ಸಾರಾಂಶ
ಉಡುಪಿ ವಕೀಲರ ಸಂಘ, ನ್ಯಾಯಾಲಯದ 125ನೇ ವರ್ಷಾಚರಣೆ ಪ್ರಯುಕ್ತ ಆಯೋಜನೆ
ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ಸವ, ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ) ಟೂರ್ನಿಯನ್ನು ಮಾರ್ಚ್ 1 ಮತ್ತು 2ರಂದು ಆಯೋಜಿಸಲಾಗಿದೆ ಎಂದು ಉಡುಪಿ ವಕೀಲರ ಸಂಘ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಂಜಿಎಂ ಕಾಲೇಜಿನ ಎಎಲ್ಎನ್ ರಾವ್ ಕ್ರೀಡಾಂಗಣದಲ್ಲಿ ಪಂದ್ಯಾಟಗಳನ್ನು ನಡೆಸಲಾಗುತ್ತಿದೆ. ಪುರುಷರ ಕ್ರಿಕೆಟ್ ಪಂದ್ಯಾಟವನ್ನು ಇದೇ ಪ್ರಥಮ ಬಾರಿಗೆ ಹೊನಲು ಬೆಳಕಿನಲ್ಲಿ ನಡೆಸಲಾಗುತ್ತಿದೆ ಎಂದರು.ಪಂದ್ಯಾಕೂಟವನ್ನು ಮಾ.1ರ ಸಂಜೆ 4 ಗಂಟೆಗೆ ಸುಪ್ರೀಂ ಕೋರ್ಟಿನ ನ್ಯಾಯಾಧೀಶೆ ನ್ಯಾ. ಬಿ.ವಿ.ನಾಗರತ್ನ ಉದ್ಘಾಟಿಸಲಿದ್ದಾರೆ. ಕರ್ನಾಟಕ ಹೈಕೋರ್ಟಿನ ನ್ಯಾಯಾಲಯದ ಮುಖ್ಯ ನ್ಯಾಯಧೀಶ ನ್ಯಾ.ಎನ್.ವಿ. ಅಂಜಾರಿಯಾ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ನ್ಯಾ. ಇ.ಎಸ್.ಇಂದಿರೇಶ್, ಕರ್ನಾಟಕ ಹೈಕೋರ್ಟಿನ ನ್ಯಾಯಾಧೀಶ ನ್ಯಾ.ರಾಜೇಶ್ ರೈ ಕೆ., ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಉಪಸ್ಥಿತರಿರಲಿದ್ದಾರೆ ಎಂದರು.ಮಾ.2ರ ಸಂಜೆ 7 ಗಂಟೆಗೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ನ ಸದಸ್ಯ ಪಿ.ಪಿ. ಹೆಗ್ಡೆ ಸಮಾರೋಪ ಭಾಷಣ ಮಾಡಲಿರುವರು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಲಿರುವರು. ಶಾಸಕ ಯಶ್ಪಾಲ್ ಸುವರ್ಣ ಅತಿಥಿಯಾಗಿ ಭಾಗವಹಿಸಲಿರುವರು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಂದ್ಯಾಕೂಟದ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಸುದ್ದಿಗೋಷ್ಟಿಯಲ್ಲಿ ಉಡುಪಿಯ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಿಕ ದಂಡಾಧಿಕಾರಿ ಸಂತೋಷ್ ಶ್ರೀವತ್ಸ, ಹಿರಿಯ ನ್ಯಾಯವಾದಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ ಎ.ಆರ್., ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕ್ರೀಡಾ ಕಾರ್ಯದರ್ಶಿ ಸುಮಿತ್ ಎಸ್. ಹೆಗ್ಡೆ, ಖಜಾಂಚಿ ಗಂಗಾಧರ ಎಚ್.ಎಂ., ಜಂಟಿ ಕಾರ್ಯದರ್ಶಿ ರವೀಂದ್ರ ಬೈಲೂರು, ವಿವಿಧ ಉಪಸಮಿತಿಗಳ ಸಂಚಾಲಕರಾದ ದಿವಾಕರ್ ಎಂ. ಶೆಟ್ಟಿ, ಕೆ.ಆರ್. ರಾಮಚಂದ್ರ ಅಡಿಗ, ಬಿ. ನಾಗರಾಜ್, ಪ್ರವೀಣ್ ಎಂ. ಪೂಜಾರಿ, ಆರೂರ್ ಸುಕೇಶ್ ಶೆಟ್ಟಿ, ಅಸಾದುಲ್ಲಾ ಕಟಪಾಡಿ, ಗಣೇಶ್ ಕುಮಾರ್ ಮಟ್ಟು, ಪಂದ್ಯಾಟದ ಉಸ್ತುವಾರಿಗಳಾದ ಸಚಿನ್ ಕುಮಾರ್ ಶೆಟ್ಟಿ, ಗಂಗಾಧರ ಶೇರಿಗಾರ್, ಯೋಗಿಶ್ ಕುಮಾರ್ ಸಾಲಿಗ್ರಾಮ, ಸ್ಯಾಂಡ್ರಾ ಆ್ಯನ್ಸಿಲ್ಲಾ ಡಿಸೋಜಾ ಉಪಸ್ಥಿತರಿದ್ದರು.