ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಸಮಾಜದ ಅಭಿವೃದ್ಧಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡ ಪ್ರತಿಯೊಬ್ಬ ಸಂತರು, ಶರಣರು ಹಾಗೂ ಮಹಾನ್ ವ್ಯಕ್ತಿಗಳು ಸಮಾಜದ ಆಸ್ತಿ. ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಅವುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಪಸರಿಸುವ ಕಾರ್ಯವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಅವರು ಶನಿವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದರು.ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ವಚನಗಳ ಸಾರ, ಧರ್ಮನಿಷ್ಠೆ, ಧಾರ್ಮಿಕ ಭಾವನೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜೀವನದಲ್ಲಿ ಬಂದ ಕಷ್ಟಗಳನ್ನು ದೇವರ ಸ್ಮರಣೆಯ ಮೂಲಕ ಎದುರಿಸಿ ಸಾಧನೆ ಮಾಡುವ ಮೂಲಕ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದರು.ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲ ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು.ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಅಧ್ಯಕ್ಷ ಸಿದ್ದಬಸಯ್ಯ ಚಿಕ್ಕಮಠ, ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಪ್ರಕಾಶ್ ಸಜ್ಜನ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಹೇಮರೆಡ್ಡಿ ಮಲ್ಲಮ್ಮರವರ ಅಭಿಮಾನಿ ಬಳಗದವರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಲಾಖೆಯ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ, ವಂದಿಸಿದರು.