ಆಧುನಿಕತೆಯ ಸವಾಲು ಎದುರಿಸಲು ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕಾದ ಅವಶ್ಯಕತೆಯಿದೆ.
ಕನ್ನಡಪ್ರಭ ವಾರ್ತೆ ಶಿರಸಿ
ಮಾನವ ಸಂಪನ್ಮೂಲದ ಸಾಮರ್ಥ್ಯ ಹೆಚ್ಚಿಸುವಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಎಚ್. ಸೂರ್ಯವಂಶಿ ಹೇಳಿದರು.ಶುಕ್ರವಾರ ಸ್ಕೊಡ್ವೆಸ್ ಸಂಸ್ಥೆಯ ಸಿಬ್ಬಂದಿಗಳ 2025-26ರ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಆಧುನಿಕತೆಯ ಸವಾಲು ಎದುರಿಸಲು ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕಾದ ಅವಶ್ಯಕತೆಯಿದೆ. ಜಾಗತಿಕ ಬದಲಾವಣೆಯ ಪೈಪೋಟಿಯನ್ನು ಎದುರಿಸಲು ಸದೃಢಗೊಳ್ಳುವ ವ್ಯಕ್ತಿಗಳಿಗೆ ಎಲ್ಲಾ ಅವಕಾಶಗಳು ಹುಡುಕಿಕೊಂಡು ಬರುತ್ತದೆ ಎಂದರು. ಸೇವಾ ಕ್ಷೇತ್ರದಲ್ಲಿ ವಿಶೇಷ ಸ್ಥಾನಮಾನವನ್ನು ಹೊಂದಿರುವ ಸ್ಕೊಡ್ವೆಸ್ ಸಂಸ್ಥೆ ಸಮಾಜದ ಆಸ್ತಿ ಎಂದರು.ಕ್ರೀಡಾಜ್ಯೋತಿಯನ್ನು ಹಸ್ತಾಂತರಿಸಿದ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಕ್ರೀಡೆ ಎನ್ನುವುದು ಪ್ರತಿಯೊಬ್ಬನ ಜೀವನದ ಅವಿಭಾಜ್ಯ ಅಂಗ. ಜೀವನದ ಪ್ರತೀ ಹಂತವೂ ಸ್ಪರ್ಧಾತ್ಮಕವಾಗಿಯೇ ಇರುವುದರಿಂದ ಪೈಪೋಟಿಯನ್ನು ಎದುರಿಸುವ ವ್ಯಕ್ತಿಗಳು ಮಾತ್ರ ಜೀವನದಲ್ಲಿ ಗೆಲ್ಲಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ವ್ಯಕ್ತಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಕ್ರೀಡಾ ಚಟುವಟಿಕೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದರು.ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಆರ್. ವಾಸುದೇವ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಗಳಾಗಿದ್ದ ರಾಷ್ಟ್ರೀಯ ಪ್ರಶಸ್ತಿ ವಿಜೇತ ಹಾಗೂ ಸಾಮಾಜಿಕ ಕಾರ್ಯಕರ್ತ ಎಸ್.ಎಸ್.ಭಟ್ಟ ಲೋಕೇಶ್ವರ, ಸ್ಕೊಡ್ವೆಸ್ ಸಂಸ್ಥೆಯ ಕಾರ್ಯದರ್ಶಿ ಸರಸ್ವತಿ ಎನ್. ರವಿ, ಸಹ-ಕಾರ್ಯದರ್ಶಿ ಪ್ರೊ. ಕೆ.ಎನ್. ಹೊಸಮನಿ, ಕಾರ್ಯಕಾರಿ ಸಮಿತಿ ಸದಸ್ಯ ದಯಾನಂದ ಅಗಾಸೆ ಮಾತನಾಡಿದರು. ಸ್ಕೊಡ್ವೆಸ್ನ ಉಪಾಧ್ಯಕ್ಷ ಕುಮಾರ್ ವಿ. ಕೂರ್ಸೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ಸ್ಕೊಡ್ವೆಸ್ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ಸ್ವಾಗತಿಸಿದರು.ಸ್ಕೊಡ್ವೆಸ್ನ ಕಾರ್ಯಕ್ರಮಾಧಿಕಾರಿ ಡಾ. ನಾರಾಯಣ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 200ಕ್ಕೂ ಹೆಚ್ಚು ಸ್ಕೊಡ್ವೆಸ್ನ ಸಿಬ್ಬಂದಿ ವಿವಿಧ ಕ್ರೀಡೆಯಲ್ಲಿ ಭಾಗವಹಿಸಿದ್ದರು.