ಕಲ್ಪತರು ನಾಡಲ್ಲಿ ಶ್ರೀರಾಮನವಮಿ ಆಚರಣೆ

| Published : Apr 07 2025, 12:31 AM IST

ಸಾರಾಂಶ

ಕಲ್ಪತರುನಾಡಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿಯ ದೇವಾಲಯಗಳಲ್ಲಿ ಶ್ರೀರಾಮನವಮಿಯನ್ನು ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ತುಮಕೂರುಕಲ್ಪತರುನಾಡಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿಯ ದೇವಾಲಯಗಳಲ್ಲಿ ಶ್ರೀರಾಮನವಮಿಯನ್ನು ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರೀರಾಮ ಮತ್ತು ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಶ್ರೀರಾಮನಾಮ ಸ್ಮರಣೆ, ಘೋಷಣೆಗಳು ಮೊಳಗಿದವು. ನಗರದ ಬಾರ್‌ಲೈನ್ ರಸ್ತೆಯಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಶ್ರೀರಾಮನಮವಿ ಅಂಗವಾಗಿ ಶ್ರೀಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು.

ಅದೇ ರೀತಿ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ, ಶೆಟ್ಟಿಹಳ್ಳಿ ಗೇಟ್‌ನಲ್ಲಿರುವ ಅಭಯ ಆಂಜನೇಯಸ್ವಾಮಿ ದೇವಾಲಯ, ಕೋಟೆ ಆಂಜನೇಯಸ್ವಾಮಿ ದೇವಾಲಯ, ಬಟವಾಡಿ ಆಂಜನೇಯ, ಪುಟ್ಟಾಂಜನೇಯ, ಆರ್‌ಟಿಒ ಕಚೇರಿ ಬಳಿ ಇರುವ ಆಂಜನೇಯ ಸ್ವಾಮಿ ದೇವಾಲಯ, ಟೌನ್‌ಹಾಲ್ ವೃತ್ತದಲ್ಲಿರುವ ನಾಗರಕಟ್ಟೆ ದೇವಾಲಯ ಸೇರಿದಂತೆ ವಿವಿಧೆಡೆ ಇರುವ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ್ದು, ಶ್ರೀರಾಮನಮಮಿಯನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.ಬೆಳಿಗ್ಗೆಯಿಂದಲೇ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.ಶ್ರೀರಾಮನಮವಿ ಅಂಗವಾಗಿ ದೇವಾಲಯಗಳಲ್ಲಿ ಪೂಜೆಯ ನಂತರ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ, ಹೆಸರುಬೇಳೆ ಹಾಗೂ ಪ್ರಸಾದವನ್ನು ಹಂಚಲಾಯಿತು.

ಕೆಲವು ಸಂಘ ಸಂಸ್ಥೆಗಳು, ಯುವಕ ಸಂಘಗಳು ಸಹ ಶ್ರೀರಾಮನಮವಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಹಬ್ಬದ ವಿಶೇಷವಾಗಿ ಪಾನಕ, ಮಜ್ಜಿಗೆ, ಹೆಸರು ಬೇಳೆ, ಅನ್ನದಾಸೋಹ ವ್ಯವಸ್ಥೆ ಮಾಡಿದ್ದು ಸಹ ಗಮನ ಸೆಳೆಯಿತು. ಜಾತಿ, ಮತ ಮೀರಿದ, ಸೌಹಾರ್ದತೆಯ ಸಂಕೇತವಾಗಿರುವ ಶ್ರೀರಾಮನವಮಿಯನ್ನು ಮುಸ್ಲಿಂ ಬಾಂಧವರು ಸೇರಿ ಆಚರಿಸಿದ್ದು ಈ ಬಾರಿಯ ವಿಶೇಷವಾಗಿತ್ತು. ನಗರದ ಬಿ.ಎಚ್. ರಸ್ತೆಯುದ್ದಕ್ಕೂ ಭಕ್ತಾದಿಗಳು ಶ್ರೀರಾಮನ ಭಾವಚಿತ್ರ ಇಟ್ಟು ಪೆಂಡಾಲ್ ಹಾಕಿ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿತರಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

ತುಮಕೂರಿನ ಸೋಮೇಶ್ವರಪುರಂನಲ್ಲೂ ಕೂಡ ಶ್ರೀರಾಮನವಮಿ ಅಂಗವಾಗಿ ಪಾನಕ, ಮಜ್ಜಿಗೆ ಹಾಗೂ ಕೋಸಂಬರಿಯನ್ನು ವಿತರಿಸಲಾಯಿತು. ಎಸ್ಐಟಿ ಮತ್ತಿತರೆ ಬಡಾವಣೆಗಳಲ್ಲೂ ಕೂಡ ರಾಮನಾಮ ಸ್ಮರಣೆ ಮಾಡುವ ಮೂಲಕ ಸಂಭ್ರಮದಿಂದ ರಾಮನವಮಿ ಆಚರಿಸಲಾಯಿತು. ಬೆಳಗ್ಗೆಯಿಂದಲೇ ಪರಸ್ಪರ ಶುಭ ಕೋರುತ್ತಾ ಶ್ರೀರಾಮನವಿಗೆ ಮೆರಗು ತಂದರು. ಶ್ರೀರಾಮ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಒಟ್ಟಾರೆಯಾಗಿ ಕಲ್ಪತರು ನಾಡಿನಲ್ಲಿ ಸಂಭ್ರಮ ಮನೆ ಮಾಡಿತ್ತು.