ಸಾರಾಂಶ
ಗದಗ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದು ಡಿಡಿಪಿಐ ಜಿ.ಎಲ್. ಬಾರಾಟಕ್ಕೆ ಹೇಳಿದರು.
ಶುಕ್ರವಾರ ಗದಗ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಪಂಚಾಯತ್ ಗದಗ, ಶಾಲಾ ಶಿಕ್ಷಣ ಇಲಾಖೆ, ಗದಗ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಶಹರ ವಲಯ, ಗದಗ ಶಹರ ವಲಯ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಗದಗ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಸತತ ಪ್ರಯತ್ನ ಮಾಡಿ ಸಕ್ರಿಯವಾಗಿ ಕ್ರೀಡೆಗಳಲ್ಲಿ ಭಾಗವಹಿಸಿದಾಗ ದೈಹಿಕ, ಮಾನಸಿಕವಾಗಿ ಸದೃಢವಾಗಲು ಸಾಧ್ಯ. ಯಾರ ದೇಹ ಸದೃಢವಾಗಿರುತ್ತದೆಯೋ ಅವರ ಮನಸ್ಸು ಸದೃಢವಾಗಿರುತ್ತದೆ. ಇದರಿಂದಾಗಿ ಶೈಕ್ಷಣಿಕವಾಗಿಯೂ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ನಿರ್ಣಾಯಕರು ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪಾರದರ್ಶಕವಾಗಿ ನಿರ್ಣಯ ನೀಡಬೇಕು. ಕ್ರೀಡಾಪಟುಗಳು ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿ ನಿಮ್ಮ ಬದುಕನ್ನು ರೂಪಿಸಿಕೊಳ್ಳಿ ಎಂದರು.
ಕ್ರೀಡಾಜ್ಯೋತಿ ಸ್ವೀಕರಿಸಿದ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಮಾತನಾಡಿ, ಓಲಂಪಿಕ್ ಹಾಗೂ ಪ್ಯಾರಾ ಒಲಿಂಪಿಕ್ಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಸಾಧನೆಗಳನ್ನು ವಿದ್ಯಾರ್ಥಿಗಳು ಪ್ರೇರಣೆಯಾಗಿ ಪಡೆದು ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ವಿಜೇತರಾಗಿ ಗದಗ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಗದಗ ತಾಲೂಕು ಅಕ್ಷರ ದಾಸೋಹ ಅಧಿಕಾರಿ ಶಂಕರ ಹಡಗಲಿ, ಗದಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಕೊಟ್ರೇಶ ವಿಭೂತಿ, ಗದಗ ಶಹರ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಪಿ. ಪ್ರಭಯ್ಯನಮಠ, ಗದಗ ಗ್ರಾಮೀಣ ದೈಹಿಕ ಶಿಕ್ಷಣಾಧಿಕಾರಿ ಟಿ.ಎಸ್. ಪವಾರ, ಎಂ.ಎಸ್. ಕುಚಬಾಳ, ಶರಣಪ್ಪ ನಾಗರಳ್ಳಿ, ಎಸ್.ಎಂ.ಪೂಜಾರ, ಎಸ್.ಕೆ. ಮಂಗಳಗುಡ್ಡ, ರವಿ ಕೋಟಿ, ಡಿ.ಬಿ. ಮೆಣಸಿನಕಾಯಿ, ಎಸ್.ಎಂ. ಉಮ್ಮಣ್ಣವರ, ಎಸ್.ಎಂ. ಮಾಶಾಳ, ಚಂದ್ರಕಾಂತ ಕಬಾಡಿ ಮುಂತಾದವರು ಉಪಸ್ಥಿತರಿದ್ದರು.
ಗದಗ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಮುಳಗುಂದ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್.ಎಂ. ಉಮ್ಮಣ್ಣವರ ನಿರೂಪಿಸಿದರು. ಗದಗ ಶಹರ ದೈಹಿಕ ಶಿಕ್ಷಣ ಅಧಿಕಾರಿ ಜೆ.ಬಿ. ಅಣ್ಣಿಗೇರಿ ವಂದಿಸಿದರು.