ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ.ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ತಾಲೂಕು ಪಂಚಾಯಿತಿ ಎದುರು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಕುರ್ಚಿ ವಿಚಾರದಲ್ಲೇ ಬಿಜಿಯಾಗಿದೆ, ಬಿಟ್ಟಿ ಭಾಗ್ಯಗಳಿಂದ ಆರ್ಥಿಕವಾಗಿ ದಿವಾಳಿಯಾಗಿದ್ದು, ಹಲವು ಇಲಾಖೆಯ ಸಿಬ್ಬಂದಿಗಳಿಗೆ ಸಂಬಳ ನೀಡಲು ಹಣವಿಲ್ಲದಂತಾಗಿದೆ ಎಂದು ಆರೋಪಿಸಿದರು.ಗ್ರಾಪಂ ಅವಧಿ ಮುಗಿದಿದೆ, ತಾಪಂ ಅವಧಿ ಮುಗಿದು ಹಲವು ವರ್ಷಗಳಾಗಿವೆ. ಆದರೂ ಸರ್ಕಾರ ಸುಮ್ಮನಿದೆ. ಇವರಿಗೆ ಚುನಾವಣೆ ನಡೆಸಲು ಹಣವಿಲ್ಲ. ಅದಕ್ಕೇ ಚುನಾವಣೆ ಪ್ರಕ್ರಿಯೆಗೆ ಮುಂದಾಗಿಲ್ಲ ಎಂದು ವ್ಯಂಗ್ಯವಾಡಿದರು.ಜಿಲ್ಲೆಯ ರಸ್ತೆಗಳು ಗುಂಡಿ ಬಿದ್ದು ಹಾಳಾಗಿದೆ. ಆದರೂ ಗುಂಡಿ ಮುಚ್ಚದೆ ಜಾಣ ಕುರುಡು ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಭಾರತೀಶ್, ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಮಾತನಾಡಿದರು. ಸೋಮವಾರ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಪ್ರತಿಭಟನೆ ನಡೆಸುತ್ತಿದ್ದರೂ ತಾಪಂ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿಲ್ಲದೆ ದರ್ಪ ತೋರಿದ್ದಾರೆ. ಮುಂದೆ ಹೀಗಾದರೆ ಕಚೇರಿಗೆ ಬೀಗ ಜಡಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಭಾರತೀಶ್, ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವಿ.ಕೆ. ಲೋಕೇಶ್, ಮನು ಕುಮಾರ್ ರೈ, ಅನಂತ್ ಕುಮಾರ್, ಮಂಡಲ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ವಿರೂಪಾಕ್ಷ, ಉಪಾಧ್ಯಕ್ಷೆ ಸವಿತಾ ಸತೀಶ್, ಮಂಡಲ ಬಿಜೆಪಿ ಹಿಂದುಳಿದ ವರ್ಗದ ಅಧ್ಯಕ್ಷ ಸುನೀಲ್, ಎಸ್ ಸಿ ಮೋರ್ಚಾ ಅಧ್ಯಕ್ಷ ರಾಮಕೃಷ್ಣ, ಯುವ ಘಟಕದ ಅಧ್ಯಕ್ಷ ಮೋಹಿತ್, ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಇಂದಿರಾ ಮೋನಪ್ಪ, ಮೋಹಿತ್ ರಾಜ್ ಮತ್ತಿತರರು ಹಾಜರಿದ್ದರು.