ಸಾರಾಂಶ
ಹಿರೇಕೆರೂರು: ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಸ್ಪರ್ಧಾಮನೋಭಾವದಿಂದ ಪಾಲ್ಗೊಂಡು ಕ್ರೀಡೆಯಲ್ಲಿ ಸಾಧನೆ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಸಂಗಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹಿರೇಕೆರೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪ್ರತಿಯೊಬ್ಬರು ಕ್ರೀಡಾಕೂಟಗಳಲ್ಲಿ ಕ್ರೀಡಾಸಕ್ತಿಯಿಂದ ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ನಿರ್ಣಾಯಕರು ತಾರತಮ್ಯ ಮಾಡದೇ ಸೂಕ್ತ ನಿರ್ಣಯಗಳನ್ನು ನೀಡುವ ಮೂಲಕ ಉತ್ತಮ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕು ಎಂದರು.ಪಟ್ಟಣ ಪಂಚಾಯತ ಅಧ್ಯಕ್ಷೆ ಸುಧಾ ಚಿಂದಿ ಓಲಂಪಿಕ್ ಧ್ವಜಾರೋಹಣ ನೆರವೇರಿಸಿದರು. ಪಪಂ ಉಪಾಧ್ಯಕ್ಷ ರಾಜು ಕರಡಿ ಕ್ರೀಡಾ ಜ್ಯೋತಿ ಬೆಳಗಿಸಿದರು. ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿ ಹುಚಗೊಂಡರ ಅಧ್ಯಕ್ಷತೆ ವಹಿಸಿದ್ದರು. ಪಪಂ ಸದಸ್ಯ ಮಹೇಂದ್ರ ಬಡಳ್ಳಿ, ಪ್ರಾಚಾರ್ಯರಾದ ಕುಮಾರನಾಯ್ಕ್ ಜಿ.ಎಸ್., ಡಿ.ಮಹದೇವ, ಕೆ.ಸಿ.ಉಕ್ಕುಂದ, ಪಿ.ಜಿ. ಜೋಶಿ, ಎಂ.ಸಿ. ಪಾಟೀಲ, ಮುಖ್ಯಶಿಕ್ಷಕ ರಾಜು ತೆಂಬದ, ದೈಹಿಕ ಶಿಕ್ಷಣ ಉಪನ್ಯಾಸಕ ಎಂ.ಬಿ. ಸಣ್ಣಕ್ಕಿ, ಪಿ.ಎಚ್. ಇಂಗಳಗೊಂದಿ ಸೇರಿದಂತೆ ವಿವಿಧ ಕಾಲೇಜುಗಳ ಉಪನ್ಯಾಸಕರು ಕ್ರೀಡಾಪಟುಗಳು ಇದ್ದರು.