ವಾತಾವರಣ
ಕನ್ನಡಪ್ರಭ ವಾರ್ತೆ ಹಾಸನಅಯೋಧ್ಯೆಯಲ್ಲಿ ಬಾಲರಾಮನ ದೇವರ ಪ್ರಾಣ ಪ್ರತಿಷ್ಠಾಪನ ಮಹೋತ್ಸವ ಸೋಮವಾರ ನಡೆಯುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಹಾಗೂ ನಗರದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ ಹವನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಲು ಸಿದ್ಧತೆ ಮಾಡಲಾಗಿದೆ.
ಬಹಳ ವರ್ಷದ ಕನಸ್ಸು ನನಸಾಗಿ ಈಗ ಸುಂದರವಾದ ರಾಮಮಂದಿರ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ಧವಾಗಿದೆ. ಜ.೨೨ರ ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ (ಬಾಲ ರಾಮ) ದೇವರ ಪ್ರಾಣ ಪ್ರತಿಷ್ಠಾಪನ ಮಹೋತ್ಸವ ನಡೆಯಲಿದೆ. ಇದರ ಬೆನ್ನಲ್ಲೇ ಇಡೀ ಜಿಲ್ಲೆಯಲ್ಲಿ ಈ ಕಾರ್ಯಕ್ರಮದ ಸಂಭ್ರಮಾಚರಣೆಗೆ ಸಿದ್ಧತೆ ನಡೆದಿದೆ. ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ನಗರದ ಹಲವು ವೃತ್ತಗಳನ್ನು ಕೇಸರಿ ಬ್ಯಾನರ್ ಬಂಟಿಂಗ್ಸ್ಗಳಿಂದ ಅಲಂಕರಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೇರ ಪ್ರಸಾರವನ್ನು ಜನರು ವೀಕ್ಷಣೆ ಮಾಡಲು ಅನುಕೂಲವಾಗುವಂತೆ ನಗರದ ಪ್ರಮುಖ ವೃತ್ತಗಳಲ್ಲಿ ಎಲ್ಇಡಿ ಪರದೆಗಳನ್ನು ಹಾಕಲಾಗಿದೆ.ನಗರದ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ, ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಮಾರುತಿ ದೇವಾಲಯ ಸೇರಿದಂತೆ ಹಾಸನ ನಗರದಲ್ಲಿ ಒಟ್ಟು ೬೦ ದೇವಸ್ಥಾನಗಳಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಲು ವ್ಯವಸ್ತೆ ಕಲ್ಪಿಸಲಾಗಿದೆ. ಇನ್ನು ಬೆಳಗಿನಿಂದ ಸಂಜೆವರೆಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಭಜನೆ, ಭಕ್ತಿಗೀತೆ, ರಾಮನ ಜಪ, ಹೋಮಗಳನ್ನು ಏರ್ಪಡಿಸಲಾಗಿದೆ.ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ನಗರದ ಸೀತಾರಾಮಾಂಜನೇಯ ದೇವಾಲಯದಲ್ಲಿ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದ ಹಿನ್ನೆಲೆ ಹಾಕಿರುವ ಬ್ಯಾನರ್.