ಬೇಲೂರು: ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಹುಟ್ಟುಹಬ್ಬ ಅಂಗವಾಗಿ ಬೇಲೂರು ಚನ್ನಕೇಶವ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಪಟ್ಟಣದ ಶ್ರೀ ಚನ್ನಕೇಶವ ಸ್ವಾಮಿ ದೇಗುಲದಲ್ಲಿ ಮಾಜಿ ಪ್ರಧಾನ ಮಂತ್ರಿ ಹಾಗೂ ಜಾತ್ಯತೀತ ಜನತಾದಳದ ಹಿರಿಯ ನಾಯಕ ಎಚ್ ಡಿ ದೇವೇಗೌಡ ಅವರ 94 ನೇ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಾಗೂ ಅರ್ಚನೆ ನೆರವೇರಿಸಲಾಯಿತು. ಈ ವೇಳೆ ಎಚ್.ಡಿ.ಸಿ.ಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ಎಂ.ಎ ನಾಗರಾಜ್ ಮಾತನಾಡಿ, ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರು ರಾಜ್ಯ ಹಾಗೂ ದೇಶದ ರಾಜಕೀಯದಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ನಾಯಕರು. ರೈತರು, ಬಡವರು ಹಾಗೂ ಸಾಮಾನ್ಯ ಜನರ ಪರವಾಗಿ ಸದಾ ಧ್ವನಿಯಾಗಿರುವ ದೇವೇಗೌಡರು ಎಲ್ಲರಿಗೂ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದರು.ಮಾಜಿ ಶಾಸಕ ಕೆ ಎಸ್ ಲಿಂಗೇಶ್ ಮಾತನಾಡಿ, ದೇವೇಗೌಡ ಅವರು ದೇಶ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರು. ಸರಳತೆ, ಪ್ರಾಮಾಣಿಕತೆ ಹಾಗೂ ರೈತರ ಪರ ಕಾಳಜಿಯಿಂದ ಜನಮನ ಗೆದ್ದ ನಾಯಕರು.

ರಾಜಕೀಯ ಜೀವನದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದರೂ ಸಾಮಾನ್ಯ ಜನರೊಂದಿಗೆ ಬೆರೆತು ಬದುಕಿದ ದೇವೇಗೌಡರು ಯುವ ರಾಜಕಾರಣಿಗಳಿಗೆ ಪ್ರೇರಣೆಯಾಗಿದ್ದಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಡಿ ಚಂದ್ರೇಗೌಡ, ಟಿಎಪಿಸಿಎಂಎಸ್ ಅದ್ಯಕ್ಷ ಮಲ್ಲೇಶ್ ಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ದಿನೇಶ್, ತಾಪಂ ಮಾಜಿ ಅಧ್ಯಕ್ಷ ಬಾಣಸವಳ್ಳಿ ಅಶ್ವಥ್, ಶ್ರೀವತ್ಸ, ಕಾಚಿಹಳ್ಳಿ ದಿಲೀಪ್, ಅಬ್ದುಲ್ ಸುಭಾನ್, ಬಲ್ಲೇನಹಳ್ಳಿ ರವಿಕುಮಾರ್ ಸೇರಿದಂತೆ ಇತರರು ಹಾಜರಿದ್ದರು.