ಕನ್ನಡಪ್ರಭ ವಾರ್ತೆ ನಾಗಮಂಗಲ
ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾತ್ರಿ ವೇಳೆ ವಿಶೇಷ ತರಗತಿ ನಡೆಸಲು ಸೂಚಿಸಿದ್ದರೂ ಕೂಡ ನಿಲಯ ಮೇಲ್ವಿಚಾರಕರು ಮತ್ತು ನಿಲಯ ಪಾಲಕರು ಕೇವಲ ಫೋಟೋಗಳಿಗೆ ಮೀಸಲಾಗಿ ಬೋಧನೆ ಮಾಡುತ್ತಿರುವ ಫೋಟೋ ಶೇರ್ ಮಾಡುತ್ತಿದ್ದಾರೆ ಹೊರತು ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸುತ್ತಿಲ್ಲ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ತಾಪಂ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮಧ್ಯಾಹ್ನವಿಡಿಯೋ ಸಂವಾದದ ಮೂಲಕ ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಗಳ ಇಲಾಖೆ ಅಧಿಕಾರಿಗಳು ಮತ್ತು ನಿಲಯ ಮೇಲ್ವಿಚಾರಕರಿಗೆಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ವಿದ್ಯಾರ್ಥಿ ವಸತಿ ನಿಲಯ ಪಾಲಕರು ರಾತ್ರಿ ಸಮಯದಲ್ಲಿ ಕಡ್ಡಾಯವಾಗಿ ಹಾಸ್ಟೆಲ್ಗಳಲ್ಲಿಯೇ ವಾಸ್ತವ್ಯ ಹೂಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಮೂಲಕ ಜಿಲ್ಲೆಯಲ್ಲಿ ಶೇ.75ಕ್ಕಿಂತ ಕಡಿಮೆ ಫಲಿತಾಂಶ ಇರುವ ವಿದ್ಯಾರ್ಥಿ ನಿಲಯಗಳಲ್ಲಿ ಮುಂದಿನ 15 ದಿನದಲ್ಲಿ ಅಗತ್ಯ ಕ್ರಮವಹಿಸಿ ಉತ್ತೀರ್ಣವಾಗುವ ಮಕ್ಕಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿಪ್ರಮುಖ ಪಾತ್ರ ವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.ಅರೆಕಾಲಿಕಾ ಭೋಧಕರನ್ನು ನೇಮಿಸಿಕೊಂಡು ಮಕ್ಕಳು ಯಾವ ವಿಷಯಗಳಲ್ಲಿ ಹಿಂದಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ಕಳೆದ 2ನೇ ಪೂರ್ವ ಸಿದ್ಧತಾ ಪರಿಕ್ಷೇಯಲ್ಲಿ ಜಿಲ್ಲೆಯಲ್ಲಿ 438 ವಿದ್ಯಾರ್ಥಿಗಳ ಪೈಕಿ 370 ವಿದ್ಯಾರ್ಥಿಗಳುಉತ್ತೀರ್ಣರಾಗಿದ್ದು, 68 ಮಕ್ಕಳು ತೇರ್ಗಡೆಯಲ್ಲಿ ವಿಫಲರಾಗಿದ್ದಾರೆ. ಅಂತಹ ವಿದ್ಯಾರ್ಥಿಗಳು ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ಶ್ರದ್ಧೆಯಿಂದ ಕ್ರಮವಹಿಸಬೇಕು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಸ್.ರಾಘವೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ದಾಸಪ್ಪ ಬೋವಿ, ತಾಪಂ ಸಹಾಯಕ ನಿರ್ದೇಶಕ ವಿ.ಕೃಷ್ಣಮೂರ್ತಿ ಸೇರಿದಂತೆ ವಿವಿಧ ಹಾಸ್ಟೆಲ್ಗಳ ನಿಲಯಪಾಲಕರು ಇದ್ದರು.