ವಿದ್ಯಾರ್ಥಿಗಳು ಹಾಗೂ ಯುವ ಜನರು ಕ್ರೀಡಾ ಚಟುವಟಿಕೆಗಳೆಂದು ನಿರ್ಲಕ್ಷ ಮಾಡದೆ ಶಿಕ್ಷಣಕ್ಕೆ ನೀಡುವಷ್ಟು ಮಹತ್ವವನ್ನು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡುವ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಂಕಲ್ಪ ಮಾಡಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಯುವಜನರು, ವಿದ್ಯಾರ್ಥಿಗಳಿಗೆ ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಬೇಕು ಎಂದು ಶಾಸಕ ಎಚ್.ಟಿ.ಮಂಜು ಕರೆ ನೀಡಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ಆದಿಚುಂಚನಗಿರಿಯ ಹೇಮಗಿರಿ ಶಾಖಾಮಠಕ್ಕೆ ಸೇರಿದ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡಾ ಚಟುವಟಿಕೆಗಳಲ್ಲಿ ಸೋಲು ಗೆಲುವು ಸಾಮಾನ್ಯ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸತತ ಪ್ರಯತ್ನದಿಂದ ಮಾತ್ರ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಗುರಿ ಮುಟ್ಟಲು ಸಾಧ್ಯ ಎಂದರು.

ವಿದ್ಯಾರ್ಥಿಗಳು ಹಾಗೂ ಯುವ ಜನರು ಕ್ರೀಡಾ ಚಟುವಟಿಕೆಗಳೆಂದು ನಿರ್ಲಕ್ಷ ಮಾಡದೆ ಶಿಕ್ಷಣಕ್ಕೆ ನೀಡುವಷ್ಟು ಮಹತ್ವವನ್ನು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡುವ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಪ್ರಸನ್ನ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಶಿಕ್ಷಣ ಮತ್ತು ಕ್ರೀಡೆ ಬಹಳ ಮುಖ್ಯ. ಇದರಿಂದ ಆರೋಗ್ಯ ಲವಲವಿಕೆ ಉತ್ಸಾಹ ಮೂಡುವ ಜೊತೆಗೆ ದೈಹಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದರು.

ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಶ್ರೀರಾಮ ಯೋಗೀಶ್ವರ ಮಠದ ಶ್ರೀಶಿವಬಸವ ಸ್ವಾಮೀಜಿಗಳು ಕ್ರೀಡಾ ಜ್ಯೋತಿ ಸ್ವೀಕರಿಸಿ, ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಯ ಅನಾವರಣಕ್ಕೆ ಕ್ರೀಡಾಕೂಟವು ಉತ್ತಮವಾದ ವೇದಿಕೆಯಾಗಿದೆ ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಬೇಕು ಎಂದು ಸಲಹೆ ನೀಡಿದರು.

ಕ್ರೀಡಾಕೂಟದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಪರೀಕ್ಷಕ ಪ್ರಭುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ, ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಎಲ್.ಮಂಜುನಾಥ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಸಿ.ಲೋಕೇಶ್, ಕಾರ್ಯದರ್ಶಿ ಮಹದೇವ, ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.