ಸಾರಾಂಶ
ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಜ್ಯೋತಿ ಸಂಜೀವಿನಿ ಕೆಜಿಐಡಿ ಯೋಜನೆಯನ್ನು ಜಾರಿಗೆ ತರಬೇಕು. ಎಲ್ಲಾ ವಾಹನ ಚಾಲಕರು, ಹೊರಗುತ್ತಿಗೆ ಪೌರ ಕಾರ್ಮಿಕರು, ಒಳಚರಂಡಿ ನೌಕರರನ್ನು ಕಾಯಂ ಮಾಡುವ ಜೊತೆಗೆ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಪೌರ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.ಪಟ್ಟಣದ ಪುರಸಭೆ ಕಚೇರಿ ಮುಂಭಾಗ ಪುರಸಭೆ ಕಾಯಂ ನೌಕರರು, ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು ನೌಕರರು, ಚಾಲಕರು, ಸ್ವಚ್ಛಗಾರರು ಸೇರಿದಂತೆ ವಿವಿಧ ವೃದ್ಧದ ದಿನಗೂಲಿ ನೌಕರರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಜ್ಯೋತಿ ಸಂಜೀವಿನಿ ಕೆಜಿಐಡಿ ಯೋಜನೆಯನ್ನು ಜಾರಿಗೆ ತರಬೇಕು. ಎಲ್ಲಾ ವಾಹನ ಚಾಲಕರು, ಹೊರಗುತ್ತಿಗೆ ಪೌರ ಕಾರ್ಮಿಕರು, ಒಳಚರಂಡಿ ನೌಕರರನ್ನು ಕಾಯಂ ಮಾಡುವ ಜೊತೆಗೆ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.ದಿನಗೂಲಿ, ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಕಾಯಂ ಮಾಡಬೇಕು. ಎಲ್ಲಾ ನೌಕರರಿಗೆ ಎಸ್ಎಫ್ಸಿ ಮುಕ್ತ ನಿಧಿಯಿಂದ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆವಿಗೂ ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪುರಸಭಾ ಪ್ರಭಾರ ಅಧ್ಯಕ್ಷ ಎಂ.ಎಲ್ ದಿನೇಶ್ ಅವರಿಗೂ ಮನವಿ ಸಲ್ಲಿಸಿ ಸಹಕಾರ ಕೋರಿದರು.ನಂತರ ದಿನೇಶ್ ಮಾತನಾಡಿ, ನಿಮ್ಮ ಬೇಡಿಕೆಗಳಿಗೆ ನನ್ನ ಹಾಗೂ ಸದಸ್ಯರ ಸಂಪೂರ್ಣ ಬೆಂಬಲವಿದೆ. ಸ್ಥಳಿಯ ನಿವಾಸಿಗಳ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಯಾವುದೇ ತೊಂದರೆಯಾಗದ ರೀತಿ ತಮ್ಮ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವಂತೆ ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಪುರಸಭೆ ನೌಕರರು ಸೇರಿದಂತೆ ಚಾಲಕರು, ಹೊರಗುತ್ತಿಗೆ ಪೌರ ಕಾರ್ಮಿಕರು ಸೇರಿದಂತೆ ಇತರರು ಇದ್ದರು.