ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿರುವ ರಾಜ್ಯ ಸರ್ಕಾರ: ಸಂಸದ ಡಾ.ಕೆ.ಸುಧಾಕರ್State government has taken up the task of dividing religion: MP Dr. K. Sudhakar

| Published : Sep 18 2025, 01:10 AM IST

ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿರುವ ರಾಜ್ಯ ಸರ್ಕಾರ: ಸಂಸದ ಡಾ.ಕೆ.ಸುಧಾಕರ್State government has taken up the task of dividing religion: MP Dr. K. Sudhakar
Share this Article
  • FB
  • TW
  • Linkdin
  • Email

ಸಾರಾಂಶ

ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹಂಚಿಕೆ ಮಾಡುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡಲಾಗುತ್ತಿದೆ. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಈ ಸಮುದಾಯಗಳಿಗೆ ಎಸಗುವ ದ್ರೋಹ ಅಲ್ಲವೇ ಎಂದರು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾತಿ ಗಣತಿಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈ ಹಾಕಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಆರೋಪಿಸಿದರು.

ನಗರದ ಸಂಸದರ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಕಾಂತರಾಜು ಅವರ ಸಮಿತಿ ನೇಮಿಸಿದ್ದರು. 200ರಿಂದ 300 ಕೋಟಿ ರು. ವ್ಯಯಿಸಿ ಮಾಡಿದ ಗಣತಿಯನ್ನು ಕಸದ ಬುಟ್ಟಿಗೆಸೆದಿದ್ದಾರೆ. ಅದನ್ನು ಸ್ವೀಕಾರ ಮಾಡಿದರೇ? ಜನರ ತೆರಿಗೆ ಹಣವನ್ನು ಪೋಲು ಮಾಡಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಎಂದು ಪ್ರಶ್ನಿಸಿದರು.

ಈಗ ಮತ್ತೆ ಸುಮಾರು 420 ಕೋಟಿ ರು. ವೆಚ್ಚದಲ್ಲಿ ಗಣತಿ ಮಾಡಲು ಹೊರಟಿದ್ದಾರೆ. ಜಾತಿ ಗಣತಿ ಹೆಸರಿನಲ್ಲಿ ಹಿಂದೂಗಳನ್ನು ಒಡೆದು ತನ್ನ ವೋಟ್ ಬ್ಯಾಂಕ್ ಗಳನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಸ್ಪಷ್ಟವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಹಿಂದಿನ ಹಿಂದುಳಿದ ವರ್ಗಗಳ ಆಯೋಗ ಪ್ರಕಟಿಸಿರುವ ಜಾತಿ ಪಟ್ಟಿಯಲ್ಲಿ ಮತಾಂತರಗೊಂಡ ಹಿಂದೂಗಳಿಗಾಗಿಯೇ ಹೆಚ್ಚುವರಿ ಜಾತಿಗಳನ್ನು ಸೃಷ್ಟಿಸಿ, ಕುರುಬ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್ – ಈ ರೀತಿ ಸುಮಾರು 50 ಕ್ಕೂ ಹೆಚ್ಚು ಜಾತಿಗಳನ್ನು ಕ್ರಿಶ್ಚಿಯನ್ ಧರ್ಮದ ಹೆಸರಿನಲ್ಲಿ ಸೇರಿಸಿ ಹಿಂದೂಯೇತರ ಧರ್ಮೀಯರ ಜನಸಂಖ್ಯೆಯನ್ನು ವ್ಯವಸ್ಥಿತವಾಗಿ ಹೆಚ್ಚು ತೋರಿಸುವ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಮತಾಂತರಗೊಂಡವರು ಕಬಳಿಸುವ ಪ್ರಯತ್ನಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ ಎಂದು ಹೇಳಿದರು.

ನಮ್ಮ ಸಂವಿಧಾನದಲ್ಲಿರುವ ಆರು ಧರ್ಮಗಳ ಹೊರತಾಗಿ ಬೇರೆ ಯಾವುದೇ ಧರ್ಮಗಳ ಸೇರ್ಪಡೆ ಸಂವಿಧಾನ ವಿರೋಧಿಯಾಗಿದ್ದರೂ ಮತಾಂತರಗೊಂಡ ಕ್ರೈಸ್ತರು ಎಂಬ ಹೊಸ ಧರ್ಮವನ್ನು ಕಾಂಗ್ರೆಸ್ ಹುಟ್ಟು ಹಾಕಿದ್ದರ ಬಗ್ಗೆ ಟೀಕಿಸಿದರು.

ರಾಜ್ಯ ಸರ್ಕಾರ ಹಿಂದುಳಿದ ಆಯೋಗದ ಮುಖಾಂತರ ಪ್ರಕಟಿಸಿರುವ ಈ ಸಂವಿಧಾನ ಬಾಹಿರ ಹಿಂದೂ ಜಾತಿಗಳ ಹೆಸರಿನ ಪಟ್ಟಿಯನ್ನು ಈ ಕೂಡಲೇ ಹಿಂಪಡೆದು ಆಗಿರುವ ಪ್ರಮಾದಕ್ಕೆ ಹಿಂದೂಗಳ ಕ್ಷಮೆ ಕೊರಬೇಕು ಹಾಗೂ ಈ ತಿಂಗಳ 22 ರಂದು ಆರಂಭವಾಗುವ ಸಮೀಕ್ಷೆಯಲ್ಲಿ ಮತ್ತೆ ಇಂತಹ ತಪ್ಪುಗಳು ನಡೆಯದಂತೆ ಸೂಕ್ತ ಕ್ರಮವಹಿಸಬೇಕೆಂದರು.

ಕಾಂಗ್ರೆಸ್ ಪಕ್ಷದ ಈ ಹಿಂದೂ ವಿರೋಧಿ ನೀತಿಯನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಸಮೀಕ್ಷೆಯ ಸಮಯದಲ್ಲಿ ಸಮಸ್ತ ಹಿಂದೂಗಳು ನಿಮ್ಮ ನಿಮ್ಮ ಜಾತಿ, ಉಪ ಜಾತಿ ಯಾವುದೇ ಇರಲಿ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಬೇಕು ಹಾಗೂ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೆ ಹಿಂದೂ ಸನಾತನ ಧರ್ಮವನ್ನು ಒಗ್ಗೂಡಿಸಿಕೊಂಡು ಸಮಾಜದ ಹಿತ ಕಾಪಾಡಬೇಕು ಎಂದು ವಿನಂತಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹಂಚಿಕೆ ಮಾಡುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡಲಾಗುತ್ತಿದೆ. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಈ ಸಮುದಾಯಗಳಿಗೆ ಎಸಗುವ ದ್ರೋಹ ಅಲ್ಲವೇ ಎಂದರು.

ರಾಜ್ಯದಲ್ಲಿ ಎಲ್ಲ ಇಲಾಖೆಗಳಲ್ಲಿಯೂ ಭ್ರಷ್ಟಾಚಾರ ವ್ಯಾಪಕವಾಗಿದೆ. ಸರ್ವವ್ಯಾಪಿ ಸರ್ವಸ್ಪರ್ಶಿ ಆಡಳಿತ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಅದೇ ರೀತಿಯಲ್ಲಿ ಸರ್ವವ್ಯಾಪಿ ಸರ್ವಸ್ಪರ್ಶಿಯಾಗಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ದೂರಿದರು.