ಪೌರಕಾರ್ಮಿಕರು ತಂಬಾಕು, ಮದ್ಯಪಾನ ಸೇವನೆ, ದುಶ್ಚಟಗಳಿಂದ ದೂರವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಪುರಸಭೆ ಹಾಗೂ ಆರೋಗ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪೌರ ಕಾರ್ಮಿಕರು ತಂಬಾಕು, ಮದ್ಯಪಾನ ಸೇವನೆಯಂತಹ ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸಲಹೆ ನೀಡಿದರು.ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ ಹಾಗೂ ಪುರಸಭೆ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಪೌರಕಾರ್ಮಿಕರಿಗೆ ತಂಬಾಕು ಸೇವನೆಯಿಂದ ಉಂಟಾಗುವ ಬಾಯಿಯ ರೋಗಗಳು ಕುರಿತು ಜಾಗೃತಿ ಹಾಗೂ ಬಾಯಿ, ದಂತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಪೌರಕಾರ್ಮಿಕರು ತಂಬಾಕು, ಮದ್ಯಪಾನ ಸೇವನೆ, ದುಶ್ಚಟಗಳಿಂದ ದೂರವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಪುರಸಭೆ ಹಾಗೂ ಆರೋಗ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ..ಸಿ.ಎಂ.ಶ್ರೀಧರ್ ಮಾತನಾಡಿ, ಪೌರಕಾರ್ಮಿಕರು ತಮ್ಮ ಕುಟುಂಬದ ಎಲ್ಲಾ ಸದಸ್ಯರೊಂದಿಗೆ ಶಿಬಿರಕ್ಕೆ ಆಗಮಿಸಿ, ಯಾವುದೇ ಮುಜುಗರವಿಲ್ಲದೆ ಬಾಯಿ ಹಾಗೂ ದಂತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆ ತ್ಯಜಿಸಿ ಸೂಕ್ತ ಆಪ್ತ ಸಮಾಲೋಚನೆ ಪಡೆದು ಉತ್ತಮ ಆರೋಗ್ಯ ಹೊಂದಬೇಕು ಎಂದು ಕರೆ ನೀಡಿದರು.
ಹಿರಿಯ ದಂತ ವೈದ್ಯಾಧಿಕಾರಿ ಡಾ.ಜೆ.ಡಿ ಸ್ಮಿತ ಮಾತನಾಡಿ, ಬಾಯಿಯು ಸಂಪೂರ್ಣ ದೈಹಿಕ ಆರೋಗ್ಯದ ಕೈಗನ್ನಡಿಯಾಗಿದೆ. ಬಾಯಿಯನ್ನು ಪರೀಕ್ಷಿಸಿದರೆ ದೇಹದ ಇತರೆ ಸಮಸ್ಯೆಗಳಾದ ರಕ್ತ ಹೀನತೆ, ಸೋಂಕು, ಕ್ಯಾನ್ಸರ್ ನಂತಹ ರೋಗಗಳನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಬಹುದು. ಅಲ್ಲದೆ ಮನುಷ್ಯರಿಗೆ ದೈನಂದಿನ ಆಹಾರ ಸೇವನೆಯಲ್ಲಿ ಹಲ್ಲುಗಳು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ದಂತ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯ ಎಂದರು.ಆಪ್ತ ಸಮಾಲೋಚಕಿ ಮಿಲನ ಎ.ಎಲ್ ವ್ಯಸನಕ್ಕೆ ಒಳಗಾದವರಿಗೆ ಆಪ್ತ ಸಮಾಲೋಚನೆ ಮೂಲಕ ವ್ಯಸನ ಮುಕ್ತರಾಗಲು ಸಲಹೆ ನೀಡಿದರು. ಶಿಬಿರದಲ್ಲಿ ದಂತ ವೈದ್ಯಾಧಿಕಾರಿ ಡಾ.ಸ್ಮಿತಾ ಜೆ ಡಿ, ಡಾ.ಅರುಣ್ ಕುಮಾರ್ ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪುರಸಭೆ ಆರೋಗ್ಯ ನಿರೀಕ್ಷಕ ದರ್ಶನ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ, ಪ್ರಭಾರ ತಾಲೂಕು ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ ಬಿ.ಮಂಗಳ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎಸ್.ಸಿ ವಾಣಿ, ಲಲಿತಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಪಿ ಪಣಿಂದ್ರ, ಸ್ನೇಹ, ಮೇಘನಾ, ಟಿಬಿಎಚ್ವಿ ಪ್ರಭಾಕರ, ಆಶಾ ಕಾರ್ಯಕರ್ತೆ ಮೀನಾ, ಚಾಂದಿನಿ, ಹೇಮಾವತಿ ಸೇರಿದಂತೆ ಇತರರು ಇದ್ದರು.