ಬಳ್ಳಾರಿ: ನಗರ ಸೇರಿದಂತೆ ಜಿಲ್ಲಾದ್ಯಂತ ರಾಮನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಇಲ್ಲಿನ ಮೋತಿ ವೃತ್ತದಲ್ಲಿರುವ ಶ್ರೀರಾಮ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಬೆಳಗಿನ ಜಾವದಿಂದಲೇ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ನಡೆಯಿತು. ಶ್ರೀರಾಮ, ಸೀತಾ, ಲಕ್ಷ್ಮಣ ಹಾಗೂ ಹನುಮಂತನ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ದೇವಾಲಯಗಳು ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಗಳಿಂದ ಕಂಗೊಳಿಸಿದವು.

ಭಕ್ತರಿಗೆ ಪಂಚಾಮೃತ, ಪಾನಕ, ಕೋಸಂಬರಿ ಸೇರಿದಂತೆ ವಿವಿಧ ಪ್ರಸಾದಗಳನ್ನು ವಿತರಿಸಲಾಯಿತು. ಮಹಿಳೆಯರು ಹಾಗೂ ಮಕ್ಕಳಿಂದ ಭಜನೆ, ರಾಮನಾಮ ಸಂಕೀರ್ತನೆಗಳು ನಡೆದವು. ಕೆಲವೆಡೆ ರಾಮಾಯಣ ಪಾರಾಯಣ ಹಾಗೂ ಧಾರ್ಮಿಕ ಉಪನ್ಯಾಸಗಳು ಆಯೋಜನೆಗೊಂಡವು. ಮೋತಿ ವೃತ್ತದಲ್ಲಿರುವ ಶ್ರೀರಾಮ ದೇವಸ್ಥಾನದಲ್ಲಿ ಜರುಗಿದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಪಾಲಿಕೆ ಸದಸ್ಯ ಗೋವಿಂದರಾಜುಲು ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ಬಾಪೂಜಿ ನಗರದ ಆಂಜಿನೇಯಸ್ವಾಮಿ ದೇವಸ್ಥಾನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ ಪಾಲ್ಗೊಂಡಿದ್ದರು.

ಶ್ರೀರಾಮನವಮಿ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ, ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ನಗರದಲ್ಲಿ ಬೈಕ್ ರ್‍ಯಾಲಿ ಹಾಗೂ ಶೋಭಾಯಾತ್ರೆ ನಡೆಸಿದರು. ನಗರದ ಮೋತಿ ವೃತ್ತದಿಂದ ಶುರುಗೊಂಡ ಶೋಭಾಯಾತ್ರೆ ನಗರದ ಪ್ರಮುಖ ಬೀದಿಗಳ ಮೂಲಕ ಹವಾಂಭಾವಿ ಪ್ರದೇಶದ ವೀರಾಂಜಿನೇಯ ದೇವಸ್ಥಾನದಲ್ಲಿ ಕೊನೆಗೊಂಡಿತು. ನೂರಾರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು. ನಗರದ ಶ್ರೀರಾಮ ಹಾಗೂ ಆಂಜಿನೇಯಸ್ವಾಮಿ ದೇವಸ್ಥಾನಗಳು ಭಕ್ತರಿಂದ ಭರ್ತಿಯಾಗಿದ್ದವು.

ಶ್ರೀರಾಮನವಮಿ ಹಿನ್ನಲೆಯಲ್ಲಿ ಬಳ್ಳಾರಿಯ ಮೋತಿ ವೃತ್ತದಲ್ಲಿರುವ ಶ್ರೀರಾಮ ದೇವಸ್ಥಾನದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ಜರುಗಿದವು.