ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸಾಗರ ತಾಲೂಕಿನ ಬೇಸೂರು ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ರಾಜ್ಯ ಸರ್ಕಾರ ಅಲ್ಲಿ ಅಣುಸ್ಥಾವರ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರಕ್ಕೆ ಪತ್ರ ಬರೆದಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರ ಸರ್ಕಾರ ಬೇಸೂರು ಗ್ರಾಮದಲ್ಲಿ ಅಣು ಸ್ಥಾವರ ಸ್ಥಾಪನೆ ಸಂಬಂಧ ಸಮೀಕ್ಷೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಯೋಜನೆ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ರೈತರು ನೆಲೆ ಕಳೆದುಕೊಳ್ಳುವ ಭೀತಿಯಿಂದ ತೀವ್ರ ಹೋರಾಟ ನಡೆಸಿದ್ದರು. ಹೋರಾಟದಲ್ಲಿ ತಾವು ಭಾಗವಹಿಸಿ ಜನರ ಪರವಾಗಿ ನಿಂತಿದ್ದೆ. ಯಾವುದೇ ಕಾರಣಕ್ಕೂ ಈ ಯೋಜನೆಗೆ ಸಹಮತವಿಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದೆ ಎಂದರು.
ಯಾವುದೇ ಕಾರಣಕ್ಕೂ ಮಲೆನಾಡಿಗೆ ಅಣು ಸ್ಥಾವರ ಯೋಜನೆ ಬೇಡ ಎಂದು ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ,ನಾನು ಸೇರಿದಂತೆ ಜನಪ್ರತಿನಿಧಿಗಳ ನಿಯೋಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಒತ್ತಡ ಹಾಕಿದ್ದೇವು. ಅಲ್ಲದೇ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಸರ್ಕಾರ, ಕರ್ನಾಟಕದ ಯಾವುದೇ ಭಾಗದಲ್ಲೂ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಅವಕಾಶ ಇಲ್ಲ ಎಂದು ನಿರ್ಧರಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಹೀಗಾಗಿ ಬೇಸೂರು ಗ್ರಾಮದ ಜನರು ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತ ಪ್ರಶ್ನೆಗೆ, ಈಗ ಹೊಸದಾಗಿ ಜಲಾಶಯ ಕಟ್ಟಲು ಆಗುವುದಿಲ್ಲ. ಆದರೆ ಪ್ರಸ್ತುತ ಲಭ್ಯವಿರುವ ನೀರಿನಲ್ಲೇ ೨,೦೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಅವಕಾಶ ಇರುವುದರಿಂದ ಈ ಯೋಜನೆ ಮುಂದುವರಿಯಲಿದೆ. ಪರಿಸರ ಹಾನಿ ತಪ್ಪಿಸಲು ಸಂರಕ್ಷಣೆಗೆ ಪರ್ಯಾಯ ಜಾಗ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕಳೆದ ಒಂದು ವಾರದಲ್ಲಿ ಉತ್ತಮ ಮಳೆಯಾಗಿದೆ. ಬರಗಾಲದ ಆತಂಕವಿತ್ತು. ಇನ್ನು ಹೆಚ್ಚಿನ ಮಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.ನೀರಿಲ್ಲದ ಕಾರಣ ಹಸಿರುಮಕ್ಕಿ ಲಾಂಚ್ ಸ್ಥಗಿತಗೊಳಿಸಲಾಗಿತ್ತು. ಈಗ ಆರಂಭವಾಗಿದೆ.ಅಲ್ಲಿನ ಸೇತುವೆ ಕಾಮಗಾರಿ ಮುಗಿದಿದೆ. ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು.ಅಲ್ಲದೇ ಮುಪ್ಪಾನೆಯಲ್ಲಿ ರಾಜ್ಯ ಸರ್ಕಾರದಿಂದ ಹೊಸ ಸೇತುವೆ ಕಾಮಗಾರಿ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಶ್ರೀಕಾಂತ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ರಮೇಶ್ ಶಂಕರಘಟ್ಟ, ಪ್ರಮುಖರಾದ ಶಿ.ಜು.ಪಾಶಾ, ಹುಲ್ತಿಕೊಪ್ಪ ಶ್ರೀಧರ್ ಉಪಸ್ಥಿತರಿದ್ದರು.
------------------ಪೊಟೋ: 09ಎಸ್ಎಂಜಿಎಕೆಪಿ05
ಶಿವಮೊಗ್ಗದ ಪತ್ರಿಕಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿದರು.