ದಾವಣಗೆರೆಯಲ್ಲಿ ಜ.4, 5 ರಂದು ರಾಜ್ಯಮಟ್ಟದ ಯುವಜನೋತ್ಸವ

| Published : Dec 22 2024, 01:34 AM IST

ಸಾರಾಂಶ

ದಾವಣಗೆರೆ: ಯುವ ಜನಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು 2025 ರ ಜನವರಿ 4 ಮತ್ತು 5 ದಾವಣಗೆರೆ ನಗರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ದಾವಣಗೆರೆ: ಯುವ ಜನಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು 2025 ರ ಜನವರಿ 4 ಮತ್ತು 5 ದಾವಣಗೆರೆ ನಗರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನಡೆದ ಯುವಜನೋತ್ಸವ ಕಾರ್ಯಕ್ರಮ ಸಂಬಂಧಿಸಿದಂತೆ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಮಟ್ಟದ ಕಾರ್ಯಕ್ರಮ ಇದಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಯುವ ಸ್ಪರ್ಧಾಳುಗಳು ಭಾಗವಹಿಸುವರು. ಈ ಸ್ಪರ್ಧೆಯಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ವಿಜ್ಞಾನ ವಸ್ತು ಪ್ರದರ್ಶನ, ಕವನ ರಚನೆ, ಪ್ರಬಂಧ, ಕಥೆ ಬರೆಯುವುದು, ಚಿತ್ರಕಲೆ, ಘೋಷಣ ಸ್ಪರ್ಧೆಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು. ನಗರದ ಬಿಐಇಟಿ ಕಾಲೇಜಿನ ಎಸ್.ಎಸ್.ಎಂ ಸಾಂಸ್ಕೃತಿಕ ಭವನ, ಬಾಪೂಜಿ ಎಂ.ಬಿ.ಎ ಕಾಲೇಜು ಸಭಾಂಗಣ, ಎಂಬಿಎ ಮೈದಾನದ ಎಸ್.ಎಸ್.ನ್ಯಾಷನಲ್ ಪಬ್ಲಿಕ್ ಸ್ಕೂಲ್, ಎಂ.ಬಿ.ಎ ಕಾಲೇಜಿನ ಕೊಠಡಿ, ಲಲಿತ ಕಲಾ ಮಹಾವಿದ್ಯಾಲಯ ಸೇರಿದಂತೆ ಎಂಬಿಎ ಮೈದಾನದಲ್ಲಿ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು. ರಾಜ್ಯ ಮಟ್ಟದ ಯುವಜನೋತ್ಸವವನ್ನು ಅದ್ಧೂರಿಯಾಗಿ ನಡೆಸಲು ಸಿದ್ಧತೆಗಾಗಿ ವೇದಿಕೆ, ಸಾಂಸ್ಕೃತಿಕ, ಸಾರಿಗೆ, ಪ್ರಚಾರ, ವಸತಿ, ಸ್ವಾಗತ, ನೋಂದಣಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲಾ ಸಮಿತಿಗಳು ಸಿದ್ಧತೆ ನಡೆಸಿದ್ದು, ಆದಷ್ಟು ಬೇಗ ಕಾರ್ಯಕ್ರಮದ ಲಾಂಛನವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು. ರಾಜ್ಯ ಮಟ್ಟದ ಕಾರ್ಯಕ್ರಮ ಇದಾಗಿರುವುದರಿಂದ ಶಿಷ್ಟಾಚಾರದನ್ವಯ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ದಾವಣಗೆರೆ ನಾಗರಿಕರು ಕಾರ್ಯಕ್ರಮ ವೀಕ್ಷಣೆಗಾಗಿ ನಗರ ಸಾರಿಗೆಯಿಂದ ಬಸ್ ವ್ಯವಸ್ಥೆಯನ್ನು ಕೈಗೊಳ್ಳಲಾಗುತ್ತದೆ ಎಂದರು. ಸಭೆಯಲ್ಲಿ ಜಿಪಂ ಸಿಇಒ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.