ಕನ್ನಡಪ್ರಭ ವಾರ್ತೆ ಶೃಂಗೇರಿ
ರೈತ ಹಿತರಕ್ಷಣಾ ಸಮಿತಿ ಮತ್ತು ರೈತ ಒಕ್ಕೂಟ, ವಿವಿಧ ಸಂಘಟನೆಗಳು ಕರೆ ನೀಡಿದ್ದ ಶೃಂಗೇರಿ ಕ್ಷೇತ್ರ ಬಂದ್ ಗೆ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡುಬಂದಿತು. ಬೆಳಿಗ್ಗೆಯಿಂದಲೇ ಅಂಗಡಿ, ಹೋಟೇಲುಗಳು ಬಂದ್ ಆಗಿದ್ದರೂ ಜನ ಸಂಚಾರ ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಬಸ್ ಮತ್ತು ಆಟೋ ಎಂದಿನಂತೆ ಇತ್ತು. ಶಾಲಾ ಕಾಲೇಜು ಮತ್ತು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಿದವು.ಬಸ್ ನಿಲ್ದಾಣದಲ್ಲಿ ಜನಸಂದಣಿ ಇತ್ತು. ವಾರದ ಸಂತೆ ದಿನವಾಗಿದ್ದರಿಂದ ಸಂತೇ ಮಾರುಕಟ್ಟೆಯಲ್ಲಿ ವ್ಯಾಪಾರ ಚಟುವಟಿಕೆಗಳು ನಡೆದವು. ಬಂದ್ ಬಿಸಿ ತಟ್ಟಲಿಲ್ಲ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದೇ ಶಾಂತಿಯುತ ವಾತಾವರಣವಿತ್ತು. ಬಸ್ ನಿಲ್ದಾಣ, ವೆಲ್ ಕಂ ಗೇಟ್ ಸೇರಿದಂತೆ ಪಟ್ಟಣದ ಪ್ರಮುಖ ಕಡೆಗಳಲ್ಲಿ ಪೊಲೀಸ್ ಬಿಗಿ ಬಂದೋ ಬಸ್ತ್ ಆಯೋಜಿಸಲಾಗಿತ್ತು.
ತಾಲೂಕು ಕಚೇರಿಯಲ್ಲಿ ವಿವಿಧ ಸಂಘಟನೆಗಳಿಂದ ಮನವಿ: ಕ್ಷೇತ್ರದಲ್ಲಿ ನಡೆಯುತ್ತಿರುವ ಮಾನವ ಪ್ರಾಣಿ ಸಂಘರ್ಷದಿಂದ ಅಮಾಯಕ ಜೀವಗಳು ಬಲಿಯಾಗುತ್ತಿದ್ದು, ಸರ್ಕಾರ, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.ಕಾಡಾನೆಗಳು ಕಳೆದ ಒಂದು ವಾರದಲ್ಲಿ ಎರಡು ವ್ಯಕ್ತಿಗಳನ್ನು ಕೊಂದು ಹಾಕಿದೆ. ಈವರೆಗೆ ಕ್ಷೇತ್ರದಲ್ಲಿ ಆನೆ ದಾಳಿಗೆ 13 ಜೀವ ಬಲಿಗಳಾಗಿವೆ. ವ್ಯಾಪಕ ತೋಟ, ಬೆಳೆ ಹಾನಿಯಾಗುತ್ತಿದೆ. ಆದರೂ ಸರ್ಕಾರ ಶಾಶ್ವತ ಪರಿಹಾರ ಕಂಡುಹಿಡಿಯಲಿಲ್ಲ. ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರ ಪಾಡು ಶೋಚನೀಯ. ಸರ್ಕಾರ ಕೂಡಲೇ ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸ ಬೇಕು. ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.ತಹಸೀಲ್ದಾರ್ ಅನೂಪ್ ಸಂಜೋಗ್ ರವರಿಗೆ ಮನವಿ ಸಲ್ಲಿಸಲಾಯಿತು. ಮಲೆನಾಡು ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ರಾಮಕೃಷ್ಣರಾವ್, ಡಿ.ಸಿ. ಶಂಕರಪ್ಪ, ಶಿಲ್ಪರವಿ, ಮಾರನಕೊಡಿಗೆ ನಾಗೇಶ್, ಸೌಮ್ಯ ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
23 ಶ್ರೀ ಚಿತ್ರ 1-
ಸೋಮವಾರ ಶೃಂಗೇರಿ ಕ್ಷೇತ್ರ ಬಂದ್ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಅಂಗಡಿಗಳು ಮುಚ್ಚಿರುವುದು.