ಕನ್ನಡಪ್ರಭ ವಾರ್ತೆ ಸೊರಬ

ಭಾರತೀಯ ವಾಯುಸೇನೆ ಉಗ್ರರ ನೆಲೆ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಡೆಸಿದ ದಾಳಿ ಹಿನ್ನೆಲೆ ಬಿಜೆಪಿ ಸೊರಬ ಮಂಡಲದ ಚಂದ್ರಗುತ್ತಿ ಮಹಾಶಕ್ತಿ ಕೇಂದ್ರದ ವತಿಯಿಂದ ಚಂದ್ರಗುತ್ತಿ ಗ್ರಾಮದ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸೈನಿಕರಿಗೆ ಶಕ್ತಿ ಮತ್ತು ಆಯಷ್ಯಕ್ಕಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ತಾಲೂಕು ಮಂಡಲದ ಯುವ ಮೋರ್ಚಾ ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ ಮಾತನಾಡಿ, ಪಹಲ್ಗಾಮ್ ದಾಳಿಯಲ್ಲಿ ಹಿಂದೂಗಳನ್ನೇ ಗುರಿಯಾಗಿಸಿ ಉಗ್ರರು ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕರ ಕೇಂದ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ತಕ್ಕ ಉತ್ತರ ನೀಡಿದೆ. ಉಗ್ರರ ನೆಲೆಗೊಂಡ ಅಡಗು ತಾಣಗಳನ್ನು ಧ್ವಂಸ ಮಾಡಿದ್ದಾರೆ. ಭಾರತೀಯ ಸೈನ್ಯದ ಕಾರ್ಯಾಚರಣೆ ದೇಶಕ್ಕೆ ಹೆಮ್ಮೆ ತಂದಿದೆ ಎಂದರು.

ಈ ಸಂದರ್ಭದಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು. ಭಾರತೀಯ ಸೈನಿಕರ ಕಾರ್ಯಾಚರಣೆಗೆ ಶ್ಲಾಘನೀಯ ವ್ಯಕ್ತಪಡಿಸಿದ್ದರು.

ಪೂಜಾ ಸಮಯದಲ್ಲಿ ಮುಖಂಡ ಈಶ್ವರಪ್ಪ ಚನ್ನಪಟ್ಟಣ, ಸೊರಬ ಮಂಡಲದ ಯುವ ಮೋರ್ಚಾ ಅಧ್ಯಕ್ಷ ಪೂ ರಾಜು ಮಾವಿನಬಳ್ಳಿಕೊಪ್ಪ, ಚಂದ್ರಗುತ್ತಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಶೇಟ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೊಳೆಯಮ್ಮ, ಪ್ರಮುಖರಾದ ಚಂದ್ರು ನಾಯ್ಕ, ಗುರುಗೌಡ, ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಉಪಸ್ಥಿತರಿದ್ದರು.