ಸಾರಾಂಶ
ಕರ್ನಾಟಕ ರಾಜ್ಯ ಕಿರಿಯರ ಹಾಗೂ 23 ರ ವಯೋಮಿತಿಯ ಕ್ರೀಡಾಕೂಟ ಆ.23 ರಿಂದ 25 ರ ವರೆಗೆ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ
ಕನ್ನಡಪ್ರಭ ವಾರ್ತೆ ಉಡುಪಿ
ಕರ್ನಾಟಕ ರಾಜ್ಯ ಕಿರಿಯರ ಹಾಗೂ 23 ರ ವಯೋಮಿತಿಯ ಕ್ರೀಡಾಕೂಟ ಆ.23 ರಿಂದ 25 ರ ವರೆಗೆ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.ಗುರುವಾರ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಕಿರಿಯರ ಮತ್ತು 23 ರ ವಯೋಮಿತಿಯ ಕ್ರೀಡಾಕೂಟದ ಪೂರ್ವತಯಾರಿಯ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರಾಜ್ಯ ಮಟ್ಟದ ಕ್ರೀಡೆಯು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆಯಲಿದ್ದು, ಇಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ. ಕ್ರೀಡಾಕೂಟವು ಫೆಡರೇಶನ್ ಆಫ್ ಇಂಡಿಯಾ ಅನ್ವಯ ನಡೆಯುಲಿದೆ ಎಂದರು.ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಕಿರಿಯರ ಹಾಗೂ 23ರ ವಯೋಮಿತಿಯ ಕ್ರೀಡಾಕೂಟದಲ್ಲಿ ರಾಜ್ಯದ ವಿವಿದೆಡೆಯಿಂದ 1500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದು, ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಕ್ರೀಡಾ ಮೈದಾನದ ವ್ಯವಸ್ಥೆ, ಕ್ರೀಡಾ ಸಲಕರಣೆ, ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕ್ರೀಡಾ ಯಶಸ್ವಿಗೆ ಮುಂದಾಗಬೇಕು ಎಂದರು.ಹೊರ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾ ಸ್ಪರ್ಧೆಗಳಿಗೆ ತಂಗಲು ಅನುಕೂಲವಾಗುವಂತೆ ಮಹಿಳಾ ಹಾಗೂ ಪುರುಷ ಕ್ರೀಡಾಪಟುಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಕ್ರೀಡಾಪಟುಗಳು, ತರಬೇತುದಾರರು, ಅಂಪೖರ್ ಸೇರಿದಂತೆ ಮತ್ತಿತರ ಅಧಿಕಾರಿಗಳಿಗೆ ಊಟೋಪಚಾರ, ಕುಡಿಯುವ ನೀರಿನ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಬೇಕೆಂದರು.ಕ್ರೀಡಾಪಟುಗಳ ಭದ್ರತೆಗೆ ಅಗತ್ಯವಿರುವ ಪೊಲೀಸ್ ಬಂದೋಬಸ್ತ್ ನಿಯೋಜಿಸಬೇಕು. ವೈದ್ಯರನ್ನು ಒಳಗೊಂಡ ವೈದ್ಯಕೀಯ ತಂಡವನ್ನು ತುರ್ತು ಚಿಕಿತ್ಸೆಗೆ ನಿಯೋಜಿಸಬೇಕು. ಆಂಬುಲೆನ್ಸ್ ವ್ಯವಸ್ಥೆಯನ್ನು ಸಹ ಕಲ್ಪಿಸಬೇಕು ಎಂದರು.ಮಾಜಿ ಶಾಸಕ ರಘುಪತಿ ಭಟ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ, ಎಎಸ್ಪಿ ಸುಧಾಕರ್ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.