ಕನ್ನಡಪ್ರಭ ವಾರ್ತೆ, ತುಮಕೂರುಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ ೧೮ ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ತೆರವುಗೊಳಿಸುವ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸ್ತುತ ಸಾರ್ವಜನಿಕ ಆಸ್ಪತ್ರೆ ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾದ ಆಸ್ಪತ್ರೆಯಾಗಿದ್ದು, ಅತ್ಯಾಧುನಿಕ ಸೌಲಭ್ಯಗಳ ಆಸ್ಪತ್ರೆ ನಿರ್ಮಿಸುವಂತೆ ಸಾರ್ವಜನಿಕರಿಂದ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಇದೇ ಜಾಗದಲ್ಲಿ ಜಿಲ್ಲಾ ಆಸ್ಪತ್ರೆಯನ್ನು 131ಕೋಟಿ ರು. ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಲಿದ್ದು, ಮುಂದಿನ 18 ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು. 18 ತಿಂಗಳಿಗೆ ಮುನ್ನವೇ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದ ಅವರು, ಪಾರಂಪರಿಕ ಆಸ್ಪತ್ರೆ ಕಟ್ಟಡದ ಕಲ್ಲುಗಳನ್ನು ಹಾಗೂ ಇತರ ಸಾಮಗ್ರಿಗಳನ್ನು ಅತ್ಯಂತ ಜತನದಿಂದ ಬಳಸಿಕೊಳ್ಳುವಂತೆ ಈ ಹಿಂದೆ ಸಮಗ್ರವಾಗಿ ಯೋಚಿಸಿ ತೀರ್ಮಾನಿಸಲಾಗಿದೆ. ಹಿಂದಿನ ಕಲ್ಲುಗಳನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸೂರಜ್‌ಗೆ ಸಂತಾಪ: ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸೂರಜ್ ಹೆಗಡೆ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತೀವ್ರ ಸಂತಾಪ ವ್ಯಕ್ತಪಡಿಸಿದರು. ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಕ್ರಿಯಾಶೀಲರಾಗಿದ್ದ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದ ಅವರು ಭವಿಷ್ಯದ ಭರವಸೆಯಾಗಿದ್ದರು. ಅವರ ನಿಧನದ ಸುದ್ದಿ ತುಂಬಾ ನೋವು ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಸಂತಾಪ ವ್ಯಕ್ತಪಡಿಸಿದರು.