ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಪ್ರಸಿದ್ಧ ಬೇಬಿ ಬೆಟ್ಟದ ದನಗಳ ಜಾತ್ರಾ ಮಹೋತ್ಸವದಲ್ಲಿ ಮಂಗಳವಾರ ಶ್ರೀ ಮಹದೇಶ್ವರ ಹಾಗೂ ಶ್ರೀಸಿದ್ಧೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.ಜಾತ್ರೆ ಆವರಣದಲ್ಲಿ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದ ಬಳಿಕ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಶ್ರೀರಾಮಯೋಗೀಶ್ವರ ಪೀಠಾಧ್ಯಕ್ಷ ಶ್ರೀ ಶಿವಬಸವಸ್ವಾಮೀಜಿ, ಸಿದ್ಧಗಂಗಾಮಠದ ಶಿವಸಿದ್ಧೇಶ್ವರ ಸ್ವಾಮೀಜಿ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ ನೀಡಿದರು.
ರಥೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಭಾಗವಹಿಸಿ ಉಘೇ ಮಾದಪ್ಪ... ಉಘೇ ಮಾದಪ್ಪ ಎಂಬ ಘೋಷಣೆ ಕೂಗುತ್ತ ಹಣ್ಣು, ಜವನ ಎಸೆದು ಭಕ್ತಿ ಭಾವ ಪ್ರದರ್ಶಿಸಿದರು.ದೇವಸ್ಥಾನದ ಸುತ್ತಲೂ ರಥವನ್ನು ಎಳೆಯುವ ಮೂಲಕ ಭಕ್ತರು ಭಕ್ತಿ ಸಮರ್ಪಸಿದರು. ರಥೋತ್ಸವದಲ್ಲಿ ಸಮಾಜ ಸೇವಕ ಕೆ.ಆರ್.ಪೇಟೆ ಆರ್ಟಿಒ ಮಲ್ಲಿಕಾರ್ಜುನ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಜಾತ್ರೆ ಅಂಗವಾಗಿ ಶ್ರೀಮಹದೇಶ್ವರ ಹಾಗೂ ಶ್ರೀ ಸಿದ್ಧೇಶ್ವರಸ್ವಾಮಿ ರಥೋತ್ಸವವು ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಿಂದಲೂ ಆಚರಣೆ ಮಾಡಿಕೊಂಡು ಬರಲಾಗಿದೆ. ಮೈಸೂರು ಮಹಾರಾಜರು ರಥೋತ್ಸವ ಹಾಗೂ ದನಗಳ ಜಾತ್ರೆ ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಹಾಗಾಗಿ ಅವರನ್ನು ಜಾತ್ರಾ ಸಮಿತಿ ವತಿಯಿಂದ ಅಭಿನಂದಿಸುವುದಾಗಿ ತಿಳಿಸಿದರು.ಪಾಂಡವಪುರ ತಾಲೂಕಿನ ಬೇಬಿಬೆಟ್ಟದ ಜಾತ್ರಾ ಮಹೋತ್ಸವದಲ್ಲಿ ಶ್ರೀಮಹದೇಶ್ವರ ಹಾಗೂ ಶ್ರೀಸಿದ್ಧೇಶ್ವರಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಜಾತ್ರೆಯಲ್ಲಿ ಬಿ.ವೈ.ವಿಜಯೇಂದ್ರ, ಸಂಸದ ಯದುವೀರ್ ಭಾಗಿ:ಪಾಂಡವಪುರ: ಬೇಬಿ ಬೆಟ್ಟದಲ್ಲಿ ದನಗಳ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರು ಸಂಸದ ಯದುವೀರ್ ಒಡೆಯರ್ ಅವರನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸ್ವಾಗತಿಸಿದರು.
ನಂತರ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿದರು. ಬಳಿಕ ಶ್ರೀರಾಮಯೋಗೀಶ್ವರ ಮಠಕ್ಕೆ ತೆರಳಿ ಶ್ರೀ ಶಿವಬಸವಸ್ವಾಮೀಜಿಗಳ ಆಶೀರ್ವಾದ ಪಡೆದು ಶ್ರೀಗಳಿಗೆ ಅಭಿನಂದನೆ ಸಲ್ಲಿಸಿದರು. ನಂತರ ಮಠದ ವತಿಯಿಂದ ಇಬ್ಬರು ನಾಯಕರನ್ನು ಅಭಿನಂದಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇದೇ ಮೊದಲ ಬಾರಿಗೆ ಬೇಬಿ ಬೆಟ್ಟದ ದನಗಳ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು.ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಎನ್.ಎಸ್.ಇಂದ್ರೇಶ್, ಮುಖಂಡರಾದ ಅಶೋಕ್ ಜಯರಾಂ, ಸಿದ್ದರಾಮಯ್ಯ, ಎಸ್.ಪಿ.ಸ್ವಾಮಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಮಂಗಳ ನವೀನ್ಕುಮಾರ್, ತಾಲೂಕು ಅಧ್ಯಕ್ಷ ಧನಂಜಯ್, ಮುಖಂಡ ಎಸ್ಎನ್ಟಿ ಸೋಮಶೇಖರ್, ನಿರಂಜನ್ಬಾಬು, ರೈತಮುಖಂಡ ರಾಘವ ಪ್ರಕಾಶ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.