ಸಾರಾಂಶ
ರಾಜ್ಯ ಸರ್ಕಾರದ ಮೊದಲ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಜನಸ್ಪಂದನೆಯನ್ನು ಫೆ.8ರಂದು ವಿಧಾಬಸೌಧದಲ್ಲಿ ನಡೆಸಲು ನಿರ್ಧರಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ‘ಜನಸ್ಪಂದನ’ ಕಾರ್ಯಕ್ರಮ ಅಭೂತ ಪೂರ್ವ ಯಶಸ್ಸು ಕಂಡ ಎರಡೂವರೆ ತಿಂಗಳ ಬಳಿಕ ಫೆ.8ರಂದು ವಿಧಾನಸೌಧದ ಮುಂಭಾಗ ರಾಜ್ಯಮಟ್ಟದ 2ನೇ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಅಂದು ಸಾರ್ವಜನಿಕರ ಕುಂದುಕೊರತೆ ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನ.27ರಂದು ಮೊದಲ ಜನಸ್ಪಂದನ ಕಾರ್ಯಕ್ರಮದ ವೇಳೆ ಬರೋಬ್ಬರಿ 3,812 ಮಂದಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಹಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ್ದರು.ಅಲ್ಲದೆ, ಮೂರು ತಿಂಗಳಲ್ಲಿ ಮತ್ತೊಮ್ಮೆ ಜನಸ್ಪಂದನ ನಡೆಸುತ್ತೇನೆ. ಆ ವೇಳೆ ಅರ್ಜಿಗಳು ಹೆಚ್ಚು ಬಂದರೆ ತಳಮಟ್ಟದ ಅಧಿಕಾರಿಗಳನ್ನೇ ಹೊಣೆ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಹೀಗಾಗಿ ಫೆ.8ರಂದು ನಡೆಯಲಿರುವ ಜನಸ್ಪಂದನ ಕಾರ್ಯಕ್ರಮ ಕುತೂಹಲ ಮೂಡಿಸಿದೆ.ಜನಸ್ಪಂದನ ಸಿದ್ಧತೆಗೆ ಸಭೆ:
ಬುಧವಾರ 2ನೇ ಜನಸ್ಪಂದನದ ಸಿದ್ಧತಾ ಸಭೆ ನಡೆಸಿದ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ. ಅತೀಕ್, ‘ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು ವಿಶೇಷ ಆಸಕ್ತಿ ವಹಿಸಿ ಸ್ಥಳದಲ್ಲೇ ಕುಂದು ಕೊರತೆ ನಿವಾರಿಸಬೇಕು. ಆಗಮಿಸುವ ವಿಶೇಷಚೇತನರು, ಹಿರಿಯ ನಾಗರಿಕರಿಗೆ ವಿಶೇಷ ವ್ಯವಸ್ಥೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜನಸ್ಪಂದನಕ್ಕೆ ಆಗಮಿಸುವ ಜನರ ಅನುಕೂಲಕ್ಕಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ಸಂಗೊಳ್ಳಿ ರಾಯಣ್ಣ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಬೇಕು. ಜತೆಗೆ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಾಹಾರ, ಊಟದ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶಿಸಿದರು.
ಪ್ರತ್ಯೇಕ ಕೌಂಟರ್ ವ್ಯವಸ್ಥೆ:ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರು ಹಾಗೂ ನಿಗದಿತ ಕೌಂಟರುಗಳಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಲು ಪ್ರವೇಶ ದ್ವಾರದಲ್ಲಿಯೇ ಅಧಿಕಾರಿ ಹಾಗೂ ಸಿಬ್ಬಂದಿಗಳ ಫೆಸಿಲಿಟೇಷನ್ ತಂಡ ನಿಯೋಜಿಸುವಂತೆ ಅತೀಕ್ ನಿರ್ದೇಶನ ನೀಡಿದರು.