ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುನಗರದ ವಿವೇಕಾನಂದ ಕ್ರೀಡಾ ಸಂಸ್ಥೆ ಹಾಗೂ ರಾಜ್ಯ ಖೋ ಖೋ ಸಂಸ್ಥೆ ಆಶ್ರಯದಲ್ಲಿ ಈ ತಿಂಗಳ 10 ರಿಂದ 12ರವರೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದ ಎರಡು ಅಂಕಣದಲ್ಲಿ ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಖೋ ಖೋ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.ವಿವೇಕಾನಂದ ಕ್ರೀಡಾ ಸಂಸ್ಥೆ ಅಧ್ಯಕ್ಷ ಎಚ್.ಡಿ.ಕುಮಾರ್ ಅವರು ಗುರುವಾರ ಮೈದಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಹಾಗೂ ರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಆಡಿರುವ ಹೆಸರಾಂತ ಖೋ ಖೋ ಆಟಗಾರರು ಒಳಗೊಂಡ ತಂಡಗಳು ಹಗಲು ಹಾಗೂ ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಪುರುಷರ 13 ಹಾಗೂ ಮಹಿಳೆಯರ 8 ತಂಡಗಳು ಸೆಣೆಸಾಡುವ ರೋಚಕ ಖೋ ಖೋ ಪಂದ್ಯಾವಳಿಯನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡಿದರು. ಇದೇ 10 ರಂದು ಸಂಜೆ 6 ಗಂಟೆಗೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಗಳ ದಿವ್ಯಸಾನಿಧ್ಯದ ಸಮಾರಂಭದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಪಂದ್ಯಾವಳಿ ಉದ್ಘಾಟಿಸುವರು. ರಾಜ್ಯ ಖೋ ಖೋ ಸಂಸ್ಥೆ ಅಧ್ಯಕ್ಷ ಲೋಕೇಶ್ವರ್, ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತ್ತಿತರರು ಭಾಗವಹಿಸುವರು. ಎರಡು ಅಂಕಣಗಳಲ್ಲಿ ಮ್ಯಾಟ್ ಅಳವಡಿಸಿ ಅಂತಾರಾಷ್ಟ್ರೀಯ ಗುಣಮಟ್ಟದ ಅಂಕಣ ಸಿದ್ಧಪಡಿಸಲಾಗುವುದು. ರಾಜ್ಯ ಸಂಸ್ಥೆಯ ಹೊಸ ನಿಯಮಗಳನ್ನು ಟೂರ್ನಿಯಲ್ಲಿ ಅಳವಡಿಸಲಾಗಿದೆ ಎಂದರು.ವಿಜೇತ ತಂಡಗಳಿಗೆ ನಗದು ಬಹುಮಾನದ ಜೊತೆ ಟ್ರೋಫಿ ನೀಡಲಾಗುವುದು. ವಿಜೇತ ಪುರುಷರ ತಂಡಕ್ಕೆ ಹಿರಿಯ ಕ್ರೀಡಾಪಟು ದಿ.ರವಿ ಸ್ಮಾರಕಟ್ರೋಫಿ ಹಾಗೂ ಮಹಿಳಾ ತಂಡದ ವಿಜೇತರಿಗೆ ದಿ.ಚಂದ್ರಕಲಾ ಸ್ಮರಣಾರ್ಥಟ್ರೋಪಿ ವಿತರಿಸಲಾಗುವುದು. ೧೨ರಂದು ಸಂಜೆ ೫.೩೦ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಕೆ.ಎನ್.ರಾಜಣ್ಣ, ಟಿ.ಬಿ.ಜಯಚಂದ್ರ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಎಸ್.ಆರ್.ಶ್ರೀನಿವಾಸ್, ಸುರೇಶ್ಗೌಡ, ಸುರೇಶ್ಬಾಬು ಮೊದಲಾದವರು ಪಾಲ್ಗೊಂಡು ವಿಜೇತ ತಂಡಗಳಿಗೆ ಬಹುಮಾನ ವಿತರಿಸುವರುಎಂದು ತಿಳಿಸಿದರು. ಸಂಸ್ಥೆಯ ಮಾಜಿ ಅಧ್ಯಕ್ಷ ಧನಿಯಾಕುಮಾರ್, ಸಂಸ್ಥೆಯ ಗೌರವಾಧ್ಯಕ್ಷ ರಾಮಕೃಷ್ಣಯ್ಯ, ಉಪಾಧ್ಯಕ್ಷ ಎನ್.ನರಸಿಂಹರಾಜು, ಕಾರ್ಯದರ್ಶಿ ವಿನಯ್, ಜಂಟಿ ಕಾರ್ಯದರ್ಶಿ ಪ್ರೀತಂ, ಖಜಾಂಚಿ ಎಸ್.ಎನ್.ಹರೀಶ್, ಹಿರಿಯ ಕ್ರೀಡಾತರಬೇತುದಾರ ರವೀಶ್ ಮೊದಲಾದವರು ಭಾಗವಹಿಸಿದ್ದರು.