ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಪೂರ್ಣ ಖರ್ಚು ಮಾಡಿ: ಜಿಲ್ಲಾಧಿಕಾರಿ

| Published : Sep 04 2025, 01:01 AM IST

ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಪೂರ್ಣ ಖರ್ಚು ಮಾಡಿ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಜಿಲ್ಲೆಯ ವಿವಿಧ ಇಲಾಖೆಗಳಿಗೆ ವಿವಿಧ ಉದ್ದೇಶಿತ ಯೋಜನೆಗಳಿಗಾಗಿ ಬಿಡುಗಡೆಯಾಗುವ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ನಿಗದಿತ ಅವಧಿಯೊಳಗೆ ಅಧಿಕಾರಿಗಳು ಖರ್ಚು ಮಾಡಬೇಕು.

ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆಕನ್ನಡಪ್ರಭ ವಾರ್ತೆ ಬಳ್ಳಾರಿ

ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಜಿಲ್ಲೆಯ ವಿವಿಧ ಇಲಾಖೆಗಳಿಗೆ ವಿವಿಧ ಉದ್ದೇಶಿತ ಯೋಜನೆಗಳಿಗಾಗಿ ಬಿಡುಗಡೆಯಾಗುವ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ನಿಗದಿತ ಅವಧಿಯೊಳಗೆ ಅಧಿಕಾರಿಗಳು ಖರ್ಚು ಮಾಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜುಲೈ-2025ರ ಅಂತ್ಯದವರೆಗಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಇಲಾಖೆ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನೊಳಗೊಂಡಂತೆ ಹಲವು ಇಲಾಖೆಗಳು ನಿಗದಿತ ಗುರಿ ಸಾಧನೆ ಮಾಡಬೇಕು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಹಂಚಿಕೆಗೆ ಸಂಬಂಧಿಸಿದಂತೆ ವಿವಿಧ ಇಲಾಖಾವಾರು ಯೋಜನೆಗಳ ಕುರಿತು ಹೆಚ್ಚು ಪ್ರಚಾರ ನೀಡಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಶೀಘ್ರ ತಲುಪಿಸಲು ಕ್ರಮವಹಿಸಬೇಕು ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಮಾತನಾಡಿ, 2025-26ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಜುಲೈ ಅಂತ್ಯದವರೆಗೆ ವಿವಿಧ ಇಲಾಖೆಗಳಿಗೆ ಒಟ್ಟಾರೆ ₹43128.48 ಲಕ್ಷ ಅನುದಾನ ಹಂಚಿಕೆಯಾಗಿದೆ. ಅದರಲ್ಲಿ ₹8557.99 ಲಕ್ಷ ಬಿಡುಗಡೆಯಾಗಿದ್ದು, ಈ ಪೈಕಿ ₹7848.60 ಲಕ್ಷ ಮಾತ್ರ ಖರ್ಚು ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಬಿಡುಗಡೆಯಾದರು ಅನುದಾನವನ್ನು ಖರ್ಚು ಮಾಡಿಲ್ಲವೆಂದರೆ ಅದು ತಪ್ಪಾಗಲಿದೆ. ಬಾಕಿಯಿರುವ ಎಲ್ಲಾ ಅನುದಾನವನ್ನು ಸೆಪ್ಟೆಂಬರ್ ಅಂತ್ಯದೊಳಗೆ ಬಳಸಿಕೊಳ್ಳಬೇಕು. ಇಲ್ಲವಾದಲ್ಲಿ ಅನುದಾನ ಕೈ ತಪ್ಪುತ್ತದೆ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ ಪ್ರಗತಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಇಲಾಖೆಯು ನಿಧಾನಗತಿಯಲ್ಲಿದ್ದು, ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಂದ ಅಗತ್ಯ ಮಾಹಿತಿ ಸಲ್ಲಿಸುವಂತೆ ಯೋಜನಾ ನಿರ್ದೇಶಕರಿಗೆ ಪತ್ರ ಬರೆಯಿರಿ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಕೆಲ ಇಲಾಖೆಗಳು ವಿವಿಧ ಕಾಮಗಾರಿಗಳಿಗಾಗಿ ಹಣ ವ್ಯಯಿಸಿ ಕೆಲಸ ಮಾಡಿಸಿರುತ್ತೀರಿ; ಆದರೆ ಬಿಲ್ ಮಾಡಿರುವುದಿಲ್ಲ, ಕೂಡಲೇ ಬಿಲ್ ಮಾಡಿ ಸಲ್ಲಿಸಬೇಕು ಎಂದು ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಸೇರಿ ಕೃಷಿ, ತೋಟಗಾರಿಕೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.