ಮಕ್ಕಳಲ್ಲಿ ಅಡಗಿರುವ ಸೃಜನಶೀಲತೆ, ಕಲಾತ್ಮಕತೆ ಹಾಗೂ ಅಭಿವ್ಯಕ್ತಿ ಶಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸಕಲೇಶಪುರದ ಇಮೇಜಿನ್ ಚಿತ್ರಕಲಾ ಶಾಲೆ ವತಿಯಿಂದ 2026ನೇ ಸಾಲಿನ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಮಾರ್ಚ್ 1ರಂದು ಭಾನುವಾರ ಆಯೋಜಿಸಲಾಗಿದೆ ಎಂದು ಚಂದ್ರಶೇಖರ್ ತಿಳಿಸಿದರು. 1 ಮತ್ತು 2ನೇ ತರಗತಿ ವಿದ್ಯಾರ್ಥಿಗಳಿಗೆ ಸಹ ಬಣ್ಣ ತುಂಬುವ ವಿಭಾಗವಿದೆ. 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳಿಗೆ ಐಚ್ಛಿಕ ವಿಷಯದ ಮೇಲೆ ಚಿತ್ರ ಬಿಡಿಸಲು ಅವಕಾಶ ಕಲ್ಪಿಸಲಾಗಿದೆ.
ಕನ್ನಡಪ್ರಭ ವಾರ್ತೆ ಹಾಸನ
ಮಕ್ಕಳಲ್ಲಿ ಅಡಗಿರುವ ಸೃಜನಶೀಲತೆ, ಕಲಾತ್ಮಕತೆ ಹಾಗೂ ಅಭಿವ್ಯಕ್ತಿ ಶಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸಕಲೇಶಪುರದ ಇಮೇಜಿನ್ ಚಿತ್ರಕಲಾ ಶಾಲೆ ವತಿಯಿಂದ 2026ನೇ ಸಾಲಿನ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಮಾರ್ಚ್ 1ರಂದು ಭಾನುವಾರ ಆಯೋಜಿಸಲಾಗಿದೆ ಎಂದು ಚಂದ್ರಶೇಖರ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಕಲೇಶಪುರ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ (ನಗರ ಪೊಲೀಸ್ ಠಾಣೆ ಹಿಂಭಾಗ) ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸ್ಪರ್ಧೆಗಳು ನಡೆಯಲಿವೆ. ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಎಲ್ಕೆಜಿಯಿಂದ ಪದವಿ ವಿದ್ಯಾರ್ಥಿಗಳವರೆಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಎಲ್ಕೆಜಿ ಹಾಗೂ ಯುಕೆಜಿ ಮಕ್ಕಳಿಗೆ ಚಿತ್ರಕ್ಕೆ ಬಣ್ಣ ತುಂಬುವ ಸ್ಪರ್ಧೆ ನಡೆಯಲಿದೆ ಎಂದರು. 1 ಮತ್ತು 2ನೇ ತರಗತಿ ವಿದ್ಯಾರ್ಥಿಗಳಿಗೆ ಸಹ ಬಣ್ಣ ತುಂಬುವ ವಿಭಾಗವಿದೆ. 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳಿಗೆ ಐಚ್ಛಿಕ ವಿಷಯದ ಮೇಲೆ ಚಿತ್ರ ಬಿಡಿಸಲು ಅವಕಾಶ ಕಲ್ಪಿಸಲಾಗಿದೆ.5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ “ಸುಂದರ ಪರಿಸರ” ವಿಷಯ ನೀಡಲಾಗಿದ್ದು, ಪರಿಸರ ಸಂರಕ್ಷಣೆ ಮತ್ತು ಪ್ರಕೃತಿ ಪ್ರೇಮದ ಸಂದೇಶವನ್ನು ಕಲೆಯ ಮೂಲಕ ಅಭಿವ್ಯಕ್ತಿಪಡಿಸುವ ಅವಕಾಶ ಸಿಗಲಿದೆ. 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ “ಹಳ್ಳಿಯ ಸೊಬಗು” ವಿಷಯ ನಿಗದಿಪಡಿಸಲಾಗಿದ್ದು, ಗ್ರಾಮೀಣ ಜೀವನದ ವೈಶಿಷ್ಟ್ಯತೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಚಿತ್ರಿಸುವುದಕ್ಕೆ ಪ್ರೋತ್ಸಾಹ ನೀಡಲಾಗಿದೆ. ಪಿಯುಸಿ ಹಾಗೂ ಡಿಗ್ರಿ ವಿದ್ಯಾರ್ಥಿಗಳಿಗೆ “ಐತಿಹಾಸಿಕ ಪ್ರೇಕ್ಷಣೀಯ ಸ್ಥಳ” ವಿಷಯ ನೀಡಲಾಗಿದ್ದು, ಇತಿಹಾಸ ಮತ್ತು ಪರಂಪರೆಯನ್ನು ಚಿತ್ರಕಲೆಯ ಮೂಲಕ ಪ್ರತಿಬಿಂಬಿಸುವ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಮಧುಬನಿ ಚಿತ್ರಕಲೆಯ ವಿಶೇಷ ವಿಭಾಗವೂ ಸ್ಪರ್ಧೆಯಲ್ಲಿ ಒಳಗೊಂಡಿದೆ.ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುತ್ತದೆ. ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನಗಳೊಂದಿಗೆ ಗೌರವಿಸಲಾಗುತ್ತದೆ. ತೀರ್ಪುಗಾರರಾಗಿ ಖ್ಯಾತ ಕಲಾವಿದರು ಆಗಮಿಸಲಿದ್ದು, ಅವರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ. ನೋಂದಣಿ ಶುಲ್ಕ ₹350 ಆಗಿದ್ದು, ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9632382519 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಲೋಕೇಶ್, ಸೌಮ್ಯ ಚಂದ್ರಶೇಖರ್, ಮಂಜುನಾಥ್ ಇತರರು ಉಪಸ್ಥಿತರಿದ್ದರು.