ಶ್ರೀನಿವಾಸ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವ ಮುಕ್ಕ ಕ್ಯಾಂಪಸ್‌ನಲ್ಲಿ ಶನಿವಾರ ನಡೆಯಿತು. ಮಣಿಪಾಲ್ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌ನ ಕಾರ್ಯ ನಿರ್ವಾಹಕ ಅಧ್ಯಕ್ಷ ಸತೀಶ್ ಯು. ಪೈ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವ ಮುಕ್ಕ ಕ್ಯಾಂಪಸ್‌ನಲ್ಲಿ ಶನಿವಾರ ನಡೆಯಿತು. ಮಣಿಪಾಲ್ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌ನ ಕಾರ್ಯ ನಿರ್ವಾಹಕ ಅಧ್ಯಕ್ಷ ಸತೀಶ್ ಯು. ಪೈ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿ, ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ್ ಭಟ್ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಪಡೆದ ಜ್ಞಾನವನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಹಾಗೂ ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು. ಶಿಕ್ಷಿತ ಮನಸ್ಸು ಮತ್ತು ದೃಢವಾದ ಕೌಶಲ್ಯ ಪ್ರಸ್ತುತ ಜಗತ್ತಿನಲ್ಲಿ ಅತ್ಯಂತ ಮುಖ್ಯ, ಇವು ಯುವ ಜನತೆಗೆ ವಿಫುಲ ಅವಕಾಶಗಳನ್ನು ಸೃಷ್ಟಿಸಲಿವೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಡಾ.ಎ. ಶ್ರೀನಿವಾಸ್ ರಾವ್ ಮಾತನಾಡಿ, ಜೀವನದಲ್ಲಿ ಯಶಸ್ಸು ಸಾಧಿಸಲು ಜ್ಞಾನ ಅತ್ಯಂತ ಮುಖ್ಯ. ನಿರಂತಕ ಕಲಿಕೆಯ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ಅನುಗುಣವಾಗಿ ಜ್ಞಾನವನ್ನು ನವೀಕರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶ್ರೀನಿವಾಸ ವಿಶ್ವವಿದ್ಯಾಲಯ ವಿಶ್ವಸ್ಥ ಮಂಡಳಿ ಸದಸ್ಯೆ ಪ್ರೊ. ಮಿತ್ರಾ ಎಸ್. ರಾವ್ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಡಾ.ಕೆ. ಸತ್ಯನಾರಾಯಣ ರೆಡ್ಡಿ ಅವರು ಪದವೀಧರರ ಮಾಹಿತಿ ನೀಡಿದರು, ವಿಶ್ವಸ್ಥ ಮಂಡಳಿ ಸದಸ್ಯೆ ಎ. ವಿಜಯಲಕ್ಷ್ಮಿ ಆರ್. ರಾವ್, ತರಂಗ ವಾರಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಸಂಧ್ಯಾ ಎಸ್. ಪೈ, ಶ್ರೀನಿವಾಸ ವಿವಿ ವಿಶ್ವಸ್ಥ ಮಂಡಳಿ ಸದಸ್ಯ ಇಶಾನ್ ರಾವ್, ಉಪಕುಲಪತಿ ಡಾ.ಕೆ. ಸತ್ಯನಾರಾಯಣ ರೆಡ್ಡಿ, ಕುಲಸಚಿವ ಡಾ. ಅನಿಲ್ ಕುಮಾರ್, ಮೌಲ್ಯಮಾಪನ ಕುಲಸಚಿವ ಡಾ. ಶ್ರೀನಿವಾಸ ಮಯ್ಯ ಡಿ. ಕುಲಸಚಿವ (ಅಭಿವೃದ್ಧಿ) ಡಾ. ಅಜಯ್ ಕುಮಾರ್‌ ವೇದಿಕೆಯಲ್ಲಿದ್ದರು.

ಘಟಿಕೋತ್ಸವದಲ್ಲಿ 2769 ಪದವೀಧರರು (ಸ್ನಾತಕೋತ್ತರ-626, ಪದವಿ- 2023) ಪ್ರಮಾಣಪತ್ರ ಸ್ವೀಕರಿಸಿದರು. ವಿವಿಧ ಕಾರ್ಯಕ್ರಮಗಳಲ್ಲಿ 236 ರ್‍ಯಾಂಕ್‌ಗಳನ್ನು ಮತ್ತು 48 ಪದವೀಧರರಿಗೆ ಚಿನ್ನದ ಪದಕ ಪ್ರದಾನಿಸಲಾಯಿತು. 1 ಡಿಎಸ್‌ಸಿ., 1 ಡಿ.ಲಿಟ್ ಮತ್ತು 118 ಪಿಎಚ್‌ಡಿ ಪದವಿ ಪ್ರದಾನಿಸಲಾಯಿತು.

ಶ್ರೀನಿವಾಸ ವಿವಿ ಕುಲಸಚಿವ ಡಾ. ಅನಿಲ್ ಕುಮಾರ್ ಸ್ವಾಗತಿಸಿದರು. ಶ್ರೀನಿವಾಸ ವಿವಿ ಮೌಲ್ಯಮಾಪನ ಕುಲಸಚಿವ ಡಾ. ಡಿ. ಶ್ರೀನಿವಾಸ ಮಯ್ಯ ವಂದಿಸಿದರು. ಪ್ರೊ. ರೋಹನ್ ಫರ್ನಾಂಡಿಸ್ ಮತ್ತು ಡಾ. ಸ್ವಾತಿ ನಿರೂಪಿಸಿದರು.