ನಗರದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ೪೦ನೇ ವಾರ್ಷಿಕೋತ್ಸವದ ಅಂಗವಾಗಿ ಸೆಪ್ಟಂಬರ್ 6 ರಂದು ವೈಭವದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ ತುಮಕೂರುನಗರದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ೪೦ನೇ ವಾರ್ಷಿಕೋತ್ಸವದ ಅಂಗವಾಗಿ ಸೆಪ್ಟಂಬರ್ 6 ರಂದು ವೈಭವದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಮಧ್ಯಾಹ್ನ 3 ಗಂಟೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಶ್ರೀ ಕೃಷ್ಣಲೋಕ ವೈಭವ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಧರ್ಮಸ್ಥಳದ ಡಾ.ಡಿ. ವೀರೇಂದ್ರ ಹೆಗ್ಗಡೆ, ಕೇಂದ್ರ ಸಚಿವ ವಿ.ಸೋಮಣ್ಣ, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಶಾಸಕರಾದ ಕೆ.ಎನ್. ರಾಜಣ್ಣ, ಜಿ.ಬಿ. ಜ್ಯೋತಿಗಣೇಶ್, ಬಿ.ಸುರೇಶ್ಗೌಡ, ರಾಜ್ಯ ಕಲ್ಲು ಗಣಿಗಾರಿಕೆ ಮಾಲೀಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಭಾಸ್ಕರ್, ಜನ್ಮಾಷ್ಟಮಿ ಸಮಿತಿ ಅಧ್ಯಕ್ಷೆ ರೇಖಾ ಮಹೇಶ್ ಭಾಗವಹಿಸುವರು. ಅಂದು ಕಾಲೇಜು ಮೈದಾನದಲ್ಲಿ ಸಾರ್ವಜನಿಕರಿಗೆ ರಂಗೋಲಿ ಹಾಗೂ ಭಜನಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮೊದಲು ಸಾರ್ವಜನಿಕರಿಗೆ ವಿವಿಧ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಇದರ ಪ್ರಯುಕ್ತ ರಾಮಮಂದಿರದಲ್ಲಿ ಭಗವದ್ಗೀತೆ ಕಂಠಪಾಠ ಸ್ಪರ್ಧೆ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು.ಸ್ವಾಗತ ಸಮಿತಿ ಅಧ್ಯಕ್ಷ ಭಾಸ್ಕರ್ ಸ್ಪರ್ಧೆಗಳನ್ನು ಉದ್ಘಾಟಿಸಿದರು.ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷೆ ರೇಖಾ ಮಹೇಶ್, ಪ್ರಧಾನ ಕಾರ್ಯದರ್ಶಿ ರೇಖಾ ಶಿವಕುಮಾರ್, ಮುಖಂಡರಾದ ಗ.ಸಿ.ಶ್ರೀನಿವಾಸ್, ಶೇಷಾದ್ರಿಪುರಂ ಶಾಲೆ ಪ್ರಾಂಶುಪಾಲೆ ಸೌಮ್ಯ, ಪರಶುರಾಮಯ್ಯ, ಸಪ್ನಾ ಪಾಟೀಲ್, ವೆಂಕಟ್ಜೋಯಿಸ್ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.