ದುಶ್ಚಟದಿಂದ ದೂರವಿದ್ದು, ಭವಿಷ್ಯ ಕಟ್ಟಿಕೊಳ್ಳಿ: ನ್ಯಾಯಾಧೀಶೆ ಡಿ.ಕೆ.ವೇಲಾ

| Published : Jun 01 2025, 04:15 AM IST

ಸಾರಾಂಶ

ವಿದ್ಯಾರ್ಥಿ, ಯುವ ಜನರು ದುಶ್ಚಟಗಳಿಗೆ ಬಲಿಯಾಗದೇ, ಓದಿನ ಕಡೆಗೆ ಗಮನ ಕೇಂದ್ರೀಕರಿಸಿ, ಓದುವುದು ಸೇರಿದಂತೆ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಂಡು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಡಿ.ಕೆ.ವೇಲಾ ಕರೆ ನೀಡಿದರು.

ವಿಶ್ವ ತಂಬಾಕು ರಹಿತ ದಿನ । ‘ಆಕರ್ಷಕ ಉತ್ಪನ್ನ: ಕರಾಳ ಉದ್ದೇಶ’ ಘೋಷವಾಕ್ಯ

ಕನ್ನಡಪ್ರಭ ವಾರ್ತೆ ದಾವಣಗೆರೆ

ವಿದ್ಯಾರ್ಥಿ, ಯುವ ಜನರು ದುಶ್ಚಟಗಳಿಗೆ ಬಲಿಯಾಗದೇ, ಓದಿನ ಕಡೆಗೆ ಗಮನ ಕೇಂದ್ರೀಕರಿಸಿ, ಓದುವುದು ಸೇರಿದಂತೆ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಂಡು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಡಿ.ಕೆ.ವೇಲಾ ಕರೆ ನೀಡಿದರು.

ನಗರದ ಹೊರ ವಲಯದ ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ತಪೋವನ ಸ್ಕೂಲ್ ಆಫ್ ನರ್ಸಿಂಗ್‌ನಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಹಮ್ಮಿಕೊಂಡಿದ್ದ ಆಕರ್ಷಕ ಉತ್ಪನ್ನಗಳು: ಕರಾಳ ಉದ್ದೇಶಗಳು ಘೋಷವಾಕ್ಯದೊಂದಿಗೆ ಶನಿವಾರ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಯುವ ಜನತೆ ಹೆಚ್ಚಾಗಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇದು ಸ್ಪರ್ಧಾತ್ಮಕ ಯುಗವಾಗಿದ್ದು, ಇಂತಹ ಯುಗದಲ್ಲಿ ದುಶ್ಚಟಗಳಿಗೆ ಬಲಿಯಾದರೆ ತಮ್ಮ ಪಾಲಕರ ಆಸೆ, ಆಕಾಂಕ್ಷೆಗಳನ್ನು ಈಡೇರಿಸಲು ಹಾಗೂ ನಮ್ಮ ಗುರಿ ತಲುಪಲು ಸಾಧ್ಯವಿಲ್ಲವೆಂಬುದನ್ನು ವಿದ್ಯಾರ್ಥಿ, ಯುವ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಓದುವ ಹವ್ಯಾಸಗಳಿಂದ ಮಾನಸಿಕ ಭೌದ್ದಿಕ ಬುದ್ಧಿಮತ್ತೆ ಬೆಳವಣಿಗೆಯಾಗುತ್ತದೆ. ಮಾನವ ಜೀವನ ಅಮೂಲ್ಯವಾದುದು. ಪುನಾ ಇಂತಹ ಜೀವನ ಸಿಗುವುದಿಲ್ಲ. ಆದ್ದರಿಂದ ಸಮಯವನ್ನು ಸರಿಯಾದ ರೀತಿ ಬಳಸಿಕೊಂಡು ಉತ್ತಮ ಜೀವನ ಕಂಡುಕೊಳ್ಳಬೇಕು ಎಂದು ಹೇಳಿದರು.

ತಂಬಾಕು, ಗುಟ್ಕಾ, ಧೂಮಪಾನ, ಮದ್ಯಪಾನದಂತಹ, ಮಾದಕ ವಸ್ತುಗಳ ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಜೀವನ ಶೈಲಿಯನ್ನು ಆಯ್ಕೆ ಮಾಡಿಕೊಳ್ಳುವ ಜತೆಗೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಮಾತನಾಡಿ, ಸರ್ಕಾರವು ತಂಬಾಕು ಬಳಕೆ, ಸೇವನೆ ನಿಯಂತ್ರಿಸಲು ಕೋಟ್ಪಾ ಕಾಯ್ದೆಯಡಿ ಹಲವು ಕಾನೂನು ರೂಪಿಸಿದೆ. ತಂಬಾಕು ನಿಯಂತ್ರಿಸುವಲ್ಲಿ ನಾಗರೀಕರಾಗಿ ನಮ್ಮ ಜವಾಬ್ದಾರಿಯೂ ಅಗತ್ಯವಾಗಿದೆ. ನಿಸರ್ಗದಲ್ಲಿ ಕಾನೂನು ಉಲ್ಲಂಘನೆ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ ತಂಬಾಕು ನಿಯಂತ್ರಣ ಕುರಿತು ಭಿತ್ತಿಪತ್ರ ಬಿಡುಗಡೆಗೊಳಿಸಿದರು. ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ತಂಬಾಕು ನಿಯಂತ್ರಣ ಕುರಿತು ಕಿರು ನಾಟಕ ಪ್ರದರ್ಶಿಸಲಾಯಿತು.

ಜಿಪಂ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್, ತಂಬಾಕು ನಿಯಂತ್ರಣಕೋಶ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ತಂಬಾಕು ನಿಯಂತ್ರಣ ಕೋಶದ ಕಾರ್ಯದರ್ಶಿ ಡಾ.ಎಸ್.ಷಣ್ಮುಖಪ್ಪ, ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಪ್ರಾಂಶುಪಾಲೆ ಡಾ.ಸುಮನಾ ಭಟ್, ಡಾ.ಶಶಿಕುಮಾರ್ ವಿ. ಮೆಹರವಾಡೆ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಪ್ರತಿ ವರ್ಷ ತಂಬಾಕು ಉತ್ಪನ್ನಗಳ ಬಳಕೆ ಮತ್ತು ಸೇವನೆಯಿಂದ 8 ಮಿಲಿಯನ್ ಜನ ಸಾವನ್ನಪ್ಪುತ್ತಿದ್ದಾರೆ. ಈಚೆಗೆ ಕೇವಲ ಪುರುಷರಷ್ಟೇ ಅಲ್ಲಾ ಮಹಿಳೆಯರು ಕೂಡ ಇಂತಹ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಪ್ರತಿಯೊಬ್ಬರೂ ತಂಬಾಕು ನಿಯಂತ್ರಣ ಕುರಿತು ಸಾರ್ವಜನಿಕವಾಗಿ ಮತ್ತಷ್ಟು ಜಾಗೃತಿ ಮೂಡಿಸಿ ಉತ್ತಮ, ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು.

ಮಹಾವೀರ ಮ.ಕರೆಣ್ಣವರ, ಹಿರಿಯ ಸಿವಿಲ್ ನ್ಯಾಯಾಧೀಶ.